
ಬೆಂಗಳೂರು: ಲೋಕಾಯುಕ್ತ ಎಸ್.ಐ.ಟಿ ಮುಖ್ಯಸ್ಥರಿಗೆ ಬೆದರಿಕೆ ಹಾಕಿದ ಆರೋಪದ ಮೇರೆಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧದ ಎಫ್.ಐ.ಆರ್.ಗೆ ತಡೆಯಾಜ್ಞೆ ಇರುವಾಗ ಅದೇ ಆರೋಪದಲ್ಲಿಈಗಾಗಲೇ ಮಂಜೂರಾಗಿದ್ದ ನಿರೀಕ್ಷಣಾ ಜಾಮೀನು ರದ್ದತಿ ಕೋರಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.

j3tvkannada
ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಅಕ್ರಮವಾಗಿ 550 ಎಕರೆ ಜಮೀನನ್ನು ಗಣಿಗಾರಿಕೆಗೆ ನೀಡಿದ ಆರೋಪ ಸಂಬಂಧ ಮಂಜೂರಾಗಿರುವ ನಿರೀಕ್ಷಣಾ ಜಾಮೀನು ರದ್ದು ಕೋರಿ ಲೋಕಾಯುಕ್ತ ಪೊಲೀಸರು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಮನವಿ ಅಮಾನತಿನಲ್ಲಿಡಬೇಕು ಎಂದು ಕೋರಿ ಕುಮಾರಸ್ವಾಮಿ ಅರ್ಜಿ ಸಲ್ಲಿಸಿದ್ದಾರೆ. ಆ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರಿದ್ದ ರಜಾ ಕಾಲದ ಏಕಸದಸ್ಯ ಪೀಠ, ಈ ಸ್ಪಷ್ಟನೆ ನೀಡಿದೆ. ಅಲ್ಲದೆ, ಈ ಸಂಬಂಧ ವಿಚಾರಣಾ ನ್ಯಾಯಾಲಯವೇ ಸೂಕ್ತ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದೆ.
ವಾದ-ಪ್ರತಿವಾದ ಆಲಿಸಿದ ಪೀಠ, ಬೆದರಿಕೆ ಆರೋಪ ಸಂಬಂಧದ ಎಫ್.ಐ.ಆರ್.ಗೆ ತಡೆಯಿದೆ. ಆ ಪ್ರಕರಣ ಇತ್ಯರ್ಥವಾಗುವವರೆಗೂ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಲು ಅವಕಾಶವಿಲ್ಲ, ಎಂದು ಆದೇಶಿಸಿದೆ. ಅಲ್ಲದೆ, ಜಮೀನು ಮಂಜೂರು ಮಾಡಿದ ಪ್ರಕರಣ ದಾಖಲಾಗಿ ಹಲವು ವರ್ಷ ಕಳೆದರೂ ಏಕೆ ಆರೋಪ ಪಟ್ಟಿ ಸಲ್ಲಿಸಿಲ್ಲ. ಅಲ್ಲದೆ, ರಾಜ್ಯಪಾಲರು ಅನುಮತಿ ನೀಡಿಲ್ಲದ ಕುರಿತ ಸುಬ್ರಹ್ಮಣ್ಯಸ್ವಾಮಿ ವಿರುದ್ಧದ ಮನಮೋಹನ್ ಸಿಂಗ್ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಆದೇಶವಿದ್ದರೂ ಅದನ್ನು ಏಕೆ ಪಾಲಿಸಿಲ್ಲ. ಎಲ್ಲ ಪ್ರಕರಣಗಳಲ್ಲಿ ಸುಪ್ರೀಂಕೋರ್ಟ್ಗೆ ಹೋಗುತ್ತೀರಿ. ಇಲ್ಲಿ ಏಕೆ ಹೋಗಿಲ್ಲ ಎಂದು ನ್ಯಾಯಪೀಠ ಮೌಖಿಕವಾಗಿ ಪ್ರಶ್ನಿಸಿ ಅರ್ಜಿ ಇತ್ಯರ್ಥಪಡಿಸಿತು.
ಅರ್ಜಿದಾರರ ಪರ ವಕೀಲರು, ಶ್ರೀ ಸಾಯಿ ಮಿನರಲ್ಸ್ ಅಕ್ರಮವಾಗಿ ಗಣಿ ಗುತ್ತಿಗೆ ನೀಡಿದ ಪ್ರಕರಣದಲ್ಲಿ ಷರತ್ತುಗಳನ್ವಯ ನಿರೀಕ್ಷಣಾ ಜಾಮೀನು ಮಂಜೂರು ಮಾಡಲಾಗಿದೆ. ಈ ಷರತ್ತುಗಳನ್ನು ಉಲ್ಲಂಘಿಸಿ ಅರ್ಜಿದಾರ ಆರೋಪಿ ತನಿಖಾಧಿಕಾರಿಯ ವಿರುದ್ಧ ಆರೋಪ ಮಾಡಿದ್ದು, ಬೆದರಿಕೆ ಹಾಕಿದ್ದಾರೆಂಬ ಆರೋಪವಿದೆ. ಆದರೆ, ಬೆದರಿಕೆ ಹಾಕಿದ ಆರೋಪ ಸಂಬಂಧ ಅರ್ಜಿದಾರರ ವಿರುದ್ಧ ಎಫ್.ಐ.ಆರ್. ದಾಖಲಾಗಿದ್ದು, ಅದಕ್ಕೆ ಹೈಕೋರ್ಟ್ನ ಮತ್ತೊಂದು ಪೀಠ ತಡೆ ನೀಡಿದೆ, ಎಂದರು. ಅಲ್ಲದೆ, ತನಿಖಾ ಮುಖ್ಯಸ್ಥರಿಗೆ ಬೆದರಿಕೆ ಹಾಕುವ ಮೂಲಕ ನಿರೀಕ್ಷಣಾ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿರುವ ಷರತ್ತುಗಳನ್ನು ಉಲ್ಲಂಘಿಸಿದ ಆರೋಪದಲ್ಲಿ ನಿರೀಕ್ಷಣಾ ಜಾಮೀನು ರದ್ದು ಕೋರಿ ವಿಚಾರಣಾ ನ್ಯಾಯಾಲಯಕ್ಕೆ ಮನವಿ ಮಾಡಲಾಗಿದೆ. ಆದರೆ, ಇದೇ ಆರೋಪದ ಎಫ್.ಐ.ಆರ್.ಗೆ ತಡೆಯಿರುವ ಸಂದರ್ಭದಲ್ಲಿ ನಿರೀಕ್ಷಣಾ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲು ಅವಕಾಶವಿಲ್ಲ, ಎಂದು ನ್ಯಾಯಪೀಠಕ್ಕೆ ತಿಳಿಸಿದರು.