
ಚಿತ್ರದುರ್ಗ: ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಣೆಕಟ್ಟು, ಜಲಾಶಯಗಳಿಗೆ ಭದ್ರತೆ ಒಸಗಿಸಲು ಸೂಚನೆ ನೀಡಿದ್ದಾರೆ. ಭಾರತ-ಪಾಕಿಸ್ಥಾನ ಮಧ್ಯೆ ಯುದ್ಧದ ಕಾರ್ಮೋಡ ಕವಿದಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯ ವಾಣಿವಿಲಾಸ ಸಾಗರ ಜಲಾಶಯಕ್ಕೆ ಭದ್ರತೆ ಒದಗಿಸಲು ಪೊಲೀಸ್ ಇಲಾಖೆಗೆ ವಿಶ್ವೇಶ್ವರಯ್ಯ ಜಲ ನಿಗಮದಿಂದ ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ.

j3tvkannada
ಈಗಾಗಲೇ ಸಾರ್ವಜನಿಕರು ಪ್ರವೇಶಿಸುವ ಗೇಟ್ ಬಂದ್ ಮಾಡಿ, ದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಜಲಾಶಯದ ಭದ್ರತೆಗಾಗಿ ಪ್ರವೇಶ ನಿಷೇಧಿಸಲಾಗಿದೆ ಎಂದು ಬೋರ್ಡ್ ಹಾಕಲಾಗಿದೆ. ವಿಐಪಿ ಗೇಟ್ ಸೇರಿದಂತೆ ಎಲ್ಲವನ್ನೂ ಬಂದ್ ಮಾಡಿ, ಇಡೀ ಜಲಾಶಯಕ್ಕೆ ಭದ್ರತೆ ಒದಗಿಸಲು ಚಿಂತನೆ ನಡೆಸಲಾಗಿದೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ಪ್ರತಿಕ್ರಿಯಿಸಿದ್ದು, ಜಲಾಶಯಕ್ಕೆ ಭದ್ರತೆ ಒದಗಿಸಲು ಮನವಿ ಮಾಡಲಾಗಿದೆ. ಎಷ್ಟು ಸಿಬ್ಬಂದಿ ನಿಯೋಜನೆ ಮಾಡಬೇಕು ಎಂಬಿತ್ಯಾದಿ ಅಂಶಗಳನ್ನು ಪರಿಗಣಿಸಿ ಒಂದೆರಡು ದಿನಗಳಲ್ಲಿ ಸಂಪೂರ್ಣ ಭದ್ರತೆ ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.