
ಚಾಮರಾಜನಗರ: ಕೇಂದ್ರ ಗೃಹ ಸಚಿವಾಲಯದ ಸೂಚನೆಯಂತೆ ದೇಶದ ವಿವಿಧ ಪ್ರವಾಸಿ ತಾಣ, ದೇವಾಲಯಗಳಲ್ಲಿ ಪ್ರವಾಸಿಗರು, ಭಕ್ತರು, ಜನರನ್ನು ರಕ್ಷಣೆ ಮಾಡುವ ಅಣಕು ಪ್ರದರ್ಶನವನ್ನು ನಡೆಸಲಾಗುತ್ತಿದೆ. ಚಾಮರಾಜನಗರದಲ್ಲಿರುವ ಚಾಮರಾಜೇಶ್ವರ ದೇವಾಲಯದ ಆವರಣದಲ್ಲಿಯೂ ಮೇ 15ರಂದು ಅಣಕು ಪ್ರದರ್ಶನ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ. ಈ ಕುರಿತು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾಹಿತಿ ನೀಡಿದ್ದಾರೆ.
ತುರ್ತು ಸಂದರ್ಭದಲ್ಲಿ ನಾಗರೀಕರನ್ನು ಹಾಗೂ ಪ್ರಮುಖ ಸ್ಥಳಗಳನ್ನು ರಕ್ಷಣೆ ಮಾಡುವ ಆಪರೇಷನ್ ಅಭ್ಯಾಸ್ ಅಣಕು ಪ್ರದರ್ಶನವನ್ನು ಚಾಮರಾಜನಗರ ಪಟ್ಟಣದ ಚಾಮರಾಜೇಶ್ವರ ದೇವಸ್ಥಾನದ ಆವರಣದಲ್ಲಿ ಸಂಜೆ 4 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು. ನಾಗರೀಕರ ರಕ್ಷಣಾ ಕಾರ್ಯ ಚಟುವಟಿಕೆಗಳ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ಸಂಬಂಧ ಮಾಕ್ ಡ್ರಿಲ್ ಆಯೋಜನೆ ಕುರಿತು ಜಿಲ್ಲಾಧಿಕಾರಿಗಳು ವಿವಿಧ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆಯನ್ನು ಸಹ ನಡೆಸಿದ್ದಾರೆ.

j3tvkannada
ಮಾಕ್ ಡ್ರಿಲ್ ಕುರಿತು ಮಾಹಿತಿ
ತುರ್ತು ಸಂದರ್ಭ ಅವಘಡಗಳು ಸಂಭವಿಸಿದ ಸಮಯದಲ್ಲಿ ಜನರು ಗಾಬರಿ ಅಥವಾ ಆತಂಕಕ್ಕೆ ಒಳಗಾಗದಂತೆ ಆತ್ಮವಿಶ್ವಾಸ ತುಂಬಿ ಅರಿವು ಮೂಡಿಸುವ ಉದ್ದೇಶದಿಂದ ಅಣಕು ಪ್ರದರ್ಶನವನ್ನು ನಡೆಸಲಾಗುತ್ತದೆ. ಇದು ಅಣಕು ಕಾರ್ಯಾಚರಣೆ ಮಾತ್ರವಾಗಿದ್ದು ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ. ಜಿಲ್ಲಾಡಳಿತದೊಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಲಾಗಿದೆ. ಚಾಮರಾಜೇಶ್ವರ ದೇವಾಲಯದಲ್ಲಿ ಅಣಕು ಕಾರ್ಯಚರಣೆ ಪ್ರದರ್ಶನ ಕೈಗೊಂಡು ಜಾಗೃತಿ ಮೂಡಿಸಲಾಗುತ್ತದೆ. ಈ ಅಣಕು ಕಾರ್ಯಚರಣೆಗೆ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಹೋಂ ಗಾರ್ಡ್, ವೈದ್ಯಕೀಯ ತಂಡ, ಸಾರಿಗೆ ತಂಡ, ಕಂಟ್ರೋಲ್ ರೂಂ, ಇನ್ನಿತರ ತಂಡಗಳನ್ನು ರಚಿಸಲಾಗಿದ್ದು ಸಂಬಂಧಪಟ್ಟ ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ.
ತುರ್ತು ಸಂದರ್ಭದಲ್ಲಿ ನಾಗರೀಕರನ್ನು ರಕ್ಷಿಸುವ ವೇಳೆ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ, ಗಾಯಗೊಂಡವರಿಗೆ ಆಸ್ಪತ್ರೆಗೆ ದಾಖಲು ಮಾಡುವ ಬಗ್ಗೆ, ಪ್ರಥಮ ಚಿಕಿತ್ಸೆ, ಅಗ್ನಿಶಾಮಕ, ಪೊಲೀಸರು, ಇನ್ನಿತರ ಅಧಿಕಾರಿಗಳ ಕರ್ತವ್ಯ ಇನ್ನಿತರ ಕಾರ್ಯ ಚಟುವಟಿಕೆಗಳನ್ನು ಅಣಕು ಪ್ರದರ್ಶನದ ಮೂಲಕ ನಡೆಸಿ ಅರಿವು ಉಂಟು ಮಾಡಲಾಗುತ್ತದೆ. ಅಣಕು ಕಾರ್ಯಾಚರಣೆಗೆ ಪೂರಕವಾಗಿರುವ ಎಲ್ಲ ಸಿದ್ದತೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಕೈಗೊಳ್ಳಬೇಕು. ಅಗತ್ಯವಿರುವ ವಾಹನಗಳು, ಸಲಕರಣೆಗಳು, ಕಂಟ್ರೋಲ್ ರೂಂ, ಸಿಬ್ಬಂದಿ ನಿಯೋಜನೆ, ಆಂಬುಲೆನ್ಸ್ಗಳ ಕಾರ್ಯಚರಣೆ ಸೇರಿದಂತೆ ಎಲ್ಲವನ್ನು ಪರಿಪೂರ್ಣವಾಗಿ ಸಿದ್ದ ಮಾಡಿಕೊಂಡಿರಬೇಕು.
ಜನರ ರಕ್ಷಣೆಗೆ ಕೈಗೊಳ್ಳಲಾಗುವ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಮಾಕ್ ಡ್ರಿಲ್ ಮುಖಾಂತರ ತಿಳಿವಳಿಕೆ ನೀಡಬೇಕಿದೆ. ಈ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ಟಿ. ಕವಿತಾ ಮಾತನಾಡಿ ಅಣಕು ಕಾರ್ಯಚರಣೆ ಬಗ್ಗೆ ಮಾಹಿತಿ ನೀಡಿ ಜನರನ್ನು ಜಾಗೃತಗೊಳಿಸಬೇಕು. ಅವಘಡದ ಸಂದರ್ಭದಲ್ಲಿ ಹೇಗೆ ಕಾರ್ಯಚರಣೆ ಮಾಡಲಾಗುತ್ತದೆ. ಈ ಸಮಯದಲ್ಲಿ ಸಾರ್ವಜನಿಕರ ಪಾತ್ರ, ವಿವಿಧ ಇಲಾಖೆಗಳು ನಿರ್ವಹಿಸಬೇಕಿರುವ ಕರ್ತವ್ಯಗಳ ಬಗ್ಗೆ ಮನವರಿಕೆ ಮಾಡಿ ಆತ್ಮ ಸ್ತೈರ್ಯ ತುಂಬುವ ಕೆಲಸವನ್ನು ಮಾಡಬೇಕು ಎಂದು ಹೇಳಿದ್ದಾರೆ.