
ತುಮಕೂರು: ಜಿಲ್ಲೆಯ ಹೇಮಾವತಿ ನೀರನ್ನು ಮಾಗಡಿ, ರಾಮನಗರಕ್ಕೆ ಸಾಗಿಸುವುದನ್ನು ವಿರೋಧಿಸಿ ಹೋರಾಟ ಸಮಿತಿ ತೀವ್ರ ಪ್ರತಿಭಟನೆಗೆ ಕರೆ ನೀಡಿದೆ. ಜಿಲ್ಲೆಯ ನೀರನ್ನು ಉಳಿಸಿಕೊಳ್ಳಲು ಕಾನೂನು ಹೋರಾಟದೊಂದಿಗೆ, ಮೇ 31ರಂದು ಲಿಂಕ್ ಕೆನಾಲ್ ಕಾಮಗಾರಿ ಸ್ಥಳದಲ್ಲಿ ಬೃಹತ್ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಈ ಹೋರಾಟಕ್ಕೆ ಮಠಾಧೀಶರು ಹಾಗೂ ವಿವಿಧ ಪಕ್ಷಗಳ ಮುಖಂಡರು ಬೆಂಬಲ ಸೂಚಿಸಿದ್ದಾರೆ.

j3tvkannada.in
ಪಾವಗಡವನ್ನು ಹೊರತುಪಡಿಸಿ ಜಿಲ್ಲೆಯ ಎಲ್ಲಾ ತಾಲೂಕುಗಳೂ ಹೇಮಾವತಿ ನೀರನ್ನು ಅವಲಂಬಿಸಿವೆ. ಹೇಮಾವತಿ ನೀರಿಲ್ಲದಿದ್ದರೆ ಬರಡು ಪ್ರದೇಶವಾಗುತ್ತಿತ್ತು ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಹೇಳಿದರು. ನಗರದಲ್ಲಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಹೋರಾಟ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಕುಡಿಯುವ ನೀರಿನ ಯೋಜನೆಗಳಿಗೆ ಮಾರಕವಾಗಲಿರುವ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಯೋಜನೆ ವಿರುದ್ಧ ಜಿಲ್ಲೆಯಾದ್ಯಂತ ಜನರನ್ನು ಸಂಘಟಿಸಿ ಹೋರಾಟ ತೀವ್ರಗೊಳಿಸಲು ಹಾಗೂ ಇದರ ಜತೆಯಲ್ಲಿ ಕಾನೂನು ಹೋರಾಟ ಮಾಡಿ ಕೆನಾಲ್ ಕಾಮಗಾರಿಗೆ ತಡೆಯಾಜ್ಞೆ ತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಜಿಲ್ಲೆಯ ಪಾಲಿನ 19 ಟಿಎಂಸಿ ನೀರನ್ನು ಹೊರಗೆ ತೆಗೆದುಕೊಂಡು ಹೋಗಲು ಬಿಡಬಾರದು. ಅದಕ್ಕಾಗಿ ಯಾವ ರೀತಿಯ ಕಾನೂನು ಹೋರಾಟ ಮಾಡಬೇಕು, ಸರಕಾರದ ಮೇಲೆ ಒತ್ತಡ ಹೇರುವ ಕೆಲಸ ಮಾಡಬೇಕು. ಈ ಹೋರಾಟಕ್ಕೆ ಪಕ್ಷಭೇದವಿಲ್ಲದೆ ಎಲ್ಲರೂ ಬೆಂಬಲ ನೀಡಬೇಕು ಎಂದು ಕೋರಿದರು. ಶಾಸಕ ಎಂ.ಟಿ. ಕೃಷ್ಣಪ್ಪ ಮಾತನಾಡಿ, ನಮ್ಮ ಜಿಲ್ಲೆಗೆ ಹಂಚಿಕೆಯಾಗಿರುವ ಹೇಮಾವತಿ ನೀರನ್ನು ಎಕ್ಸ್ಪ್ರೆಸ್ ಕೆನಾಲ್ ಮೂಲಕ ದಬ್ಬಾಳಿಕೆ ಮಾಡಿ ಮಾಗಡಿ, ರಾಮನಗರ ಕಡೆ ತೆಗೆದುಕೊಂಡು ಹೋಗಲು ಬಿಡುವುದಿಲ್ಲ. ಅವೈಜ್ಞಾನಿಕ ಕೆನಾಲ್ ಯೋಜನೆ ಕಾಮಗಾರಿಯನ್ನು ಸರಕಾರ ಸ್ಥಗಿತಗೊಳಿಸಬೇಕು. ಇದರ ವಿರುದ್ಧ ಕಾನೂನು ಹೋರಾಟ, ಸಾಮಾಜಿಕ ಹೋರಾಟ ಮಾಡಿ ನಮ್ಮ ನೀರನ್ನು ನಾವು ಉಳಿಸಿಕೊಳ್ಳದಿದ್ದರೆ ನಮಗೆ ಉಳಿಗಾಲವಿಲ್ಲಎಂದರು.
ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾರ್ ಮಾತನಾಡಿ, ಈ ಹೋರಾಟಕ್ಕೆ ಜಿಲ್ಲಾ ಬಿಜೆಪಿಯ ಸಂಪೂರ್ಣ ಬೆಂಬಲವಿದೆ. ಹೋರಾಟದಲ್ಲಿ ಭಾಗವಹಿಸಿ ಬೆಂಬಲ ನೀಡುವಂತೆ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಪಕ್ಷ ನಾಯಕರಾದ ಆರ್.ಅಶೋಕ್ ಮತ್ತು ಛಲವಾದಿ ನಾರಾಯಣಸ್ವಾಮಿ ಅವರನ್ನು ಕೋರುವುದಾಗಿ ಹೇಳಿ, ಹೋರಾಟ ತೀವ್ರಗೊಳಿಸಲು ಪಕ್ಷದಿಂದ ಜನರ ಸಂಘಟನೆ ಮಾಡಲಾಗುತ್ತದೆ. ಇದೇ ವಿಚಾರವಾಗಿ ಈ ತಿಂಗಳ 28 ರಂದು ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಬಿಜೆಪಿ ಮುಖಂಡ ದಿಲೀಪ್ಕುಮಾರ್ ಮಾತನಾಡಿ, ಲಿಂಕ್ ಕೆನಾಲ್ ವಿರುದ್ಧ ಕಾನೂನು ಹೋರಾಟ ಅನಿವಾರ್ಯ. ಇದರ ಜತೆಗೆ ಜಿಲ್ಲೆ, ತಾಲೂಕು, ಹೋಬಳಿ, ಗ್ರಾಮಗಳ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ಜನಜಾಗೃತಿಗೊಳಿಸಿ ಹೋರಾಟ ತೀವ್ರಗೊಳಿಸಬೇಕು ಎಂದರು. ಹೋರಾಟ ಸಮಿತಿ ಸಂಚಾಲಕ ಪ್ರಭಾಕರ್ ಮಾತನಾಡಿ, ಲಿಂಕ್ ಕೆನಾಲ್ ವಿರುದ್ಧ ಹಲವು ಹಂತದ ಹೋರಾಟಗಳಾಗಿವೆ. ಸರಕಾರ ಪೊಲೀಸರನ್ನು ಬಳಸಿಕೊಂಡು ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ. ಇದರ ವಿರುದ್ಧ ಜಿಲ್ಲೆಯ ಜನರು ಸಂಘಟಿತರಾಗಿ ಹೋರಾಟಕ್ಕಿಳಿದರೆ ನಮ್ಮ ನೀರಿನ ಹಕ್ಕನ್ನು ಪಡೆಯಬಹುದು ಎಂದರು.
ವಿವಿಧ ಪಕ್ಷಗಳ ಮುಖಂಡರು, ರೈತ ಸಂಘ, ಹಲವು ಸಂಘಟನೆಗಳ ಪ್ರಮುಖರು ಸೇರಿದ್ದ ಸಭೆಯಲ್ಲಿಇದೇ 31ರಂದು ಲಿಂಕ್ ಕೆನಾಲ್ ಕಾಮಗಾರಿ ನಡೆಯುವ ಸ್ಥಳದಲ್ಲಿ ಐದು ಸಾವಿರ ಜನರನ್ನು ಸೇರಿಸಿ ಮುತ್ತಿಗೆ ಹಾಕುವ ಬೃಹತ್ ಹೋರಾಟ ನಡೆಸಲು ತೀರ್ಮಾನಿಸಲಾಯಿತು. ತೆವಡೆಹಳ್ಳಿ ಮಠದ ಗೋಸಲ ಚನ್ನಬಸವೇಶ್ವರ ಸ್ವಾಮೀಜಿ, ಕುಪ್ಪೂರು ಗದ್ದುಗೆ ಮಠದ ಅಭಿನವ ಮಲ್ಲಿಕಾರ್ಜುನ ಸ್ವಾಮೀಜಿ, ಗೊಲ್ಲಹಳ್ಳಿ ಮಠದ ವಿಭವ ವಿದ್ಯಾಶಂಕರ ಸ್ವಾಮೀಜಿ, ರೇವಣಸಿದ್ದೇಶ್ವರ ಮಠದ ಬಿಂದುಶೇಖರ ಒಡೆಯರ್ ಸ್ವಾಮೀಜಿ ಭಾಗವಹಿಸಿದ್ದರು. ಜಿಲ್ಲೆಯ ಪಾಲಿನ ಹೇಮಾವತಿ ನೀರನ್ನು ಉಳಿಸಿಕೊಳ್ಳಲು ಹೋರಾಟ ಸಮಿತಿ ರೂಪಿಸುವ ಯಾವುದೇ ರೀತಿಯ ಹೋರಾಟಕ್ಕೆ ಬೆಂಬಲ ನೀಡಿ ಭಾಗವಹಿಸುವುದಾಗಿ ಸ್ವಾಮೀಜಿಗಳು ಘೋಷಿಸಿದರು.