
ಚಿತ್ರದುರ್ಗ: ಜಿಲ್ಲೆಯಲ್ಲಿ ಖಾಸಗಿ ಶಾಲೆಗಳು ವಿಪರೀತ ಶುಲ್ಕ ಪಡೆಯುತ್ತಿರುವುದು, ಯೂನಿಫಾರಂ, ಟೈ, ಪುಸ್ತಕ ಹೀಗೆ ಪೋಷಕರನ್ನು ಸುಲಿಗೆ ಮಾಡಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತಂದಿಟ್ಟಿದ್ದು, ಈ ಬಗ್ಗೆ ಸರ್ಕಾರ ಕಠಿಣ ಕ್ರಮಕ್ಕೆ ಮುಂದಾಗಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಸೋಮವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಎದುರು ನೂರಾರು ಸಂಖ್ಯೆಯಲ್ಲಿ ಜಮಾಯಿಸಿ ಪ್ರತಿಭಟಿಸಿದರು.

ದಿನೇ ದಿನೇ ಖಾಸಗಿ ಶಾಲೆಗಳಿಗೆ ಹೋಗುವ ಮಕ್ಕಳ ಸಂಖ್ಯೆ ದುಪ್ಪಟ್ಟಾಗುತ್ತಿದೆ. ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಸಂಸ್ಥೆಗಳು ಬೇಕಾಬಿಟ್ಟಿ ಶುಲ್ಕ ವಸೂಲಿ ಮಾಡುತ್ತಿವೆ. ಹಳ್ಳಿಗಳ ವ್ಯಾಪ್ತಿಗೂ ತಮ್ಮ ಶಾಲೆಯ ವಾಹನಗಳನ್ನು ಕಳಿಸಿ ಅಲ್ಲಿನ ಸರ್ಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿಗೆ ತಂದಿವೆ. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಖಾಸಗಿ ಶಿಕ್ಷಣ ಸಂಸ್ಥೆಗಳ ವಾಹನಗಳು ಹಳ್ಳಿಗೆ ಬಾರದಂತೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿದರು.
ಒಂದು ಕಡೆ ರೈತರಿಗೆ ಮುಂಗಾರು ಪ್ರಾರಂಭವಾಗುತ್ತಿದ್ದಂತೆ ಬಿತ್ತನೆ ಕಾಲ, ಇದಕ್ಕೆ ಹಣ ಜೋಡಿಸುವ ಹೊತ್ತಿಗೆ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ಕಳಿಸುವವರಿಗೆ ಶುಲ್ಕ ಹೊಂದಿಸುವ ಕಷ್ಟ. ಇದಕ್ಕೆ ಕಡಿವಾಣ ಹಾಕಿ ಸರ್ಕಾರಿ ಶಾಲೆಗಳನ್ನು ಬಲಪಡಿಸಿ, ಉತ್ತಮ ಫಲಿತಾಂಶ ಬರುವಂತೆ ಮಾಡಬೇಕು ಎಂದು ಆಗ್ರಹಿಸಿದರು.
ಈ ವರ್ಷದ ಎಸ್ಸೆಸ್ಸೆಲ್ಸಿ, ಪಿಯುಸಿ ಫಲಿತಾಂಶದಲ್ಲಿ ಕಳಪೆ ಸಾಧನೆ ಮಾಡಿರುವ ಸರ್ಕಾರಿ ಶಾಲೆಗಳ ವಿರುದ್ಧ ಇಲಾಖೆ ಕ್ರಮ ಜರುಗಿಸಿ ಮುಂದೆ ಉತ್ತಮ ಫಲಿತಾಂಶ ಬರುವಂತೆ ಮಾಡಿ ಮಕ್ಕಳನ್ನು ಅಲ್ಲಿಗೆ ಸೆಳೆಯುವ ಕೆಲಸ ಮಾಡಬೇಕಾಗಿದೆ. ಕೆಲ ಖಾಸಗಿ ಶಾಲೆಗಳು ಶುಲ್ಕ ಪಡೆಯುವಾಗ ರಾಜ್ಯ ಪಠ್ಯಕ್ರಮ ಹಾಗೂ ಸಿಬಿಎಸ್ಇಗೆ ಪ್ರತ್ಯೇಕ ನಿಗಧಿ ಮಾಡಿ ಪೋಷಕರ ಸುಲಿಗೆ ಮಾಡುತ್ತಿವೆ. ಇದನ್ನು ತಡೆದು ಎಲ್ಲರಿಗೂ ಒಂದೇ ರೀತಿಯ ಶುಲ್ಕ ನಿಗಧಿ ಮಾಡಬೇಕು ಎಂದು ಒತ್ತಾಯಿಸಿದರು.

ಸರ್ಕಾರಿ ಶಾಲೆಗಳ ಶಿಕ್ಷಕರು, ನೌಕರರು ಕಡ್ಡಾಯವಾಗಿ ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಲ್ಲೆ ಓದಿಸುವಂತೆ ನಿಯಮ ರೂಪಿಸಬೇಕು ಎಂದು ಆಗ್ರಹಿಸಿದರು.
ರೈತರ ಪ್ರತಿಭಟನೆ ವೇಳೆ ಜೋರಾಗಿ ಮಳೆ ಸುರಿದರೂ ರೈತರು ಕದಲದೇ ಮಳೆಯಲ್ಲೇ ನಿಂತು ಪ್ರತಿಭಟನೆ ನಡೆಸಿ, ಡಿಡಿಪಿಐ ಮಂಜುನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟ ಸಿದ್ಧವೀರಪ್ಪ, ಮುಖಂಡರಾದ ರೆಡ್ಡಿಹಳ್ಳಿ ವೀರಣ್ಣ, ಕೆ.ಟಿ.ತಿಪ್ಪೇಸ್ವಾಮಿ, ಡಿ.ಎಸ್.ಹಳ್ಳಿ ಮಲ್ಲಿಕಾರ್ಜುನ, ಕೆ.ಸಿ.ಮಹೇಶ್ವರಪ್ಪ, ಸತೀಶ್, ಪ್ರಸನ್ನ, ಮಂಜುನಾಥ, ಲಕ್ಷ್ಮೀದೇವಿ. ರಂಗಮ್ಮ ಸೇರಿದಂತೆ ಜಿಲ್ಲೆಯ ವಿವಿಧೆಡೆಯಿಂದ ರೈತರು ಭಾಗವಹಿಸಿದ್ದರು.