
ಉಡುಪಿ: ಜಿಲ್ಲೆಯಲ್ಲಿ ಮುಂಗಾರು ಮಳೆಯ ಅಬ್ಬರ ಮುಂದುವರಿದಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು (ಮೇ 30) ಜಿಲ್ಲೆಯಲ್ಲಿ ಅಂಗನವಾಡಿಗಳು ಮತ್ತು ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

j3tvkannada
ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳು ಮತ್ತು 1 ರಿಂದ 10 ನೇ ತರಗತಿ ವರೆಗೆ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಸುರಕ್ಷತೆಯ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿರ್ಧಾರ ಪ್ರಕಟಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ತಿಳಿಸಿದ್ದಾರೆ. ಸಾರ್ವಜನಿಕರು ಜಾಗರೂಕರಾಗಿರಬೇಕು ಮತ್ತು ಅಧಿಕೃತ ಮೂಲಗಳಿಂದ ಬರುವ ಮಾಹಿತಿಯನ್ನು ಅನುಸರಿಸಬೇಕು ಎಂದು ಜಿಲ್ಲಾಡಳಿತ ಮನವಿ ಮಾಡಿದೆ.
ಮಕ್ಕಳು ತಗ್ಗು ಪ್ರದೇಶಗಳು, ಸರೋವರಗಳು, ಸಮುದ್ರ ತೀರ ಮತ್ತು ನದಿ ತೀರಗಳಿಗೆ ಹೋಗದಂತೆ ಪೋಷಕರು ಮುನ್ನೆಚ್ಚರಿಕೆ ವಹಿಸಬೇಕು ಎಂದಿರುವ ಜಿಲ್ಲಾಡಳಿತವು, ಮೀನುಗಾರರು ನೀರಿಗೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಸಂಭಾವ್ಯ ಅವಘಡಗಳ ಸಂದರ್ಭದಲ್ಲಿ ಕಾರ್ಯ ನಿರ್ವಹಣೆಗಾಗಿ ತಾಲ್ಲೂಕು ಮಟ್ಟದ ಅಧಿಕಾರಿಗಳು ಕೇಂದ್ರ ಕಚೇರಿಯಲ್ಲಿ ಕಡ್ಡಾಯವಾಗಿ ಇರಬೇಕೆಂದು ಸೂಚನೆ ನೀಡಲಾಗಿದೆ. ಜಿಲ್ಲಾಡಳಿತದಿಂದ ವಿವಿಧ ಹುದ್ದೆಗಳಿಗೆ ನೇಮಕಗೊಂಡ ನೋಡಲ್ ಅಧಿಕಾರಿಗಳು ಜಾಗರೂಕರಾಗಿರಬೇಕು ಮತ್ತು ಸಾರ್ವಜನಿಕ ದೂರುಗಳಿಗೆ ಸ್ಪಂದಿಸಬೇಕು. ತಹಶೀಲ್ದಾರ್ ನಿರಂತರ ಸಂಪರ್ಕದಲ್ಲಿರಬೇಕು ಎಂದು ಸೂಚಿಸಲಾಗಿದೆ.
ನದಿಗಳು, ಜಲಪಾತಗಳ ಬಳಿಗೆ ಪ್ರವಾಸಕ್ಕೆ ನಿರ್ಬಂಧ:-
ಸ್ಥಳೀಯ ನಿವಾಸಿಗಳು ಮತ್ತು ಪ್ರವಾಸಿಗರು ಕಡಲತೀರಗಳು, ನದಿಗಳು ಮತ್ತು ಜಲಪಾತಗಳ ಬಳಿಗೆ ಹೋಗುವುದನ್ನು ಮುನ್ನೆಚ್ಚರಿಕೆ ಕ್ರಮವಾಗಿ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಅಂಥ ಪ್ರದೇಶಗಳಲ್ಲಿ ಫೋಟೋಗಳು ಮತ್ತು ವೀಡಿಯೊಗಳನ್ನು ತೆಗೆದುಕೊಳ್ಳದಂತೆ ಸೂಚಿಸಲಾಗಿದೆ.
ತುರ್ತು ಸಂದರ್ಭಗಳಲ್ಲಿ ಸಾರ್ವಜನಿಕರು ಟೋಲ್ ಫ್ರೀ ಸಹಾಯವಾಣಿ ಸಂಖ್ಯೆ 1077ಗೆ ಕರೆ ಮಾಡಬಹುದು. ಉಡುಪಿ ಜಿಲ್ಲೆಯವರು 0820-2574802 ಸಂಖ್ಯೆಗೆ ಯಾವುದೇ ಸಮಯದಲ್ಲಿ ಬೇಕಿದ್ದರೂ ಕರೆ ಮಾಡಬಹುದು ಎಂದು ಜಿಲ್ಲಾಡಳಿತ ತಿಳಿಸಿದೆ.