
ಬೀದರ್: ಭಾಲ್ಕಿ ತಾಲ್ಲೂಕಿನ ಹಲಬರ್ಗಾ ಗ್ರಾಮದಲ್ಲಿ ನೂತನ ಜನಶ್ರೀ ಮಹಿಳಾ ರೈತ ಉತ್ಪಾದಕರ ಕಂಪನಿಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ ಮಂಗಳವಾರ ಉದ್ಘಾಟಿಸಿದರು. ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದಡಿ ಮಹಿಳಾ ಸ್ವಸಹಾಯ ಗುಂಪುಗಳ ಮೂಲಕ ಗ್ರಾಮೀಣ ಪ್ರದೇಶದ ಬಡತನ ನಿವಾರಣೆ ಯೋಜನೆಯಡಿ ಕಂಪನಿಗೆ ಚಾಲನೆ ನೀಡಲಾಗಿದೆ ಎಂದು ಅವರು ತಿಳಿಸಿದರು. ಕಂಪನಿ ಸದ್ಯ ಬೀಜ ಹಾಗೂ ರಸಗೊಬ್ಬರ ಪರವಾನಗಿ ಪಡೆದಿದೆ. ಮುಂದಿನ ದಿನಗಳಲ್ಲಿ ಉತ್ಪಾದಕ ಸಂಸ್ಥೆಗಳನ್ನು ಬಲಪಡಿಸಲು ಸಹಕರಿಸಲಾಗುವುದು ಎಂದು ಹೇಳಿದರು. ಗ್ರಾಮದ ರಾಚೋಟೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಹಾವಗಿಲಿಂಗೇಶ್ವರ ಶಿವಾಚಾರ್ಯರು ಮಾತನಾಡಿ ಸ್ವಸಹಾಯ ಗುಂಪುಗಳ ಮಹಿಳೆಯರನ್ನು ಒಗ್ಗೂಡಿಸಿ ಕಂಪನಿ ಸ್ಥಾಪಿಸಲಾಗಿದೆ.

j3tvkannada
ರೈತ ಮಹಿಳೆಯರು ಬೆಳೆದ ಬೆಳೆಗಳನ್ನು ಸಂಸ್ಕರಿಸಿ ಮಾರಾಟ ಮಾಡಿ ಆರ್ಥಿಕವಾಗಿ ಸಬಲರಾಗಬೇಕು ಎಂದು ತಿಳಿಸಿದರು. ಜಿಲ್ಲಾ ಪಂಚಾಯಿತಿಯ ಯೋಜನಾ ನಿರ್ದೇಶಕ ಜಗನ್ನಾಥ ಮೂರ್ತಿ ಅವರು ಕಂಪನಿ ಧ್ಯೇಯೋದ್ದೇಶಗಳ ಕುರಿತು ಮಾಹಿತಿ ನೀಡಿದರು. ಕಂಪನಿ ಷೇರುದಾರರಿಗೆ ಬೀಜ ಹಾಗೂ ಗೊಬ್ಬರ ವಿತರಿಸಲಾಯಿತು. ಜಿಲ್ಲಾ ಪಂಚಾಯಿತಿ ಲೆಕ್ಕ ಸಹಾಯಕ ಪ್ರವೀಣ ಸ್ವಾಮಿ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಿನಿಬಾಯಿ ಶಿವಪಾಲ್ಸಿಂಗ್ ಠಾಕೂರ್, ಪಿ.ಡಿ.ಒ ಚಂದ್ರಕಾಂತ ಫುಲೆ, ನ್ಯಾಯವಾದಿ ಮಲ್ಲಿಕಾರ್ಜುನ ಜಳಕೋಟೆ, ಎನ್.ಆರ್.ಎಲ್.ಎಂ ಜಿಲ್ಲಾ, ತಾಲ್ಲೂಕು ಸಿಬ್ಬಂದಿ ಹಾಗೂ ಕಂಪನಿಯ ಷೇರುದಾರರು ಹಾಜರಿದ್ದರು.