
ಚಾಮರಾಜನಗರ: ವಿದ್ಯಾರ್ಥಿಗಳು ಓದುವಿನ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳು ಹಾಗೂ ಕೌಶಲ್ಯ ತರಬೇತಿಗಳನ್ನು ಪಡೆದುಕೊಂಡು ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಮುಂದಾಗಬೇಕು ಎಂದು ಮೈಸೂರು ಜೆಎಸ್ಎಸ್ ಮಹಾವಿದ್ಯಾ ಪೀಠದ ಜೆಎಸ್ಎಸ್ ಪಬ್ಲಿಕ್ ಶಾಲೆಗಳ ವಿಭಾಗದ ಉಪ ನಿರ್ದೇಶಕ ಆಶೋಕ್ ಪಾಳ್ಯ ತಿಳಿಸಿದರು. ನಗರದ ಜೆಎಸ್ಎಸ್ ಪಬ್ಲಿಕ್ ಶಾಲೆಯಲ್ಲಿ 2024-25ನೇ ಸಾಲಿನ ಎಸ್ಎಸ್ಎಲ್ಸಿ (ಸಿಬಿಎಸ್ಇ) ಪರೀಕ್ಷೆಯಲ್ಲಿ 580 ಅಂಕಗಳನ್ನು ಪಡೆದು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಎನ್. ಹರ್ಷಿತಾ ಅವರನ್ನು ಜೆ.ಎಸ್.ಎಸ್ ಮಹಾವಿದ್ಯಾಪೀಠ ಹಾಗೂ ಆಡಳಿತ ಮಂಡಲಿಯ ಪರವಾಗಿ ಸನ್ಮಾನಿಸಿ ಅವರು ಮಾತನಾಡಿದರು.
ಪಿಯುಸಿ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳನ್ನು ಪಡೆದು ಸಾಧನೆ ಮಾಡುವ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕ ಪಡೆದು ಉದ್ಯೋಗವನ್ನು ಪಡೆದು ಸ್ವಾಲಂಬನೆ ಬದುಕು ಕಟ್ಟಿಕೊಳ್ಳುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಹಾಗೂ ಶಾಲೆಗಳು ಹೆಚ್ಚಿನ ಅದ್ಯತೆ ನೀಡಬೇಕು. ಇತ್ತೀಚಿನ ದಿನಗಳಲ್ಲಿ ಎಲ್ಲಾ ರಂಗದಲ್ಲಿಯೂ ಹೆಚ್ಚಿನ ಪೈಪೋಟಿ ಏರ್ಪಟ್ಟಿದೆ.

j3tvkannada
ಇದನ್ನು ಅರಿತು ವಿದ್ಯಾರ್ಥಿಗಳು ಹಾಗೂ ಪೋಷಕರು ನಮ್ಮ ಮಕ್ಕಳಿಗೆ ಯಾವ ರೀತಿ ಶಿಕ್ಷಣ ಕೊಡಿಸಬೇಕು ಎಂಬ ನಿಟ್ಟಿನಲ್ಲಿ ಚಿಂತನೆ ಮಾಡಬೇಕಾಗಿದೆ. ಚಾಮರಾಜನಗರದಲ್ಲಿರುವ ಜೆಎಸ್ಎಸ್ ಪಬ್ಲಿಕ್ ಶಾಲೆ ಆರಂಭಗೊಂಡು 9 ವರ್ಷಗಳು ಕಳೆದಿವೆ. ಸತತವಾಗಿ ಜಿಲ್ಲೆಗೆ ಪ್ರಥಮ ಸ್ಥಾನವನ್ನು ಪಡೆಯುತ್ತಾ ಬಂದಿದೆ. ಅಲ್ಲದೇ ನಮ್ಮ ಶಾಲೆಯ ವಿದ್ಯಾರ್ಥಿನಿ ಹರ್ಷಿತಾ ಈ ಬಾರಿಯು ಜಿಲ್ಲೆಗೆ ಟಾಫರ್ ಆಗಿರುವುದು ಹೆಮ್ಮ ತಂದಿದೆ. ನಿಮ್ಮೆಲ್ಲರ ಭವಿಷ್ಯ ಉಜ್ವಲವಾಗಲಿ ಎಂದು ಶುಭ ಕೋರಿದರು.
ಜೆಎಸ್ಎಸ್ ಸಾರ್ವಜನಿಕ ಸಂಪರ್ಕಾಧಿಕಾರಿ ಆರ್.ಎಂ.ಸ್ವಾಮಿ ಮಾತನಾಡಿ, ಪೂಜ್ಯ ಶ್ರೀ ಶಿವರಾತ್ರಿದೇಶಿಕೇಂದ್ರ ಸ್ವಾಮಿಗಳ ಆಶಯದಂತೆ ಜಿಲ್ಲಾ ಕೇಂದ್ರದಲ್ಲಿ ಪಬ್ಲಿಕ್ ಶಾಲೆ ಆರಂಭಿಸಬೇಕು ಎಂಬುದಾಗಿತ್ತು. ಅದರಂತೆ ಆರಂಭದಿಂದ ದಿನದಿಂದ ಇಲ್ಲಿಯವರೆಗೆ ಜೆ.ಎಸ್.ಎಸ್ ಪಬ್ಲಿಕ್ ಶಾಲೆ ಶೇ. 100 ರಷ್ಟು ಫಲಿತಾಂಶವನ್ನು ನೀಡುತ್ತಾ ಬಂದಿದೆ. ಸತತವಾಗಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲೆಗೆ ಪ್ರಥಮ ಸ್ಥಾನ ಪಡೆದುಕೊಳ್ಳುವ ಮೂಲಕ ಸಂಸ್ಥೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಪ್ರಾಂಶುಪಾಲರು ಹಾಗೂ ಶಿಕ್ಷಕರ ತಂಡದ ಪರಿಶ್ರಮ ಬಹಳ ಇದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ಕಾರ್ಯಕ್ರಮದಲ್ಲಿ ಜೆಎಸ್ಎಸ್ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಮಹದೇವಸ್ವಾಮಿ ,ಜೆಎಸ್ಎಸ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲ ಎಚ್.ಎಂ. ಉಮೇಶ್ ವಿದ್ಯಾರ್ಥಿನಿಯ ಪೋಷಕರಾದ ಎನ್. ನಾಗೇಂದ್ರ, ನಳಿನ ನಾಗೇಂದ್ರ, ಶಿಕ್ಷಕ ವೃಂದದವರು ಇದ್ದರು.