
ಬೀದರ: ಇದೇ ಜೂನ್ 12 ರಂದು ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಬೃಹತ್ ಜಾಥಾ ಮತ್ತು ರಂಗಮಂದಿರದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ತಿಳಿಸಿದರು. ಅವರು ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಈ ಜಾಥಾವು ಜಿಲ್ಲಾಧಿಕಾರಿ ಕಚೇರಿಯಿಂದ ಭಗತಸಿಂಗ್ ವೃತ್ತ, ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತ, ಕೆ.ಎಂ. ಕರಿಯಪ್ಪ ವೃತ್ತದ ಮೂಲಕ ರಂಗಮಂದಿರ ತಲುಪುವುದು ನಂತರ 10 ಗಂಟೆಗೆ ವೇದಿಕೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

j3tvkannada
ಜಾಥಾದಲ್ಲಿ 600 ಪ್ರೌಢ ಶಾಲಾ ಮಕ್ಕಳು ಭಾಗವಹಿಸುವಂತೆ ನೋಡಿಕೊಳ್ಳಲು ಶಿಕ್ಷಣಾಧಿಕಾರಿಗಳಿಗೆ ಸೂಚಿಸಿದರು. ಈ ಜಾಥಾದಲ್ಲಿ ಅಂಗನವಾಡಿ ಮೇಲ್ವಿಚಾರಕಿಯರು ಮತ್ತು ಕಾರ್ಯಕರ್ತೆಯರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಡಾಭಾ ಮತ್ತು ಕಾರ್ಖಾನೆ ಮಾಲೀಕರು ಭಾಗವಹಿಸುವಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಕಾರ್ಯಕ್ರಮ ಅಂಗವಾಗಿ ಪ್ರಬಂಧ ಸ್ಪರ್ಧೆ, ಚಿತ್ರಕಲಾ ಸ್ಪರ್ಧೆ, ಭಾಷಣ, ಕಿರು ನಾಟಕ ಪ್ರದರ್ಶನ ನಡೆಸುವಂತೆ ತಿಳಿಸಿದರು.
ಎಲ್ಲಾ ಸರ್ಕಾರಿ ಕಛೇರಿಗಳಲ್ಲಿ ಬೆಳಿಗ್ಗೆ 11 ಗಂಟೆಗೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಪ್ರಮಾಣ ವಚನ ಬೋಧಿಸಬೇಕು ಮತ್ತು ಜಿಲ್ಲೆಯ ಪ್ರತಿ ಗ್ರಾಮಗಳಲ್ಲಿ ಪಂಚಾಯಿತಿ ವತಿಯಿಂದ ಡಂಗೂರ ಸಾರಿಸುವುದು ಹಾಗೂ ಎಲ್ಲಾ ಗ್ರಾಮ ಪಂಚಾಯಿತಿ, ಪುರಸಭೆ, ನಗರಸಭೆ ವತಿಯಿಂದ ಕಸ ವಿಲೇವಾರಿ ವಾಹನಗಳಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ನಿರ್ಮೂಲನೆ ಕುರಿತು ಧ್ವನಿವರ್ಧಕ ಮೂಲಕ ಘೋಷಣೆ ಕೂಗಿಸಬೇಕೇಂದರು. ಎಲ್ಲಾ ತಾಲೂಕು ಮಟ್ಟದ ಅಧಿಕಾರಿಗಳು ಅಥವಾ ತಾಲೂಕಾ ಟಾಸ್ಕ್ ಸಮಿತಿ ಅಧಿಕಾರಿಗಳು ಜೂನ್ 13 ರಿಂದ ಜೂನ್30 ವರೆಗೆ ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ರಕ್ಷಣಾ ಅಭಿಯಾನ ಕಾರ್ಯಕ್ರಮ ಆಯೋಜಿಸಲು ಅಧಿಕಾರಿಗಳಿಗೆ ಸೂಚಿಸಿದರು.

j3tvkannada
ನಂತರ ಜಿಲ್ಲಾಧಿಕಾರಿಗಳು ಜಿಲ್ಲಾ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಿ ಜಿಲ್ಲೆಯಲ್ಲಿ ಎಲ್ಲೇ ಬಾಲಕಾರ್ಮಿಕರು ಕಂಡು ಬಂದಲ್ಲಿ ಅಂತಹವರನ್ನು ನೇರವಾಗಿ ಮುರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ದಾಖಲಿಸಿ ಶಿಕ್ಷಣ ನೀಡಲು ಅಧಿಕಾರಿಗಳಿಗೆ ತಿಳಿಸಿದರು ಹಾಗೂ ಎಲ್ಲಾ ಕಾರ್ಖಾನೆ,ಡಾಭಾ, ಹೋಟೆಲ್, ಗ್ಯಾರೇಜ್, ಅಂಗಡಿ ಮುಂಗಟ್ಟುಗಳಗೆ ಭೇಟಿ ನೀಡಿ ಪರಿಶೀಲನೆ ಪಡಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅಧಿಕಾರಿ ಅರ್ಜುನ. ಎಸ್ ಮಾತನಾಡಿ, ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜನಜಾಗೃತಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
SP ಅಡಿಯಲ್ಲಿ 56 ಗೋಡೆ ಬರಹಗಳು, 2 ದಿನ ಆಟೋ ಮೂಲಕ ಪ್ರಚಾರ, 2 ಜಿಲ್ಲಾ ಮಟ್ಟದ ಮತ್ತು 7 ತಾಲೂಕು ಮಟ್ಟದ ಕಾನೂನು ಅರಿವು ಕಾರ್ಯಕ್ರಮ, ಜಿಲ್ಲಾ ಮಟ್ಟದ 1 ಹಾಗೂ ತಾಲೂಕು ಮಟ್ಟದ 19 ಟಾಸ್ಕ್ ಫರ್ ರ್ಸ್ ಸಮಿತಿ ಸಭೆ, 1489 ಕರಪತ್ರಗಳ ಹಂಚುವಿಕೆ, 189 ಬಿತ್ತಿ ಪತ್ರಗಳ ಅಂಟಿಸುವಿಕೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಾಯೋಗಿಕತ್ವದ ಅಡಿಯಲ್ಲಿ ಬಾಲಕಾರ್ಮಿಕ ಮಕ್ಕಳಿಗೆ (ಪಾಲಕಾರಿಲ್ಲದ ಅಥವಾ ಏಕ ಪೋಷಕರು ಮಕ್ಕಳಿಗೆ) 2024-25 ನೇ ಸಾಲಿನಲ್ಲಿ 5 ಮಕ್ಕಳಿಗೆ ಪ್ರತಿ ಮಗುವಿಗೆ 4000 ರೂ. ರಂತೆ ಶಿಷ್ಯ ವೇತನ ನೀಡಲಾಗುತ್ತಿದೆ ಎಂದು ತಿಳಿಸಿದರು. ಈ ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಮಹೇಶ ಲಕ್ಷ್ಮಣ ಕುಳಲಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ಜಿಲ್ಲಾ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಾರದಾ ಎನ್.ಕಲ್ಮೇಲ್ಕರ್, ಬೀದರ ತಾಲೂಕು ಕಾರ್ಮಿಕ ನಿರೀಕ್ಷಕ ಅಧಿಕಾರಿ ಸುವರ್ಣ ಕೆ. ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.