
ವಿಜಯಪುರ: ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಕರ್ನಾಟಕ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕರ್ನಾಟಕದ ರಾಜಕಾರಣಿಗಳು ಪಕ್ಷ ಬೇಧ ಮರೆತು ಒಗ್ಗಟ್ಟು ವ್ಯಕ್ತಪಡಿಸಿದ್ದಾರೆ.

j3tvkannada
ಅಣೆಕಟ್ಟು ಎತ್ತರಿಸುವುದರಿಂದ ಮಹಾರಾಷ್ಟ್ರದ ಕೊಲ್ಹಾಪುರ, ಸಾಂಗ್ಲಿ ಮತ್ತಿತರ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರಲಿದೆ ಎಂದು ಫಡ್ನವೀಸ್ ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಕರ್ನಾಟಕದ ರಾಜಕಾರಣಿಗಳು ಪಢ್ನವೀಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದು, ಅವರ ಹೇಳಿಕೆಯನ್ನು ಅಲ್ಲೆಗೆಳೆ ಯುತ್ತಿದ್ದಾರೆ.
ಈ ಹಿಂದೆಯೇ ವಿಸ್ತೃತ ತಾಂತ್ರಿಕ ಅಧ್ಯಯನ ನಡೆಸಲಾಗಿದ್ದು, ಪ್ರವಾಹಕ್ಕೆ ಜಲಾಶಯ ಕಾರಣ ಆಗಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ. ಪಢ್ನವೀಸ್ ಆರೋಪ ನಿರಾಧಾರ. ಆಲಮಟ್ಟಿ ಡ್ಯಾಂ ಕಟ್ಟಿದ 1969 ರ ಮುನ್ನವೇ ಮಹಾರಾಷ್ಟ್ರದಲ್ಲಿ ಪ್ರವಾಹ ಸಂಭವಿಸುತಿತ್ತು ಎಂದು ಮಾಜಿ ಸಚಿವ ಹಾಗೂ ಬಿ.ಜೆ.ಪಿ ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.
ದಶಕದ ಹಿಂದೆ ಮಹಾರಾಷ್ಟ್ರ ಸರ್ಕಾರ ನೇಮಿಸಿದ ಸಮಿತಿಯು ನಡೆಸಿದ ವೈಜ್ಞಾನಿಕ ಅಧ್ಯಯನವನ್ನು ಉಲ್ಲೇಖಿಸಿದ ಕಾರಜೋಳ, ಆಲಮಟ್ಟಿ ಮತ್ತು ಹಿಪ್ಪರಗಿ ಜಲಾಶಯಗಳ ಸಂಗ್ರಹ ಮಟ್ಟಕ್ಕೂ ಮಹಾರಾಷ್ಟ್ರದ ಪ್ರವಾಹಕ್ಕೂ ಯಾವುದೇ ಸಂಬಂಧವಿಲ್ಲ ಎಂದು ವರದಿಯಲ್ಲಿ ಕಂಡುಬಂದಿಲ್ಲ. ಕೃಷ್ಣಾ ನ್ಯಾಯಾಧೀಕರಣ ನ್ಯಾಯಮೂರ್ತಿ ಬ್ರಿಜೇಶ್ ಕುಮಾರ್ ಅವರ ಅಂತಿಮ ತೀರ್ಪಿನಲ್ಲಿ ಅಣೆಕಟ್ಟಿನ ಎತ್ತರವನ್ನು ಹೆಚ್ಚಿಸುವ ಬಗ್ಗೆ ಉಲ್ಲೇಖಿಸಲಾಗಿದೆ. ಈ ಬಗ್ಗೆ ಸುಪ್ರೀಂ ಕೋರ್ಟ್ನಲ್ಲಿ ಮಹಾರಾಷ್ಟ್ರ ಯಾವುದೇ ಆಕ್ಷೇಪ ವ್ಯಕ್ತಪಡಿಸಿಲ್ಲ. ಈಗ ಅದನ್ನು ವಿರೋಧಿಸುವುದರಲ್ಲಿ ಯಾವುದೇ ಸಮರ್ಥನೆ ಇಲ್ಲ ಎಂದರು.
ಈ ಹಿಂದೆ ಜಲಸಂಪನ್ಮೂಲ ಸಚಿವರಾಗಿಯೂ ಸೇವೆ ಸಲ್ಲಿಸಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಸಾಂಗ್ಲಿ, ಮೀರಜ್ ಮತ್ತು ಕೊಲ್ಲಾಪುರದಲ್ಲಿ ಪ್ರವಾಹಕ್ಕೆ ಕರ್ನಾಟಕದ ಜಲಾಶಯಗಳು ಕಾರಣವಲ್ಲ ಎಂದಿದ್ದಾರೆ. ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ ಅವರ ಅಭಿಪ್ರಾಯವೂ ಇದೇ ಆಗಿದೆ, ಅವರು ಮಹಾರಾಷ್ಟ್ರದ ಸಿ.ಎಂ ಹೇಳಿಕೆ ಆಧಾರ ರಹಿತ ಮತ್ತು ಎರಡು ರಾಜ್ಯಗಳ ನಡುವೆ ಸೌಹಾರ್ದತೆ ಹದಗೆಡಿಸುವ ಗುರಿ ಹೊಂದಲಾಗಿದೆ ಎಂದು ಆರೋಪಿಸಿದ್ದಾರೆ.