
ಮೈಸೂರು : ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ RCB ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ಕುರಿತು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಈ ದುರ್ಘಟನೆಯ ನೈತಿಕ ಹೊಣೆ ಹೊರಬೇಕಾದವರು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್. ಇಂತಹ ದುರ್ಘಟನೆಗೆ ಅವರು ನೇರವಾಗಿ ಕಾರಣರಾಗಿದ್ದಾರೆ. ಅವರು “ಒಂದು ಕ್ಷಣವೂ ತಮ್ಮ ಹುದ್ದೆಯಲ್ಲಿ ಮುಂದುವರಿಯಬಾರದು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕ್ರೀಡಾಂಗಣದ ಬಳಿ ಮೂವರು ವ್ಯಕ್ತಿಗಳು ತಮ್ಮ ಪ್ರಾಣ ತ್ಯಾಗ ಮಾಡುತ್ತಿದ್ದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಕುಟುಂಬದವರು ಉತ್ಸವದಲ್ಲಿ ಭಾಗವಹಿಸುತ್ತಿದ್ದರು, ಸೆಲ್ಫಿಗಳಿಗಾಗಿ ಪೋಸ್ ನೀಡುತ್ತಿದ್ದರು. ಇದು ಅಕ್ಷಮ್ಯ ಅಪರಾಧ ಅಲ್ಲವೇ? ಎಂದು ಪ್ರಶ್ನಿಸಿದರು.
ಪೊಲೀಸ್ ಇಲಾಖೆಯು ಕಾರ್ಯಕ್ರಮ ನಡೆಸದಂತೆ ನಿರಾಕರಿಸಿದ ನಂತರವೂ ಸಮಾರಂಭಕ್ಕೆ ಸರ್ಕಾರವೇ ಪ್ರೋತ್ಸಾಹ ನೀಡಿದ್ದು, ಡಿ.ಕೆ. ಶಿವಕುಮಾರ್ ಸ್ವತಃ ಜನರನ್ನು ಸ್ವಾಗತಿಸಿದರು ಎಂದು ಪ್ರಲ್ಹಾದ್ ಜೋಶಿ ತಿಳಿಸಿದರು.