
ಬೆಳಗಾವಿ: ಕಳೆದ ಶುಕ್ರವಾರ ಸಿ.ಎಂ ಸಿದ್ದರಾಮಯ್ಯ ಮಂಡನೆ ಮಾಡಿದ ರಾಜ್ಯ ಬಜೆಟ್ನಲ್ಲಿ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರಕ್ಕೆ ಮತ್ತು ಇನ್ನೂ ಬೇರೆ ಕ್ಷೇತ್ರಗಳಿಗೆ ವಿಶೇಷ ಬಂಡವಾಳ ಯೋಜನೆಯಡಿ 199 ಕೋಟಿ ರೂ. ಅನುದಾನ ನೀಡಿದೆ. ಇದೀಗ ಸವದತ್ತಿ ದೇಗುಲಕ್ಕೆ ಕೇಂದ್ರ ಸರ್ಕಾರವೂ ಕೂಡಾ ಪ್ರಸಾದ್ ಯೋಜನೆಯಡಿ 18 ಕೋಟಿ ರೂ. ಅನುದಾನ ಮಂಜೂರು ಮಾಡಿದೆ.

ಈ ಬಗ್ಗೆ ಕೇಂದ್ರ ಪ್ರವಾಸೋದ್ಯಮ ಇಲಾಖೆ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಮಾಹಿತಿ ನೀಡಿದ್ದಾರೆ. ಕೇಂದ್ರ ಸರ್ಕಾರದ 18 ಕೋಟಿ ರೂ. ಅನುದಾನದಲ್ಲಿ ದೇವಾಲಯಕ್ಕೆ ಭಕ್ತಾಧಿಗಳ ಆಗಮನ ಕೇಂದ್ರ, ಕೆಫೆಟೇರಿಯಾ, ಪ್ರಥಮ ಚಿಕಿತ್ಸಾ ಕೇಂದ್ರ ಮತ್ತು ಇತರ ಆಧುನಿಕ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇದು ದೇವಾಲಯಕ್ಕೆ ಭೇಟಿ ನೀಡುವ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ಹೆಚ್ಚಿನ ಪ್ರಯೋಜನವನ್ನು ನೀಡುತ್ತದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಪ್ರವಾಸೋದ್ಯಮ ಸಚಿವಾಲಯವು ಪ್ರಸಾದ್ ಯೋಜನೆಯನ್ನು 2014-2015 ರಲ್ಲಿ ಪ್ರಾರಂಭಿಸಿದೆ. ಧಾರ್ಮಿಕ ಯಾತ್ರಾ ಸ್ಥಳಗಳ ಅಭಿವೃದ್ಧಿಪಡಿಸಲು ಈ ಯೋಜನೆಯಡಿ ಅನುದಾನ, ವಿಶೇಷ ಕಾರ್ಯಕ್ರಮ ಕೈಗೊಳ್ಳಲಾಗುತ್ತಿದೆ. ಉತ್ತರ ಕರ್ನಾಟಕ ಭಾಗದ ಪ್ರಸಿದ್ಧ ಯಾತ್ರಾ ಸ್ಥಳ ಸವದತ್ತಿ ಯಲ್ಲಮ್ಮನ ಗುಡ್ಡದ ಅಭಿವೃದ್ಧಿಗೆ ಕೇಂದ್ರ ಸರ್ಕಾರ 18 ಕೋಟಿ ರೂ. ಮಂಜೂರು ಮಾಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರಸಿಂಗ್ ಶೇಖಾವತ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.