
ವಿಜಯಪುರ: ನಗರದ ಮಹಾತ್ಮ ಗಾಂಧಿ ಚೌಕ್ ಹತ್ತಿರ ಮಲ್ಟಿ ಕಾರ್, ಬೈಕ್ ಪಾರ್ಕಿಂಗ್ ಕಟ್ಟಡ ನಿರ್ಮಾಣಕ್ಕೆ ಅಗತ್ಯವಾದ ರೂ.20 ಕೋಟಿ ಮಂಜೂರಿಸಲು ವಿಜಯಪುರ ನಗರದಲ್ಲಿ ನಡೆಯಲಿರುವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವಂತೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

j3tvkannada
ವಿಜಯಪುರ ನಗರವು ದಿನದಿಂದ ದಿನಕ್ಕೆ ಬೃಹದಾಕಾರವಾಗಿ ಬೆಳೆಯುತ್ತಿದೆ. ಅದರಂತೆ ವಾಹನಗಳ ಸಂಖ್ಯೆಯು ಕೂಡ ಹೆಚ್ಚಾಗುತ್ತಿದೆ. ಪ್ರಮುಖ ಮಾರುಕಟ್ಟೆ ನಗರದ ಹೃದಯ ಭಾಗವಾದ ಮಹಾತ್ಮ ಗಾಂಧಿ ಚೌಕ್ ದಲ್ಲಿ ವಾಹನಗಳ ನಿಲುಗಡೆಗೆ ಪಾರ್ಕಿಂಗ್ ವ್ಯವಸ್ಥೆ ಇಲ್ಲದಿರುವುದರಿಂದ, ಸಾರ್ವಜನಿಕರು ತಮ್ಮ ಕಾರ್, ಬೈಕ್ಗಳನ್ನು ನಿಲ್ಲಿಸಲು ಪರದಾಡುತ್ತಿದ್ದಾರೆ. ಅಲ್ಲದೆ, ಅನಿವಾರ್ಯವಾಗಿ ತಮ್ಮ ವಾಹನಗಳನ್ನು ರಸ್ತೆಯ ಬದಿ ನಿಲ್ಲಿಸಿ ಹೋಗುವುದರಿಂದ ಸಂಚಾರಕ್ಕೂ ತೀವ್ರ ತೊಂದರೆ ಉಂಟಾಗುತ್ತಿದೆ. ಇದರಿಂದ ಸಂಚಾರ ದಟ್ಟಣೆ ಸೃಷ್ಟಿಯಾಗಿದ್ದು ವಾಹನಗಳ ನಿಲುಗಡೆಗೆ ಸೂಕ್ತ ಪಾರ್ಕಿಂಗ್ ವ್ಯವಸ್ಥೆ ಅಗತ್ಯವಿದೆ.
ಇದಕ್ಕಾಗಿ ಈಗಾಗಲೇ ಗಾಂಧಿ ಚೌಕ್ ದಲ್ಲಿರುವ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆ ನಂ.1, ರಸ್ತೆ ಬದಿಯಲ್ಲಿ ಇರುವುದರಿಂದ, ಶಬ್ದ ಮಾಲಿನ್ಯ ಉಂಟಾಗಿ ಮಕ್ಕಳ ಶಿಕ್ಷಣಕ್ಕೆ ತೀವ್ರ ತೊಂದರೆ ಆಗುತ್ತಿದೆಂದು ಸಮೀಪದ ಸರ್ಕಾರಿ ಪ್ರೌಢ ಶಾಲೆಗೆ ಸ್ಥಳಾಂತರಿಸಲು ಯೋಚಿಸಲಾಗಿದೆ. ಸ್ಥಳಾಂತರಗೊಂಡ ಶಾಲೆಯ ಜಾಗವು ವಾಹನಗಳ ನಿಲುಗಡೆಗೆ ಮತ್ತು ಹೂ, ಹಣ್ಣು ಮಾರಾಟಕ್ಕೆ ಸೂಕ್ತವಾಗಿದ್ದು, ಆ ಜಾಗದಲ್ಲಿ ಕೆಳಗಡೆ ಹೂ ಮತ್ತು ಹಣ್ಣು ಮಾರಾಟಕ್ಕೆ ಹಾಗೂ ಅದರ ಮೇಲೆ ವಾಹನಗಳ ನಿಲುಗಡೆಗೆ ಅನುಕೂಲಕ್ಕಾಗಿ ಮಲ್ಟಿ ಕಾರ್ ಪಾರ್ಕಿಂಗ್ ಕಟ್ಟಡ ನಿರ್ಮಾಣ ಮಾಡಲು ಮಹಾನಗರ ಪಾಲಿಕೆಯಿಂದ ವಿಸ್ತೃತ ವರದಿ ಸಿದ್ದಪಡಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕರ ವಾಹನಗಳ ನಿಲುಗಡೆಗೆ ಆಗುತ್ತಿರುವ ಸಮಸ್ಯೆ ನಿವಾರಣೆಗಾಗಿ ವಾಹನಗಳ ನಿಲುಗಡೆಗೆ ಹಾಗೂ ಹೂ, ಹಣ್ಣು ವ್ಯಾಪಾರಸ್ಥರಿಗೆ ಅಲ್ಲಿಯೇ ಸೂಕ್ತ ವ್ಯವಸ್ಥೆ ಕಲ್ಪಿಸಲು ಪಾರ್ಕಿಂಗ್ ಸಚಿವ ಸಂಪುಟದಲ್ಲಿ ಅನುಮೋದನೆ ನೀಡಲು ಕೋರಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ, ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ ಅವರಿಗೂ ಪತ್ರ ಬರೆಯಲಾಗಿದೆ ಎಂದು ನಗರ ಶಾಸಕರ ಸಾರ್ವಜನಿಕ ಸಂಪರ್ಕ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.