
ಬೀದರ್: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು ಜಿಲ್ಲೆಯ ಮುಖಂಡ ಧನರಾಜ ತಾಳಂಪಳ್ಳಿ ಅವರಿಗೆ ಸಹಕಾರ ವಿಭಾಗದ ಹೊಣೆ ವಹಿಸಿದೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಧನರಾಜ ತಾಳಂಪಳ್ಳಿ ಅವರನ್ನು ಕೆ.ಪಿ.ಸಿ.ಸಿ ಸಹಕಾರ ವಿಭಾಗದ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ರಾಜ್ಯದ ನಾಯಕರ ಸಹಕಾರದೊಂದಿಗೆ ಸಹಕಾರ ವಿಭಾಗ ಹಾಗೂ ಪಕ್ಷದ ಬಲವರ್ಧನೆ ಕಾರ್ಯಗಳಲ್ಲಿ ತೊಡಗಿಸಿ ಕೊಳ್ಳುವಂತೆ ಸೂಚಿಸಿದ್ದಾರೆ.

j3tvkannada
ಹುಮನಾಬಾದ್ ತಾಲ್ಲೂಕಿನ ಹಳ್ಳಿಖೇಡ(ಬಿ) ಗ್ರಾಮದ ಧನರಾಜ ತಾಳಂಪಳ್ಳಿ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಲ್ಲಿ ಒಬ್ಬರಾಗಿದ್ದಾರೆ. ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಎರಡು ದಶಕಗಳಿಂದ ಕಾಂಗ್ರೆಸ್ನಲ್ಲಿ ಇರುವ ಅವರು ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಕೆ.ಪಿ.ಸಿ.ಸಿ ಸದಸ್ಯ ಸೇರಿ ಪಕ್ಷದ ವಿವಿಧ ಹುದ್ದೆಗಳಲ್ಲಿ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದಾರೆ. ತಾಲ್ಲೂಕು, ಜಿಲ್ಲಾ ಪಂಚಾಯಿತಿ, ವಿಧಾನಸಭೆ, ವಿಧಾನ ಪರಿಷತ್ ಹಾಗೂ ಲೋಕಸಭೆ ಚುನಾವಣೆಗಳಲ್ಲಿ ಪಕ್ಷದ ಗೆಲುವಿಗೆ ಶ್ರಮಿಸಿದ್ದಾರೆ.
ಕೇರಳದ ವಯನಾಡ್ ಸೇರಿ ವಿವಿಧೆಡೆಯ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಕೊಡುಗೆ ನೀಡಿದ್ದಾರೆ. ತಮ್ಮ ಸೇವೆಯನ್ನು ಗುರುತಿಸಿ ಸಹಕಾರ ವಿಭಾಗದ ರಾಜ್ಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದ್ದಕ್ಕೆ ಧನರಾಜ ತಾಳಂಪಳ್ಳಿ ಅವರು ಎ.ಐ.ಸಿ.ಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ರಾಜ್ಯದ ಸಚಿವರು, ರಾಷ್ಟ್ರ ಹಾಗೂ ರಾಜ್ಯದ ಪಕ್ಷದ ಮುಖಂಡರಿಗೆ ಕೃತಜ್ಞತೆ ತಿಳಿಸಿದ್ದಾರೆ.