
ಮಂಡ್ಯ: 2025-26ನೇ ಸಾಲಿನಲ್ಲಿ ಒಂದೇ ತಿಂಗಳು ಜಿಲ್ಲೆಯಲ್ಲಿ 28 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿರುವುದು ಅಚ್ಚರಿ ಮತ್ತು ಆತಂಕದ ಸಂಗತಿಯಾಗಿದೆ. ಕಳೆದ ವರ್ಷ 186 ಬಾಲ್ಯ ವಿವಾಹ ಪ್ರಕರಣಗಳು ದಾಖಲಾಗಿದ್ದು, ದಿನೇ ದಿನೇ ಹೆಚ್ಚುತ್ತಿರುವ ಬಾಲ್ಯ ವಿವಾಹಗಳನ್ನು ತಡೆಯುವುದು ಸಮಾಜಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ಬಾಲ್ಯ ವಿವಾಹಗಳನ್ನು ತಡೆಯುವುದಕ್ಕೆ ಎಷ್ಟೇ ಕಠಿಣ ಕಾನೂನುಗಳನ್ನು ರೂಪಿಸಿದ್ದರೂ ಅವು ಪರಿಣಾಮಕಾರಿಯಾಗಿ ಜಾರಿಯಾಗದಿರುವುದು ಬಾಲ್ಯ ವಿವಾಹ ಹೆಚ್ಚಳಕ್ಕೆ ಕಾರಣವಾಗಿದೆ. ದಾಖಲಾಗುತ್ತಿರುವ ಪ್ರಕರಣಗಳೆಲ್ಲಾ ಕೇವಲ ಎಫ್ಐಆರ್ಗೆ ಮಾತ್ರ ಸೀಮಿತವಾಗುತ್ತಿವೆ.

3tvkannada.in
ಎಂಟು ತಿಂಗಳ ಗರ್ಭಿಣಿಯಾಗಿದ್ದ ಬಾಲಕಿ ಮಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸಿದ್ದ ವೇಳೆ ವೈದ್ಯರಿಗೆ ಅನುಮಾನ ಬಂದು ತಾಲೂಕು ಆರೋಗ್ಯಾಧಿಕಾರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಅಧಿಕಾರಿಗಳು ಬಾಲಕಿಯ ದಾಖಲಾತಿಗಳನ್ನು ಪರಿಶೀಲಿಸಿದಾಗ ಆಕೆ ಇನ್ನೂ ಪ್ರಾಪ್ತ ವಯಸ್ಸಿಗೆ ಬಾರದಿರುವುದು ಕಂಡು ಬಂದಿತು. ಆ ಹಿನ್ನೆಲೆಯಲ್ಲಿ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

j3tvkannada.in
ಈ ಹಿನ್ನೆಲೆಯಲ್ಲಿ ಮಕ್ಕಳ ರಕ್ಷಣಾಧಿಕಾರಿಗಳನ್ನು ಸ್ಥಳಕ್ಕೆ ಕರೆಸಿಕೊಂಡ ತಾಲೂಕು ಆರೋಗ್ಯಾಧಿಕಾರಿ ಡಾ.ಜವರೇಗೌಡ ಅವರು ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಗರ್ಭಿಣಿಯಾಗಿರುವ ಬಾಲಕಿಯನ್ನು ನೆಹರು ನಗರದಲ್ಲಿರುವ ಸಖಿ ಕೇಂದ್ರದಲ್ಲಿ ಆಶ್ರಯ ದೊರಕಿಸಿ ಪಾಲನೆ ಮಾಡುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಂಟ್ರಲ್ ಠಾಣೆ ಪೊಲೀಸರು ಫೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಂಡ್ಯದಲ್ಲಿ ದಾಖಲಾದ 5 ಪ್ರಕರಣಗಳಲ್ಲಿ, 4 ಬಾಲ್ಯ ವಿವಾಹ ತಡೆದಿದ್ದರೆ, 1 ಮದುವೆ ನಡೆದಿದೆ. ಮದ್ದೂರು ತಾಲೂಕಿನಲ್ಲಿ 4 ಬಾಲ್ಯ ವಿವಾಹ ಪ್ರಕರಣಗಳನ್ನು ತಡೆಯಲಾಗಿದೆ. ಮಳವಳ್ಳಿ ತಾಲೂಕಿನಲ್ಲಿ 1 ಬಾಲ್ಯ ವಿವಾಹ ನಡೆದಿದ್ದು, ಮತ್ತೊಂದನ್ನು ತಡೆಯಲಾಗಿದೆ. ಶ್ರೀರಂಗಪಟ್ಟಣದಲ್ಲೂ 1 ಬಾಲ್ಯ ವಿವಾಹವನ್ನು ತಡೆದು ಇನ್ನೊಂದು ಬಾಲ್ಯ ವಿವಾಹಕ್ಕೆ ತಡೆಯೊಡ್ಡಲಾಗಿದೆ. ಪಾಂಡವಪುರ ತಾಲೂಕಿನಲ್ಲಿ 6 ಬಾಲ್ಯ ವಿವಾಹಗಳನ್ನು ತಡೆಯಲಾಗಿದೆ. ಕೆ.ಆರ್.ಪೇಟೆ ತಾಲೂಕಿನಲ್ಲಿ 7 ಬಾಲ್ಯ ವಿವಾಹ ಪ್ರಕರಣಗಳನ್ನು ದಾಖಲಿಸಲಾಗಿದೆ.
ಕಳೆದೊಂದು ತಿಂಗಳಲ್ಲಿ 28 ಬಾಲ್ಯ ವಿವಾಹ ಪ್ರಕರಣಗಳಲ್ಲಿ 25 ಬಾಲ್ಯ ವಿವಾಹಗಳನ್ನು ತಡೆದಿದ್ದು, 3 ಪ್ರಕರಣಗಳಿಗೆ ಎಫ್ಐಆರ್ ದಾಖಲಿಸಲಾಗಿದೆ. ಮೇಲ್ನೋಟಕ್ಕೆ ಕಂಡು ಬರುತ್ತಿರುವ ಬಾಲ್ಯ ವಿವಾಹ ಪ್ರಕರಣಗಳು ಇಷ್ಟೊಂದು ಸಂಖ್ಯೆಯಲ್ಲಿದ್ದರೆ ಇನ್ನು ಬೆಳಕಿಗೆ ಬಾರದ ರೀತಿಯಲ್ಲಿ ಇನ್ನೆಷ್ಟು ಪ್ರಕರಣಗಳು ನಡೆಯುತ್ತಿವೆ ಎಂಬುದು ಲೆಕ್ಕಕ್ಕೇ ಸಿಗದಂತಾಗಿದೆ.