
ಕರ್ನಾಟಕ: ಮುಡಾ ಅಕ್ರಮ ಸೈಟ್ ಹಂಚಿಕೆ ಮಾಡಿದ್ದ ಪ್ರಕರಣದಲ್ಲಿ ನಿನ್ನೆ ಇ.ಡಿ 100 ಕೋಟಿ ರೂ ಮೌಲ್ಯದ 92 ನಿವೇಶನಗಳನ್ನು ಮುಟ್ಟುಗೋಲು ಹಾಕಿತ್ತು. ಇದರ ಬೆನ್ನಲ್ಲೇ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕದ ಒಟ್ಟು 8 ಕಡೆ ಏಕ ಕಾಲಕ್ಕೆ ಇ.ಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಕೆಲ ಸಂಸದರು, ಶಾಸಕರ ಮನೆ ಮೇಲೆ ಇ.ಡಿ ದಾಳಿ ಮಾಡಿ ಪರಿಶೀಲನೆ ನಡೆಸಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಿಗಮದ ಹಣ ದುರ್ಬಳಕೆಯಾಗಿದೆ ಎಂಬ ಆರೋಪ ಹಿನ್ನೆಲೆ ದಾಳಿ ಮಾಡಲಾಗಿದೆ.

j3tvkannada
ಬಳ್ಳಾರಿಯಲ್ಲಿ 5 ಸ್ಥಳ, ಬೆಂಗಳೂರಿನಲ್ಲಿ 3 ಕಡೆ ಇ.ಡಿ ದಾಳಿ ನಡೆದಿದ್ದು, ಬಳ್ಳಾರಿ ಸಂಸದ ಇ.ತುಕಾರಾಂ, ಕಂಪ್ಲಿ ಕ್ಷೇತ್ರದ ಶಾಸಕ ಜೆ.ಎನ್.ಗಣೇಶ್, ಬಳ್ಳಾರಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ನಾರಾಭರತ್ ರೆಡ್ಡಿ, ಬಳ್ಳಾರಿ ಗ್ರಾಮಾಂತರ ಶಾಸಕ ಬಿ.ನಾಗೇಂದ್ರ ಮತ್ತು ಕೂಡ್ಲಿಗಿ ಶಾಸಕ ಶ್ರೀನಿವಾಸ್ ಮನೆ ಮೇಲೆ ದಾಳಿ ನಡೆಸಿ ಪರಿಶೀಲನೆ ಮಾಡಲಾಗುತ್ತಿದೆ.
ಇಡಿ ಅಧಿಕಾರಿಗಳ ಪ್ರಶ್ನೆಗಳಿಗೆ ಕಕ್ಕಾಬಿಕ್ಕಿಯಾದ ಸಂಸದ ತುಕಾರಾಂ, ಸಂಡೂರಿನಲ್ಲಿರುವ ಸಂಸದ ಇ.ತುಕಾರಾಂ ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ 10ಕ್ಕೂ ಹೆಚ್ಚು ಅಧಿಕಾರಿಗಳಿಂದ ದಾಳಿ ಮಾಡಲಾಗಿದೆ. ಮನೆಯಿಂದ 2 ಕಿ.ಮೀ. ದೂರದಲ್ಲಿ ರಸ್ತೆಗೆ ಬ್ಯಾರಿಕೇಡ್ ಅವಳಡಿಕೆ ಮಾಡಲಾಗಿದೆ. ಬಿ.ನಾಗೇಂದ್ರ ಪಿ.ಎ ಬಳಿ ಸಿಕ್ಕ ಡೈರಿಯನ್ನು ಆಧಾರವಾಗಿಟ್ಟುಕೊಂಡು ಪ್ರಶ್ನೆ ಮಾಡಲಾಗಿದ್ದು, ಅಧಿಕಾರಿಗಳ ಪ್ರಶ್ನೆಗಳಿಗೆ ತನಗೇನೂ ಗೊತ್ತಿಲ್ಲ ಎನ್ನುತ್ತಿದ್ದಾರೆ. ಕಂಪ್ಲಿ ಶಾಸಕ ಜೆ.ಎನ್ ಗಣೇಶ್ ನಿವಾಸ ಮತ್ತು ಕಚೇರಿಯಲ್ಲಿ 10 ಕ್ಕೂ ಹೆಚ್ಚು ಅಧಿಕಾರಿಗಳಿಂದ ಶೋಧ ಮಾಡಲಾಗುತ್ತಿದ್ದು, ಹಣ ಹಂಚಿಕೆ ಬಗ್ಗೆ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.