
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿ.ಬಿ.ಎಂ.ಪಿ) ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಕ್ರಮ ಕೈಗೊಳ್ಳಬೇಕು ಎಂದು ಬಿ.ಬಿ.ಎಂ.ಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ಅವರು ಅಧಿಕಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ಪಾಲಿಕೆ ಕೇಂದ್ರ ಕಚೇರಿಯಲ್ಲಿ ನಿನ್ನೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲು ಮೊದಲ ಆದ್ಯತೆ ನೀಡಬೇಕು. ಮಳೆಗಾಲ ಆರಂಭಕ್ಕೂ ಮುನ್ನವೇ ಎಲ್ಲಾ ರಸ್ತೆ ಗುಂಡಿಗಳನ್ನು ಮುಚ್ಚುವ ಕಾರ್ಯ ಆರಂಭಿಸಬೇಕು ಎಂದು ಸೂಚಿಸಿದರು. ಮಳೆಯಾಗುವ ಸಂದರ್ಭದಲ್ಲಿ ಕೋಲ್ಡ್ ಮಿಕ್ಸ್ ಬಳಸಿಕೊಂಡು ರಸ್ತೆ ಗುಂಡಿಗಳನ್ನು ಮುಚ್ಚಬೇಕು.

j3tvkannada
ಡಾಂಬರೀಕರಣ ಕೈಗೊಂಡಿರುವ ರಸ್ತೆಗಳಲ್ಲಿ ತ್ವರಿತವಾಗಿ ಕೆಲಸ ಮುಗಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ಬಿ.ಬಿ.ಎಂ.ಪಿ ಆಯುಕ್ತರು ತಾಕೀತು ಮಾಡಿದರು. ಸಾಯಿ ಲೇಔಟ್ ಮತ್ತೆ ಜಲಾವೃತವಾಗುವುದನ್ನು ತಪ್ಪಿಸಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಈಗಾಗಲೇ ಬಿ.ಡಿ.ಎ ವತಿಯಿಂದ ಜಾಕ್ವೆಲ್ ನಿರ್ಮಿಸಿದ್ದು ಅದರ ಮೂಲಕ ಮಳೆ ನೀರು ಹೊರ ಹೋಗುವಂತಹ ವ್ಯವಸ್ಥೆ ಮಾಡಲಾಗಿದೆ. ಜೊತೆಗೆ ಪಾಲಿಕೆಯಿಂದಲೂ ಮೋಟಾರು ಪಂಪ್ಗಳನ್ನು ಸ್ಥಳದಲ್ಲಿ ಶಾಶ್ವತವಾಗಿರಿಸಿ, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗದಂತೆ ನೋಡಿಕೊಳ್ಳಬೇಕು. ರೈಲ್ವೆ ವೆಂಟ್ ಕಾಮಗಾರಿ ಚುರುಕುಗೊಳಿಸಿ, ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಬೇಕು ಎಂದು ಮಹೇಶ್ವರ್ ರಾವ್ ಹೇಳಿದರು.

j3tvkannada
ನಗರದಲ್ಲಿ ಹೆಚ್ಚು ಮಳೆಯಾಗುವ ಮುನ್ಸೂಚನೆಯಿದ್ದು ಪ್ರವಾಹಪೀಡಿತ ಪ್ರದೇಶಗಳ ಮೇಲೆ ಹೆಚ್ಚು ನಿಗಾ ವಹಿಸಬೇಕು. ಪ್ರವಾಹ ಉಂಟಾಗಲಿರುವ ಪ್ರದೇಶಗಳಲ್ಲಿ ಏನಾದರೂ ಸಮಸ್ಯೆಗಳಿದ್ದರೆ ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಬಿ.ಬಿ.ಎಂ.ಪಿ ಆಯುಕ್ತರು ಅಧಿಕಾರಿಗಳಿಗೆ ಸಲಹೆ ನೀಡಿದರು ಬಿ.ಬಿ.ಎಂ.ಪಿ ವ್ಯಾಪ್ತಿಯಲ್ಲಿ ಸಾರ್ವಜನಿಕ ಸ್ಥಳಗಳನ್ನು ಗುರುತಿಸಿ ಸಣ್ಣ ಅರಣ್ಯಗಳನ್ನು ನಿರ್ಮಿಸಲು ಕ್ರಮ ವಹಿಸಬೇಕು. ಸ್ಥಳ ಗುರುತಿಸಿದ ಬಳಿಕ ಅರಣ್ಯ ನಿರ್ಮಾಣಕ್ಕೆ ಸೂಕ್ತ ಕ್ರಮ ವಹಿಸಬೇಕು ಎಂದು ಬಿ.ಬಿ.ಎಂ.ಪಿ ಆಯುಕ್ತ ಮಹೇಶ್ವರ್ ರಾವ್ ಸಭೆಯಲ್ಲಿ ಹೇಳಿದರು.
ನಗರದಲ್ಲಿ ಕಸದ ಸಮಸ್ಯೆ, ಬೀದಿ ದೀಪ, ರಸ್ತೆ ಗುಂಡಿ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಸಹಾಯವಾಣಿ ಸಂಖ್ಯೆ, ವಾಟ್ಸಪ್ ಸಂಖ್ಯೆ, ಸಹಾಯ 2.0 ಗೆ ಬರುವ ದೂರುಗಳಿಗೆ ಸ್ಪಂದಿಸಿ ಶೀಘ್ರವಾಗಿ ಬಗೆ ಹರಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಬಿ.ಬಿ.ಎಂ.ಪಿ ಆಯುಕ್ತ ಮಹೇಶ್ವರ್ ರಾವ್ ಕಟ್ಟು ನಿಟ್ಟಿನ ಸೂಚನೆ ನೀಡಿದರು. ವಿಶೇಷ ಆಯುಕ್ತರಾದ ಮುನೀಶ್ ಮೌದ್ಗಿಲ, ಡಾ.ಕೆ.ಹರೀಶ್ ಕುಮಾರ್, ಸುರಳ್ಕರ್ ವಿಕಾಸ್ ಕಿಶೋರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಹ್ಲೋಟ್, ನವೀನ್ಕುಮಾರ್ ರಾಜು, ವಲಯ ಆಯುಕ್ತರಾದ ಸತೀಶ್, ರಮ್ಯಾ, ಕರೀಗೌಡ, ರಮೇಶ್, ಸ್ನೇಹಲ್ ದಿಗ್ವಿಜಯ್ ಬೋಡ್ಕೆ, ಬಿ-ಸ್ಮೈಲ್ ತಾಂತ್ರಿಕ ನಿರ್ದೇಶಕ ಪ್ರಹ್ಲಾದ್ ಇನ್ನೂ ಮುಂತಾದವರು ಸಭೆಯಲ್ಲಿ ಪಾಲ್ಗೊಂಡಿದ್ದರು.