
ಮಂಡ್ಯ: ಗ್ರಾಮಗಳ ಅಭಿವೃದ್ದಿಯಾಗಬೇಕಾದರೆ ಸರ್ಕಾರ ನೀಡಿದ ಅನುದಾನಗಳ ಸದ್ಬಳಕೆಯಾಗಬೇಕು ಎಂದು ಶಾಸಕ ಹೆಚ್.ಟಿ.ಮಂಜು ಅಭಿಪ್ರಾಯಪಟ್ಟರು. ಅವರು ತಾಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ವಿವಿಧ ಗ್ರಾಮಗಳಲ್ಲಿ ಮುಖ್ಯಮಂತ್ರಿಗಳ ವಿಶೇಷ ಅನುದಾನದ ಮೂಲಕ ಸ್ಥಳೀಯ ಶಾಸಕರ ಅಭಿವೃದ್ದಿ ನಿಧಿಯ ಅಡಿಯಲ್ಲಿ ಆರಂಭಗೊಳ್ಳುತ್ತಿರುವ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

j3tvkannada
ಅಕ್ಕಿಹೆಬ್ಬಾಳು ಹೋಬಳಿಯ ಸೋಮನಹಳ್ಳಿ ಗ್ರಾಮದಲ್ಲಿ 50 ಲಕ್ಷ, ದುಡುಕನಹಳ್ಳಿ ಗ್ರಾಮದಲ್ಲಿ 30 ಲಕ್ಷ, ಹೊನ್ನೇನಹಳ್ಳಿ ಗ್ರಾಮದಲ್ಲಿ 25 ಲಕ್ಷ ಮತ್ತು ಪುರ ಗ್ರಾಮದಲ್ಲಿ 10 ಲಕ್ಷ ಸೇರಿ ಒಟ್ಟು 1.15 ಕೋಟಿ ವೆಚ್ಚದ ರಸ್ತೆ ಮತ್ತು ಚರಂಡಿ ಅಭಿವೃದ್ದಿ ಕಾಮಗಾರಿಗೆ ಭೂಮಿಪೂಜೆ ಮಾಡುವ ಮೂಲಕ ಚಾಲನೆ ನೀಡಿದ ಶಾಸಕ ಹೆಚ್.ಟಿ.ಮಂಜು ಸರ್ಕಾರ ನೀಡಿದ ಅನುದಾನವನ್ನು ಬಳಕೆ ಮಾಡಿಕೊಂಡು ಗುಣಮಟ್ಟದ ಕಾಮಗಾರಿ ನಡೆಸಬೇಕು. ಗುಣಮಟ್ಟದ ಕಾಮಗಾರಿಯಲ್ಲಿ ಯಾವುದೇ ರೀತಿಯ ಲೋಪವಾಗದಂತೆ ಎಚ್ಚರ ವಹಿಸುವಂತೆ ಕಾಮಗಾರಿ ಏಜೆನ್ಸಿಯವರಿಗೆ ಮತ್ತು ಸಂಬಂಧಿಸಿದ ಅಧಿಕಾರಿಗಳಿಗೆ ನಾನು ಈಗಾಗಲೇ ಕಟ್ಟು ನಿಟ್ಟಿನ ಸೂಚನೆ ನೀಡಿದ್ದೇನೆ. ಗುಣಮಟ್ಟದ ಕಾಮಗಾರಿಯಲ್ಲಿ ಯಾವುದೇ ರೀತಿಯ ರಾಜಿ ಸಲ್ಲದು. ಮುಖ್ಯ ಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿ ಗ್ರಾಮೀಣ ಪ್ರದೇಶದ ರಸ್ತೆ ಮತ್ತು ಚರಂಡಿಗಳ ಅಭಿವೃದ್ದಿಗಾಗಿ ವಿಶೇಷ ಅನುದಾನ ತಂದಿದ್ದೇನೆ.
ತಮ್ಮ ತಮ್ಮ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳ ಗುಣಮಟ್ಟದ ಬಗ್ಗೆ ಗ್ರಾಮಸ್ಥರು ಎಚ್ಚರ ವಹಿಸಬೇಕು. ಪಿ.ಡಿ.ಓ ಗಳು ಮತ್ತು ಗ್ರಾಮ ಪಂಚಾಯತಿ ಸದಸ್ಯರು ಕಾಮಗಾರಿಯ ಮೇಲೆ ನಿಗಾವಹಿಸಿ ಲೋಪವಾಗದಂತೆ ನೋಡಿಕೊಳ್ಳುವಂತೆ ಶಾಸಕ ಹೆಚ್.ಟಿ.ಮಂಜು ಮನವಿ ಮಾಡಿದರು. ಈ ಸಂದರ್ಭದಲ್ಲಿ ಟಿ.ಎ.ಪಿ.ಸಿ.ಎಂ.ಎಸ್ ಉಪಾಧ್ಯಕ್ಷ ಸೋಮನಹಳ್ಳಿ ಜಿ.ಮೋಹನ್, ತಾಲೂಕು ಪಂಚಾಯತಿ ಮಾಜಿ ಸದಸ್ಯ ಮಾಂಬಳ್ಳಿ ಅಶೋಕ್, ಮಾಂಬಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಕಾಂತರಾಜು,ಮುಖಂಡರಾದ ತಾಲೂಕು ಜೆ.ಡಿ.ಎಸ್ ಮಹಿಳಾ ಘಟಕದ ಅಧ್ಯಕ್ಷೆ ರೇಖಾ ಲೋಕೇಶ್, ಸೋಮನಹಳ್ಳಿ ಪುಟ್ಟಸ್ವಾಮಿಗೌಡ, ಬೋಜರಾಜು, ಜೈನಹಳ್ಳಿ ದಿನೇಶ್,ಶಾಸಕರ ಆಪ್ತ ಸಹಾಯಕರಾದ ಅರಳಕುಪ್ಪೆ ಪ್ರತಾಪ್ ಮತ್ತು ಧ್ರುವಕುಮಾರ್ ಸೇರಿದಂತೆ ಜಿ.ಪಂ ಅಧಿಕಾರಿಗಳು ಮತ್ತು ಆಯಾ ಭಾಗದ ಪಿ.ಡಿ.ಓ ಗಳು ಉಪಸ್ಥಿತರಿದ್ದರು.