
ಬೆಂಗಳೂರು: ಇತ್ತೀಚೆಗೆ ಮಂಡಿಸಿದ್ದ 2025-26ನೇ ಸಾಲಿನ ಬಜೆಟ್ನಲ್ಲಿ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಸಿದ್ದರಾಮಯ್ಯ ಭರ್ಜರಿ ಕೊಡುಗೆಗಳನ್ನು ನೀಡಿದ್ದರು. ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೂ ಶೇ 4ರಷ್ಟು ಮೀಸಲಾತಿ ಕಲ್ಪಿಸಿ ಘೋಷಣೆ ಮಾಡಿದ್ದರು. ಇದೀಗ ಬಜೆಟ್ ಘೋಷಣೆಯ ಬೆನ್ನಲ್ಲೇ ಮುಸ್ಲಿಮರಿಗೆ ಮತ್ತೊಂದು ಕೊಡುಗೆ ನೀಡಲು ಸರ್ಕಾರ ಮುಂದಾಗಿರುವಂತಿದೆ.

ಸಿ.ಎಂ ಸಿದ್ದರಾಮಯ್ಯ ಅವರು ಮುಸ್ಲಿಮರನ್ನು ಅತಿಯಾಗಿ ಓಲೈಕೆ ಮಾಡುತ್ತಾರೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪ ಮಾಡುತ್ತಲೇ ಬಂದಿದೆ. ಆದರೆ ಇದೀಗ ಕರ್ನಾಟಕ ಕಾಂಗ್ರೆಸ್ ಸರ್ಕಾರ ಮತ್ತೊಂದು ಮಹತ್ವದ ಕ್ರಮಕ್ಕೆ ಮುಂದಾಗುವ ಸೂಚನೆ ಸಿಕ್ಕಿದೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಶೇ 4 ರ ಮೀಸಲಾತಿ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಇದೀಗ ಮೀಸಲಾತಿ ಪ್ರಮಾಣವನ್ನು ಶೇ 10ಕ್ಕೆ ಹೆಚ್ಚಿಸಬೇಕೆಂಬ ಬೇಡಿಕೆ ಸರ್ಕಾರದ ಮುಂದಿದೆ.
ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವಂತೆ ಸಿ.ಎಂ ಸಿದ್ದರಾಮಯ್ಯ, ಮತ್ತು ಸಚಿವ ಜಮೀರ್ ಅಹ್ಮದ್ಗೆ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಇಂಜಿನಿಯರ್ಸ್ ಅಸೋಸಿಯೇಷನ್ನಿಂದ ಮನವಿ ಸಲ್ಲಿಕೆಯಾಗಿತ್ತು. ಈ ಮನವಿ ಆಧರಿಸಿ ಕ್ರಮ ಕೈಗೊಳ್ಳುವಂತೆ ಸಚಿವ ಜಮೀರ್ ವಿಶೇಷ ಕರ್ತವ್ಯಾಧಿಕಾರಿ ಅಲ್ಪ ಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.
ಮುಸ್ಲಿಮರಿಗೆ 2 ಬಿ ಮೀಸಲಾತಿಯನ್ನು ಶೇ 10ಕ್ಕೆ ಹೆಚ್ಚಿಸುವ ಬಗ್ಗೆ ಮನವಿ ಸಲ್ಲಿಕೆಯಾಗಿದೆ. ಈ ಬಗ್ಗೆ ಪರಿಶೀಲಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಸಚಿವರು ನಿರ್ದೇಶಿಸಿರುತ್ತಾರೆ ಎಂದು ಜಮೀರ್ ಅಹ್ಮದ್ ಅವರ ವಿಶೇಷ ಕರ್ತವ್ಯಾಧಿಕಾರಿ ಬರೆದ ಪತ್ರದಲ್ಲಿ ಉಲ್ಲೇಖವಾಗಿದೆ.
ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ನೀಡಿರುವುದು ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಬಜೆಟ್ ಘೋಷಣೆ ಬಗ್ಗೆ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಆದರೆ ಆರೋಪಗಳಿಗೆ ಸ್ಪಷ್ಟನೆ ನೀಡಿದ್ದ ಸಿದ್ದರಾಮಯ್ಯ, ಮುಸ್ಲಿಮರಿಗೆ ಘೋಷಿಸಿದ ಅನುದಾನ ಒಟ್ಟು ಲೆಕ್ಕ ನೋಡಿದರೆ ಕಡಿಮೆಯೇ ಇದೆ ಎಂದು ಸಮರ್ಥಿಸಿಕೊಂಡಿದ್ದರು.