
ವಿಜಯಪುರ: ಬಿ.ವೈ ವಿಜಯೇಂದ್ರ ಅವರು ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದಾಗಿನಿಂದಲೂ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಬಿ.ವೈ ವಿಜಯೇಂದ್ರ ಅವರ ವಿರುದ್ಧ ಯತ್ನಾಳ್ ಅವರು ವಿವಾದಾತ್ಮಕ ಹೇಳಿಕೆಗಳನ್ನು ಕೊಡುತ್ತಿದ್ದಾರೆ. ಅಲ್ಲದೆ ಬಿಜೆಪಿ ಹೈಕಮಾಂಡ್ ವಿರುದ್ಧವೂ ಅವರು ಗುಡುಗುತ್ತಲೇ ಇರುತ್ತಾರೆ. ಆದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಯಾವ ಕಾರಣಕ್ಕೆ ಯತ್ನಾಳ್ ವಿರುದ್ದ ಯಾವುದೇ ಕ್ರಮ ತೆಗೆದುಕೊಳ್ಳಲಾಗಿಲ್ಲ ಎನ್ನುವ ಅಚ್ಚರಿಯ ಕಾರಣ ಬಹಿರಂಗವಾಗಿದೆ.

ಅವರ ವಿರುದ್ಧ ಶಿಸ್ತುಕ್ರಮ ತೆಗೆದುಕೊಂಡರೆ ಪ್ರಾದೇಶಿಕ ಪಕ್ಷವನ್ನು ರಚನೆ ಮಾಡುವುದಾಗಿ ಅವರು ಹೇಳಿದ್ದರಿಂದಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಅವರ ವಿರುದ್ಧ ಬಿಜೆಪಿ ಹೈಕಮಾಂಡ್ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಹೇಳಲಾಗುತ್ತಿದೆ.
ಯಾವುದೇ ಕಾರಣಕ್ಕೂ ಬಿ.ವೈ.ವಿಜಯೇಂದ್ರ ಅವರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ಆಗಲ್ಲ. ಒಂದೊಮ್ಮೆ ಪಕ್ಷ ಉಚ್ಚಾಟನೆ ಮಾಡಿದರೆ ಸಹ ಹೆಚ್ಚು ತಲೆಕೆಡಿಸಿಕೊಳ್ಳಲ್ಲ. ನನಗೆ ರಾಜಕೀಯವಾಗಿ ಹಲವು ಆಯ್ಕೆಗಳು ಇವೆ. ಹಿಂದುತ್ವ ಸಿದ್ಧಾಂತವನ್ನಾದರಿಸಿಕೊಂಡು ಪ್ರಾದೇಶಿಕ ಪಕ್ಷ ಕಟ್ಟಲು ಅವಕಾಶ ಇದೆ.
ಸ್ವಂತ ಅಥವಾ ಪ್ರಾದೇಶಿಕ ಪಕ್ಷವನ್ನು ಪ್ರಾರಂಭಿಸಿದರೆ 60ಕ್ಕೂ ಹೆಚ್ಚು ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಾಗಿಯೂ ಅವರು ಹೇಳಿದ್ದರು ಎನ್ನಲಾಗಿದ್ದು. ಇದನ್ನು ಮುಕುಂದ ಅವರು ಬಿಜೆಪಿ ಹೈಕಮಾಂಡ್ಗೆ ಹೇಳಿದ್ದರು ಎನ್ನಲಾಗಿದೆ. ಇದು ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಸೃಷ್ಟಿ ಮಾಡಿದೆ. ಇನ್ನು ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಬಿಜೆಪಿ ಹೈಕಮಾಂಡ್ನಿಂದ ನೋಟಿಸ್ ಬಂದ ಮೇಲೆ ಈ ಸಂಬಂಧ ಚರ್ಚೆ ನಡೆದಿದೆ ಎನ್ನಲಾಗಿದೆ. ಅಲ್ಲದೆ ಬಸನಗೌಡ ಪಾಟೀಲ್ ಯತ್ನಾಳ್ ಬಣವು ಮುಂದಿನ ಕಾರ್ಯ ತಂತ್ರಗಳ ಬಗ್ಗೆ ಚರ್ಚೆ ನಡೆಸಿದೆ ಎಂದು ಹೇಳಲಾಗಿದೆ.
ಇನ್ನು ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರನ್ನು ಬದಲಾಯಿಸುವುದಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಬಣವು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಸಹ ಸಂಪರ್ಕಿಸಿದ್ದರು ಎಂದು ಹೇಳಲಾಗಿದೆ. ದೇವೇಂದ್ರ ಫಡ್ನವಿಸ್ ಅವರ ಮೂಲಕ ಬಿಜೆಪಿ ಹೈಕಮಾಂಡ್ನ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡಲಾಗಿದೆ ಎಂದೂ ಹೇಳಲಾಗಿದೆ. ಇನ್ನು ಹೈಕಮಾಂಡ್ನ ಖಡಕ್ ಸೂಚನೆಯ ಹಿನ್ನೆಲೆಯಲ್ಲಿ ಯತ್ನಾಳ್ ಅವರ ಬಣ ಈಗ ತುಸು ಸೈಲೆಂಟ್ ಆಗಿದೆ ಎನ್ನಲಾಗಿದೆ.