
ತುಮಕೂರು:ಜೂ. ೨೮ ರಂದು ನಗರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗಮಿಸುತ್ತಿದ್ದು, ಸುಮಾರು ೮೦೦ ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಜಿಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ ಪ್ರಭು ತಿಳಿಸಿದರು. ಪಟ್ಟಣದ ತಾಲ್ಲೂಕು ಪಂಚಾಯಿತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಅಂದಿನ ಕಾರ್ಯಕ್ರಮದಲ್ಲಿ ಸಣ್ಣ ನೀರಾವರಿ ಇಲಾಖೆಯ ಎತ್ತಿನಹೊಳೆ ಯೋಜನೆ ಅಡಿಯಲ್ಲಿ ೫೪ ಕೆರೆಗಳಿಗೆ ನೀರು ತುಂಬಿಸುವ ಬೃಹತ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದರು.

j3tvkannada
ಕಾರ್ಯಕ್ರಮವನ್ನು ಐದು ವಿಭಾಗಗಳನ್ನಾಗಿ ವಿಂಗಡಿಸಿಕೊಂಡಿದ್ದು ಶಂಕುಸ್ಥಾಪನೆ, ಉದ್ಘಾಟನೆ, ಸವಲತ್ತುಗಳ ವಿತರಣೆ, ಮಂಜೂರಾತಿ ಆದೇಶ ಪತ್ರ, ಘೋಷಣೆ ಎಂಬುದಾಗಿ ವಿಂಗಡಿಸಲಾಗಿದೆ. ೨೦ಕ್ಕೂ ಹೆಚ್ಚು ವಿವಿಧ ಇಲಾಖೆಗಳ ಕಾರ್ಯಕ್ರಮಗಳಿಗೆ ಚಾಲನೆ ಕೊಡಲಿದ್ದಾರೆ ಎಂದು ಅವರು ಹೇಳಿದರು. ತಾಲ್ಲೂಕಿನಲ್ಲಿ ೫೯ ಗ್ರಂಥಾಲಯಗಳ ಸ್ಥಾಪನೆಗೆ ಚಾಲನೆ, ಸಬ್ ರಿಜಿಸ್ಟ್ರಾರ್ ಕಚೇರಿ ನಿರ್ಮಾಣಕ್ಕೆ ೧೦ ಕೋಟಿ ರೂ ಪಾಲಿಟೆಕ್ನಿಕ್ ಕಾಲೇಜು ನಿರ್ಮಾಣಕ್ಕೆ ೭ ಕೋಟಿ ರೂ. ಮಧುಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮೇಲ್ದರ್ಜೆಗೇರಿಸಲು ನಾಲ್ಕು ಕೋಟಿ ಬಿಡುಗಡೆಯಾಗಿದ್ದು, ಅಂದು ಶಂಕುಸ್ಥಾಪನೆಯನ್ನು ನೆರವೇರಿಸಲಿದ್ದೇವೆ ಎಂದರು.
ಅಧಿಕಾರಿಗಳು ನಾಗರಿಕರಿಗೆ ಸ್ಪಂದಿಸುವ ಕೆಲಸ ಮಾಡಬೇಕು. ಜನ ಸಾಮಾನ್ಯರಿಗೆ ಸವಲತ್ತುಗಳು ಸಿಗುವಂತಾಗಬೇಕು. ಮುಂದಿನ ದಿನಗಳಲ್ಲಿ ವಿವಿಧ ಇಲಾಖೆಗಳಿಗೆ ದಿಢೀರ್ ಭೇಟಿ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದ ಅವರು, ಎನ್.ಆರ್.ಇ.ಜಿ ಕಾಮಗಾರಿಯಲ್ಲಿ ಮಧುಗಿರಿ ತಾಲ್ಲೂಕು ಜಿಲ್ಲೆಯಲ್ಲಿ ಮೊದಲನೇ ಸ್ಥಾನ ಪಡೆದಿದೆ ಎಂದು ಅವರು ಮಾಹಿತಿ ನೀಡಿದರು. ಶಾಲೆಗಳಲ್ಲಿ ಶಿಕ್ಷಕರು ಸಮಯಕ್ಕೆ ಸರಿಯಾಗಿ ಹಾಜರಿರಬೇಕು. ಇಲ್ಲದಿದ್ದರೆ ಎಲ್ಬಿಡಬ್ಲ್ಯೂ ಮಾಡುವಂತೆ ಸೂಚಿಸಿದ ಅವರು, ಮುಖ್ಯವಾಗಿ ತಮ್ಮ ತಮ್ಮ ಕಚೇರಿಗಳಲ್ಲಿ ಕಚೇರಿ ಆವರಣಗಳನ್ನು ಸ್ವಚ್ಛವಾಗಿಟ್ಟು ಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ನಂತರ ಪುರವಾರ ಮತ್ತು ಮುದ್ದೆನಪಾಳ್ಯ ಶಾಲೆಗಳಿಗೆ ಮತ್ತು ಗೊಂದಿಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ತಹಶೀಲ್ದಾರ್ ಶಿರೀನ್ ತಾಜ್, ತಾಲ್ಲೂಕು ಪಂಚಾಯತ್ ಇಓ ಲಕ್ಷ್ಮಣ್, ಯೋಜನಾಧಿಕಾರಿ ಮಧುಸೂದನ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಶಾರದಮ್ಮ, ಯೋಜನಾ ನಿರ್ದೇಶಕ ನಾರಾಯಣಸ್ವಾಮಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ಬಿಇಓ ಹನುಮಂತರಾಯಪ್ಪ, ಪುರಸಭಾ ಮುಖ್ಯಾಧಿಕಾರಿ ಸುರೇಶ್, ವಲಯ ಅರಣ್ಯಾಧಿಕಾರಿ ಸುರೇಶ್, ಗ್ರಾಮೀಣ ಕುಡಿಯುವ ನೀರು ಇಲಾಖೆಯ ಲೋಕೇಶಪ್ಪ, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಭಿಯಂತರರಾದ ಹನುಮಂತಪ್ಪ, ಮಂಜುನಾಥ್, ಶಿಕ್ಷಣಾಧಿಕಾರಿ ರಾಜಣ್ಣ ಮತ್ತಿತರರು ಉಪಸ್ಥಿತರಿದ್ದರು.