
ಮೈಸೂರು: ಪ್ರಪಂಚಕ್ಕೆ ಮಾದರಿಯಾಗಿರುವ ನಾಡ ಪ್ರಭು ಕೆಂಪೇಗೌಡ ಅವರ ಜಯಂತಿಯನ್ನು ಜೂನ್.27ರಂದು ಆಚರಿಸಲಾಗುತ್ತಿದ್ದು ಬೆಳಗ್ಗೆ 9 ಗಂಟೆಗೆ ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಮೆರವಣಿಗೆ ಹೊರಟು ಕಲಾಮಂದಿರ ತಲುಪುತ್ತದೆ. ನಂತರ ವೇದಿಕೆ ಕಾರ್ಯಕ್ರಮವನ್ನು 11.30ಕ್ಕೆ ಕಲಾಮಂದಿರದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಪಿ.ಶಿವರಾಜು ತಿಳಿಸಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ನಡೆದ ಕೆಂಪೇಗೌಡ ಜಯಂತಿಯ ಸಂಬಂಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬೆಂಗಳೂರನ್ನು ನಿರ್ಮಾಣ ಮಾಡಿದಂತಹ ದೊರೆ ಕೆಂಪೇಗೌಡ. ಇವರ ಕೊಡುಗೆ, ಸಾಧನೆ, ಇಡೀ ವಿಶ್ವಕ್ಕೆ ಆದರ್ಶವಾಗಿದೆ.

j3tvkannada
ಸರ್ಕಾರದ ಶಿಷ್ಟಾಚಾರದಂತೆ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗುವುದು. ಈ ಸಂಬಂಧ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಮಾಡಲು ಅಗತ್ಯ ಕ್ರಮವಹಿಸಿ, ಜಯಂತಿ ನಡೆಯುವ ಸ್ಥಳದ ಸ್ವಚ್ಚತೆ, ಕುಡಿಯುವ ನೀರಿನ ವ್ಯವಸ್ಥೆ, ಶಾಮಿಯಾನ ವ್ಯವಸ್ಥೆ ಮಾಡಲು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಸೂಚಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಎಂ.ಡಿ.ಸುದರ್ಶನ್ ಮಾತನಾಡಿ, ಕಾರ್ಯಕ್ರಮದಲ್ಲಿ ಕಲಾ ತಂಡಗಳಿಂದ ಗೀತ ಗಾಯನ ಏರ್ಪಡಿಸಲಾಗುವುದು.
ಆಹ್ವಾನ ಪತ್ರಿಕೆಯ ಮುದ್ರಣ ಮಾಡಿ ಸರ್ಕಾರದ ಶಿಷ್ಟಾಚಾರದಂತೆ ಜನ ಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಈ ಸಂಬಂಧ ಸಮಿತಿಯವರು ಸಹಕರಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಕರ್ನಾಟಕ ಕಾವಲು ಪಡೆಯ ಅಧ್ಯಕ್ಷ ಮೋಹನ್ ಕುಮಾರ್, ಮೈಸೂರಿನ ಚಳವಳಿದಾರ ಅರವಿಂದ್ ಶರ್ಮಾ, ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ ರಾಜ್ಯಾಧ್ಯಕ್ಷೆ ಯಮುನಾ ಹೆಚ್.ಎಲ್ ಹಾಗೂ ಕೆಂಪೇಗೌಡ ಸಮಿತಿಯ ಮುಖಂಡರುಗಳು ಉಪಸ್ಥಿತರಿದ್ದರು.