
ಬಾಗಲಕೋಟೆ: ಬಾಗಲಕೋಟೆ, ಉತ್ತರ ಕರ್ನಾಟಕ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಕಳೆದ ಪೆಬ್ರ ವರಿಯಿಂದಲೇ ತಾಪಮಾನ ಹೆಚ್ಚಾಗಿದ್ದು ಇದೀಗ ಬಿಸಿಲಿನ ಬೇಗೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಬಾಗಲಕೋಟೆ ಜಿಲ್ಲೆಯಲ್ಲಿ ಈ ವಾರಾಂತ್ಯದಲ್ಲಿ 39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶದಾಖಲಾಗುವ ನಿರೀಕ್ಷೆ ಇದೆ.
ಇದರ ಅಕ್ಕಪಕ್ಕದ ಜಿಲ್ಲೆಗಳಲ್ಲಿ ತಾಪಮಾನ, ಎಷ್ಟಿದೆ ಎಂಬ ಹವಾಮಾನ ವರದಿಯ ಮುನ್ಸೂಚನೆಯನ್ನು ನೋಡುವುದಾದರೆ, ದಕ್ಷಿಣ ಭಾಗದ ಜಿಲ್ಲೆಗಳಲ್ಲಿ ಈಗಾಗಲೇ ಮಳೆರಾಯನ ಆಗಮನವಾಗಿದೆ. ಉತ್ತರ ಒಳನಾಡಿನ ಬಾಗಲಕೋಟೆಯಲ್ಲಿ ಇಂದು ಗುರುವಾರ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ಮುಂದಿನ ಮೂರರಿಂದ ಐದು ದಿನಗಳಲ್ಲಿ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ. ಬಾಗಲಕೋಟೆಯಲ್ಲಿ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆಯು ತೋಟಗಾರಿಕೆ ಬೆಳೆಗಳಾದ ದಾಳಿಂಬೆ, ದ್ರಾಕ್ಷಿ, ಪೇರಲ, ಪಪ್ಪಾಯಿ, ಲಿಂಬೆ ಸೇರಿದಂತೆ ಇನ್ನಿತರ ಬೆಳೆಗಳನ್ನು ಬೆಳೆಯುವಲ್ಲಿ ಹೆಸರುವಾಸಿಯಾಗಿದೆ. ಇಲ್ಲಿ ನೀರಾವರಿ ಹಾಗೂ ಮಳೆಗೆ ಅನುಗುಣವಾಗುವಂತಹ ಬೆಳೆಗಳನ್ನು ಬೆಳೆಯಲಾಗುತ್ತದೆ. ಆದರೆ ಈಗ ರೈತರು ಬಿಸಿಲಿಗೆ ತತ್ತರಿಸಿದ್ದಾರೆ. ಪೂರ್ವ ಮುಂಗಾರು ಮಳೆ ಉತ್ತಮವಾಗಿ ಸುರಿದರೆ, ಮುಂಗಾರು ಬಿತ್ತನೆಗೆ ಹೊಲವನ್ನು ತಯಾರುಗೊಳಿಸಲು ಕಾಯುತ್ತಿದ್ದಾರೆ.
ಜಿಲ್ಲೆಯ ಸುತ್ತಮುತ್ತಲಿನ ಜಿಲ್ಲೆಗಳ ಪರಿಸ್ಥಿತಿಯು ಇದೇ ರೀತಿ ಇದೆ. ವಿಜಯಪುರದಲ್ಲಿ 36 ಡಿಗ್ರಿ ಸೆಲ್ಸಿಯಸ್, ಕೊಪ್ಪಳದಲ್ಲಿ 34.6 ಡಿಗ್ರಿ ಸೆಲ್ಸಿಯಸ್, ಗದಗ 37, ಧಾರವಾಡ 36.2, ಬೆಳಗಾವಿ ನಗರ 35, ಧಾರವಾಡ 36.2 ಮತ್ತು ಹಾವೇರಿ 35.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಮುಂದಿನ ಎರಡು ತಿಂಗಳಲ್ಲಿ ಈ ಜಿಲ್ಲೆಗಳಲ್ಲಿ ತಾಪಮಾನ ಇನ್ನಷ್ಟು ದಾಖಲಾಗುವ ಸಾಧ್ಯತೆಯು ಇದೆ. ಸದ್ಯಕ್ಕೆ ಉತ್ತರ ಒಳನಾಡಿನಲ್ಲಿ ಯಾವುದೇ ಮಳೆ ಮುನ್ಸೂಚನೆ ಇಲ್ಲ ಎನ್ನಲಾಗಿದೆ.
ಕರ್ನಾಟಕದ ಗರಿಷ್ಠ ತಾಪಮಾನ ಕಲಬುರಗಿಯಲ್ಲಿ 39 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವು ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತ್ಯಧಿಕ ತಾಪಮಾನ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಪೂರ್ವ ಮುಂಗಾರು ಇಲ್ಲಿ ಸಕ್ರಿಯವಾಗಬಹುದು ಎಂದು ಇಲ್ಲಿನ ನಿವಾಸಿಗಳು ಕಾಯುತ್ತಿದ್ದಾರೆ.