
ಹುಬ್ಬಳ್ಳಿ :ವಾಣಿಜ್ಯ ನಗರಿ ಹುಬ್ಬಳ್ಳಿಯ ಹೃದಯ ಭಾಗದಲ್ಲಿರುವ ಕಿತ್ತೂರು ರಾಣಿ ವೃತ್ತದ ಬಳಿ ಫ್ಲೈ ಓವರ್ ಕಾಮಗಾರಿ ನಿರ್ಮಾಣಕ್ಕೆ 2020 ಆಗಸ್ಟ್ 31 ರಂದೇ ಮಂಜೂರಾತಿ ನೀಡಿ, 2021ರ ಜೂನ್ 4ರಂದು ಚಾಲನೆ ನೀಡಲಾಗಿತ್ತು. 2024 ರ ಮಾರ್ಚ್ 20ರೊಳಗೆ ಕಾಮಗಾರಿ ಪೂರ್ಣಗೊಳಿಸಲು ಕಾಲಮಿತಿಯನ್ನು ಕೂಡಾ ನೀಡಲಾಗಿತ್ತು.

j3tvkannada.in
ಆದರೆ ನಾಲ್ಕು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ. ಮಂದಗತಿಯಲ್ಲಿ ಸಾಗುತ್ತಿರುವ ಫ್ಲೈ ಓವರ್ ಕಾಮಗಾರಿ ಪ್ರಗತಿಯ ಕುರಿತು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ್ದಾರೆ. ಫ್ಲೈ ಓವರ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಹಣವನ್ನು ನೀಡಿದ್ದರೂ ಕಾಮಗಾರಿ ಇನ್ನೂ ಅರ್ಧದಷ್ಟೂ ಪೂರ್ಣಗೊಂಡಿಲ್ಲ. ರಾಜ್ಯ ಸರ್ಕಾರ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ತೋರಿದ ವಿಳಂಬ ನೀತಿಯೇ ಕಾರಣ ಎಂದು ಸಚಿವರಿಬ್ಬರೂ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
ಹುಬ್ಬಳ್ಳಿಯಲ್ಲಿ 3.61 ಕೀ.ಮೀ. ಉದ್ದದ ಈ ಫ್ಲೈ ಓವರ್ ಕಾಮಗಾರಿಗೆ ಸಿವಿಲ್ ಕಾಸ್ಟ್ ಆಗಿ 196.99 ಕೋಟಿ ರೂಪಾಯಿ ನಿಗದಿಪಡಿಸಿದ್ದು, ಇದಕ್ಕೆ ಹೆಚ್ಚುವರಿ 35.76 ಕೋಟಿ ಸೇರಿಸಿ 232.75 ಕೋಟಿ ನಿಗದಿಪಡಿಸಲಾಗಿತ್ತು. ಒಟ್ಟು ಯೋಜನಾ ವೆಚ್ಚ 298 ಕೋಟಿ ನಿಗದಿಪಡಿಸಲಾಗಿತ್ತು. ಸಚಿವ ಪ್ರಲ್ಹಾದ ಜೋಶಿ ಅವರ ಒತ್ತಾಸೆಯಂತೆ ಈಗ ಇದಕ್ಕೆ 51.49 ಕೋಟಿ ಹೆಚ್ಚುವರಿ ಅನುದಾನ ನೀಡಲು ಕೇಂದ್ರ ಹೆದ್ದಾರಿ ಸಚಿವ ಗಡ್ಕರಿ ಸಮ್ಮತಿಸಿದ್ದಾರೆ. ಅದರಂತೆ ಒಟ್ಟು ಯೋಜನಾ ವೆಚ್ಚ ಈಗ 349.49 ಕೋಟಿ ತಲುಪಿದೆ.
ಆರ್ಥಿಕ ಸಮಸ್ಯೆ ಎದುರಿಸುತ್ತಿದ್ದರೆ ಈ ಕಾರಿಡಾರ್ ಕಾಮಗಾರಿಗಾಗಿ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಮೂಲಕ ವಿಶೇಷ ಹಣಕಾಸು ನೆರವು ನೀಡುವುದಾಗಿ ಸಚಿವ ನಿತಿನ್ ಗಡ್ಕರಿ ಇದೇ ವೇಳೆ ಭರವಸೆ ನೀಡಿದರು. ಅಲ್ಲದೇ, ಕೂಡಲೇ ಕಾಮಗಾರಿಗೆ ವೇಗ ನೀಡಿ ಎಂದು ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ಸಹ ನೀಡಿದರು. ಸಕಾಲದಲ್ಲಿ ಯೋಜನೆ ಪೂರ್ಣಗೊಳಿಸಲು ಕಾಲಮಿತಿ ನಿಗದಿಪಡಿಸಿ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ಸಹ ನೀಡಿದರು.