ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ ಅವರು ಬಯಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ಧವಿದೆ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದರು.
ದಾವಣಗೆರೆಯಲ್ಲಿ ಶಾಸಕ ಶಾಮನೂರು ಶಿವಶಂಕರಪ್ಪ ಅವರ 95 ನೇ ಜನ್ಮದಿನದ ಪ್ರಯುಕ್ತ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಶಿವಶಂಕರಪ್ಪನವರಿಗೆ ಶುಭ ಕೋರಿದರು. ಶಿವಶಂಕರಪ್ಪನವರು ಆರೋಗ್ಯವಾಗಿದ್ದು, ಶತಾಯುಷಿಯಾಗಲಿದ್ದಾರೆ. ಅವರು ಬಯಸಿದರೆ ಪಕ್ಷವು ಮತ್ತೆ ಟಿಕೆಟ್ ನೀಡಲು ಸಿದ್ಧವಿದೆ ಎಂದು ಸಿದ್ದರಾಮಯ್ಯ ತಿಳಿಸಿದರು. ಅಂತರಜಾತಿ ವಿವಾಹಗಳು ಹೆಚ್ಚಾಗಬೇಕು ಎಂದು ಅವರು ಹೇಳಿದರು.

ದಾವಣಗೆರೆ ನಗರದಲ್ಲಿ ಸೋಮವಾರ ಶಾಸಕ ಶಾಮನೂರು ಶಿವಶಂಕರಪ್ಪ ಅವರ 95 ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರ ಹುಟ್ಟು ಹಬ್ಬಕ್ಕೆ ಶುಭ ಕೋರಿ ಮಾತನಾಡಿದರು. ಇವರ ಉತ್ಸಾಹ ಮತ್ತು ಕ್ರಿಯಾಶೀಲತೆ ನೋಡಿದರೆ ಮತ್ತೆ ಚುನಾವಣೆಗೆ ನಿಲ್ಲಬಹುದು ಅವರು ಉತ್ಸಾಹ ತೋರಿದರೆ ಪಕ್ಷ ಟಿಕೆಟ್ ಕೊಡಲು ಸಿದ್ಧ ಎಂಬ ಸಂದೇಶ ರವಾನಿಸಿದರು.
ಅಂತರ್ಜಾತಿ, ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ಆದರೆ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ. ಲಿಂಗ ತಾರತಮ್ಯ, ಜಾತಿ ತಾರತಮ್ಯ ನಿವಾರಣೆ ಆಗಬೇಕಾದರೆ ಇಂಥಾ ಸಾಮೂಹಿಕ ವಿವಾಹಗಳು , ಅಂತರಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ನಮ್ಮ ಸರಕಾರ ಮಹಿಳೆಯರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಕಾರ್ಯಕ್ರಮಗಳನ್ನು ಹಾಗೂ ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆ ಎಂದು ಮಾಹಿತಿ ನೀಡಿದರು. ಜಾತಿ ಮತ್ತು ವರ್ಗ ಇಲ್ಲದ ಸಮಾಜ ನಿರ್ಮಾಣ ಬಸವಣ್ಣ ಮತ್ತು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರಕಾರ ಈ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದು ಹೇಳಿದರು.

ಹೊಸದಾಗಿ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ಕೂಡಲೇ ಆರಂಭಿಸಲು ಹಿಂದುಳಿದ ವರ್ಗಗಳ ಆಯೋಗಕ್ಕೆ ಈಗಾಗಲೇ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಾವಣಗೆರೆಯಲ್ಲಿ ಸೋಮವಾರ ಮಾಧ್ಯಮದವರ ಜತೆ ಮಾತನಾಡಿದ ಅವರು ಕೇಂದ್ರದ ಜಾತಿ ಗಣತಿಗೂ ರಾಜ್ಯದ ಸಮೀಕ್ಷೆಗೂ ವ್ಯತ್ಯಾಸವಿದೆ. ಕೇಂದ್ರದವರು ಈಗಾಗಲೇ 2027ಕ್ಕೆ ಸಮೀಕ್ಷೆ ನಡೆಸುವುದಾಗಿ ಹೇಳಿದ್ದಾರೆ. ಅವರು ಮಾಡುವುದು ಜಾತಿಗಣತಿ ಅಷ್ಟೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸುವುದಾಗಿ ಎಲ್ಲಿಯೂ ಹೇಳಿಲ್ಲ. ಅವರು ಸಮೀಕ್ಷೆ ಮಾಡಲಿ ನಮ್ಮ ತಕರಾರಿಲ್ಲ.
ನಮ್ಮದು ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ, ಇದರಲ್ಲಿ ಜಾತಿಗಣತಿಯೂ ಸೇರಿರುತ್ತದೆ ಎಂದು ತಿಳಿಸಿದರು. ಜಾತಿ ಗಣತಿಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಿದಾಗ ಮಾತ್ರ ನಾವು ಸಾಮಾಜಿಕ ನ್ಯಾಯ ಕೊಡಲು ಸಾಧ್ಯ. ಆದ್ದರಿಂದ ಹೊಸದಾಗಿ ಸಮೀಕ್ಷೆ ಮಾಡುತ್ತಿದ್ದೇವೆ. ಈಗಾಗಲೇ ನಾವು ನಡೆಸಿದ ಸಮೀಕ್ಷೆಗೆ ಕೆಲವರಿಂದ ಆಕ್ಷೇಪಗಳು ವ್ಯಕ್ತವಾಗಿದ್ದವು. ಅದಕ್ಕಿಂತ ಮುಖ್ಯವಾಗಿ ಸೆಕ್ಷನ್ 11ರ ಪ್ರಕಾರ ಯಾವುದೇ ಸಮೀಕ್ಷೆ ಮಾಡಿ 10 ವರ್ಷಗಳು ಕಳೆದಿದ್ದರೆ ಹೊಸದಾಗಿ ಸಮೀಕ್ಷೆ ಮಾಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯ ವ್ಯಕ್ತಪಡಿಸಿದರು.