
ದಾವಣಗೆರೆ: ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಸಿ.ಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲು ಹೋಗಿದ್ದ ವೇಳೆ ಪೊಲೀಸರು ರೈತರ ಜೊತೆ ಅಮಾನವೀಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

j3tvkannada
ಸಿ.ಎಂ ಸಿದ್ದರಾಮಯ್ಯ ದಾವಣಗೆರೆಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮ ಹಾಗೂ ಶಾಸಕ ಶಾಮನೂರು ಶಿವಶಂಕರಪ್ಪನವರ 95 ನೇ ಹುಟ್ಟುಹಬ್ಬ ಆಚರಣೆ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಸರ್ಕೀಟ್ ಹೌಸ್ ಬಳಿ ರೈತರು ಮನವಿ ಪತ್ರ ನೀಡಲು ಬಂದಿದ್ದರು. ಈ ಸಂದರ್ಭದಲ್ಲಿ ಭದ್ರತಾ ಸಿಬ್ಬಂದಿ ಹಾಗೂ ಪೊಲೀಸರು, ಸಿ.ಎಂಗೆ ಮನವಿ ಪತ್ರ ಕೊಡಲು ಬಂದಿದ್ದ ರೈತರಿಗೆ ಅನುವು ಮಾಡಿಕೊಟ್ಟಿಲ್ಲ ಎನ್ನಲಾಗಿದೆ. ಅಲ್ಲದೇ ರೈತರ ಎದೆಗೆ ಕೈ ಹಾಕಿ ದಬ್ಬಿ ಕೆಳಗೆ ಬೀಳಿಸಿ ಕಾಲಿನಿಂದ ಒದ್ದಿದ್ದಾರೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಸಿ.ಎಂ ಭದ್ರತಾ ಸಿಬ್ಬಂದಿ ವಿರುದ್ಧ ರೈತ ಮುಖಂಡ ಬಲ್ಲೂರು ರವಿಕುಮಾರ್ ಎಂಬುವವರು ವಿದ್ಯಾನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ನೀಡಲು ಬಂದ ವೇಳೆ ಪೋಲೀಸರು ರೈತರನ್ನು ತಳ್ಳಿದ್ದಾರೆಂದು ಸಿಟ್ಟಾಗಿ ಸಿ.ಎಂ ಕಾರಿನ ಮುಂದೆ ಮಲಗಿ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಂತರ ರೈತರ ಆಕ್ರೋಶಕ್ಕೆ ಮಣಿದ ಪೋಲೀಸರು ಬಲ್ಲೂರು ರವಿಕುಮಾರ್ ಅವರನ್ನು ಸಿ.ಎಂ ಬಳಿ ತೆರಳಲು ಅನುವು ಮಾಡಿಕೊಟ್ಟರು.