
ವಿಜಯಪುರ: ಜಿಲ್ಲಾ ಆಸ್ಪತ್ರೆಯನ್ನು ರಾಜ್ಯದಲ್ಲಿಯೇ ಮಾದರಿ ಆಸ್ಪತ್ರೆಯನ್ನಾಗಿ ಪರಿವರ್ತಿಸುತ್ತಿರುವ ಹಾಗೂ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸುವಲ್ಲಿ ಪ್ರಾಮಾಣಿಕ ಕಾರ್ಯ ಮಾಡುತ್ತಿರುವ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಅವರಿಗೆ ವಿಜಯಪುರ ನಗರದ ಸಮೃದ್ಧಿ ಮಹಿಳಾ ಸಂಸ್ಥೆಯ ಪದಾಧಿಕಾರಿಗಳು ಸನ್ಮಾನಿಸಿ ಗೌರವಿಸಿದರು.

3tvkannada.in
ವಿಜಯಪುರ ಜಿಲ್ಲಾ ಆಸ್ಪತ್ರೆಯು ಕಾಯಕಲ್ಪ ಒಳಗೊಂಡಂತೆ ಹತ್ತಾರು ಪ್ರಶಸ್ತಿ ಪಡೆದುಕೊಂಡಿದೆ. ಆಸ್ಪತ್ರೆಯ ಮುಖ್ಯಸ್ಥ ಡಾ. ಶಿವಾನಂದ ಮಾಸ್ತಿಹೊಳಿ ಅವರು ಹಾಗೂ ಅವರ ಎಲ್ಲಾ ಸಿಬ್ಬಂದಿ ವರ್ಗ ಸಾರ್ವಜನಿಕರಿಗೆ ಉತ್ತಮ ಸೇವೆ ನೀಡುವುದರೊಂದಿಗೆ ರೋಗಿಗಳಿಗೆ ಪೂರಕ ಪರಿಸರ ನಿರ್ಮಾಣ ಮಾಡುವ ಕಾರ್ಯ ಮಾಡುತ್ತಿದ್ದಾರೆ ಎಂದು ಹಲವಾರು ಜನರು ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.
ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಶಿವಾನಂದ ಮಾಸ್ತಿಹೊಳಿ ಸನ್ಮಾನ ಸ್ವೀಕರಿಸಿ ಮಾತನಾಡಿ, ಸ್ವಯಂ ಸೇವಾ ಸಂಸ್ಥೆಗಳು ಯಾವುದೇ ಫಲಾಪೇಕ್ಷೆ ಇಲ್ಲದೆ ಸಾಮಾಜಿಕ ಕಾರ್ಯ ಮಾಡುತ್ತಾರೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದಾದರೂ ಶಿಬಿರಗಳನ್ನು ಹಮ್ಮಿಕೊಂಡರೆ ನಮ್ಮ ಸಿಬ್ಬಂದಿಗಳನ್ನು ನಿಯೋಜನೆ ಮಾಡುತ್ತೇವೆ ಹಾಗೂ ಜಿಲ್ಲಾ ಆಸ್ಪತ್ರೆಯ ಅಭಿವೃದ್ಧಿಗೆ ಜಿಲ್ಲೆಯ ಸಂಘ ಸಂಸ್ಥೆಗಳ ಸಹಕಾರ ಅತಿ ಅವಶ್ಯಕವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಮೃದ್ಧಿ ಸಂಸ್ಥೆಯ ಅಧ್ಯಕ್ಷೆ ಸುಕನ್ಯಾ ಹೇರಲಗಿ, ಜಿಲ್ಲಾ ಆಸ್ಪತ್ರೆಯ ಹಿರಿಯ ಆಪ್ತ ಸಮಾಲೋಚಕ ರವಿ ಕಿತ್ತೂರ, ಆರತಿ ಹಳ್ಳಿ, ಗೀತಾ ಹನುಮಂತರಾವ್, ಶುಶ್ರೂಷಾ ಅಧಿಕಾರಿ ಸುರೇಂದ್ರ ಮಾನಕರ, ಆಸ್ಪತ್ರೆಯ ಮೇಲ್ವಿಚಾರಕರಾದ ವೀಣಾ ಕುಲಕರ್ಣಿ, ಬಾಳಮ್ಮ ಕೋಟ್ಯಾಳ ಇತರರು ಉಪಸ್ಥಿತರಿದ್ದರು.