
ಗದಗ: ಜಿಲ್ಲೆಯ ಕಪ್ಪತಗುಡ್ಡ ವನ್ಯ ಜೀವಿಧಾಮದ 322 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ಅಂತಿಮ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಕರಡು ಅಧಿಸೂಚನೆ ಹೊರಡಿಸಿ ಆಕ್ಷೇಪಣೆ ಸಲ್ಲಿಸಲು 60 ದಿನಗಳ ಕಾಲಾವಕಾಶ ನೀಡಲಾಗಿತ್ತು. ಅದಾದ ಬಳಿಕ ಅಂತಿಮ ಅಧಿಸೂಚನೆ ಹೊರಡಿಸಿದೆ.

j3tvkannada
ಪರಿಸರದ ಸೂಕ್ಷ್ಮ ಪ್ರದೇಶದಲ್ಲಿ ಕಂದಾಯ ಗ್ರಾಮಗಳ 298.89 ಚದರ ಕಿ.ಮೀ. ಹಾಗೂ ಅಧಿಸೂಚಿತ ಅರಣ್ಯ ಪ್ರದೇಶಗಳ 23.80 ಕಿ.ಮೀ ಸೇರಿದೆ. ಈ ಪ್ರದೇಶದಲ್ಲಿ 62 ಗ್ರಾಮಗಳಿವೆ. ಪರಿಸರ ಸೂಕ್ಷ್ಮ ಪ್ರದೇಶವನ್ನು ಕನಿಷ್ಠ ಒಂದು ಕಿ.ಮೀನಿಂದ ಗರಿಷ್ಠ 4.30 ಕಿ.ಮೀವರೆಗೆ ಗುರುತಿಸಲಾಗಿದೆ. ಉತ್ತರ ದಿಕ್ಕಿನಲ್ಲಿ 1 ಕಿ.ಮೀನಿಂದ 3.25 ಕಿ.ಮೀವರೆಗೆ, ಪಶ್ಚಿಮ ದಿಕ್ಕಿನಲ್ಲಿ 4.30 ಕಿ.ಮೀವರೆಗೆ, ವಾಯವ್ಯ ದಿಕ್ಕಿನಲ್ಲಿ 1.96 ಕಿ.ಮೀವರೆಗೆ ಪರಿಸರ ಸೂಕ್ಷ್ಮ ಪ್ರದೇಶವೆಂದು ನಿಗದಿಪಡಿಸಲಾಗಿದೆ. ಉಳಿದ ದಿಕ್ಕುಗಳಲ್ಲಿ 1 ಕಿ.ಮೀ ಮಾತ್ರ ಇದೆ. ವನ್ಯಜೀವಿ ಧಾಮದ 10 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ಅನುಮತಿ ಕೋರಿ ಒಟ್ಟು 28 ಪ್ರಸ್ತಾವಗಳು ಕರ್ನಾಟಕ ಸರ್ಕಾರಕ್ಕೆ ಸಲ್ಲಿಕೆಯಾಗಿವೆ.
ಈಗಿರುವ ಹಾಗೂ ಹೊಸ ವಾಣಿಜ್ಯ ಗಣಿಗಾರಿಕೆ, ಕಲ್ಲು ಗಣಿಗಾರಿಕೆ, ಕಲ್ಲು ಪುಡಿ ಮಾಡುವ ಘಟಕಗಳನ್ನು ಸಂಪೂರ್ಣ ನಿಷೇಧಿಸಲಾಗಿದೆ. ಮಾಲಿನ್ಯಕ್ಕೆ ಕಾರಣವಾಗುವ ಕೈಗಾರಿಕೆಗಳ ಸ್ಥಾಪನೆಗೆ ನಿರ್ಬಂಧ ಇರಲಿದೆ. ಯಾವುದೇ ಹೊಸ ಉಷ್ಣ ವಿದ್ಯುತ್ ಯೋಜನೆಗಳನ್ನು ಕೈಗೆತ್ತಿಕೊಳ್ಳುವಂತಿಲ್ಲ. ಯಾವುದೇ ಅಪಾಯಕಾರಿ ವಸ್ತು ಬಳಕೆ, ಉತ್ಪಾದನೆ ಅಥವಾ ಸಂಸ್ಕರಣೆಗೆ ನಿರ್ಬಂಧ ಇರಲಿದೆ.
ನೈಸರ್ಗಿಕ ಜಲಮೂಲಗಳು ಅಥವಾ ಸಂಸ್ಕರಿಸದ ತ್ಯಾಜ್ಯಗಳ ವಿಸರ್ಜನೆ ನಿಷೇಧ, ಹೊಸದಾಗಿ ಘನತ್ಯಾಜ್ಯ ವಿಲೇವಾರಿ ಘಟಕ ಮತ್ತು ಜೈವಿಕ, ವೈದ್ಯಕೀಯ ತ್ಯಾಜ್ಯ ಸುಡುವ ಘಟಕಕ್ಕೆ ಅವಕಾಶ ಇರುವುದಿಲ್ಲ, ಈಗಿರುವ ಹಾಗೂ ಹೊಸದಾಗಿ ಇಟ್ಟಿಗೆ ಗೂಡುಗಳ ಘಟಕ ಸ್ಥಾಪನೆಗೆ ನಿಷೇಧ ಇರಲಿದೆ. ಮರದ ಮಿಲ್ಗಳಿಗೆ ನಿರ್ಬಂಧ, ದೊಡ್ಡ ಪ್ರಮಾಣದಲ್ಲಿ ಜಾನುವಾರು ಹಾಗೂ ಕೋಳಿ ಫಾರ್ಮ್ ಗಳಿಗೆ ಅವಕಾಶ ಇಲ್ಲ. ಮರ ಆಧಾರಿತ ಕೈಗಾರಿಕೆಗಳನ್ನು ಆರಂಭಿಸುವಂತಿಲ್ಲ. ಪರಿಸರ ಸೂಕ್ಷ್ಮ ಪ್ರದೇಶದ ಒಂದು ಕಿ.ಮೀ ವ್ಯಾಪ್ತಿಯೊಳಗೆ ಹೋಟೆಲ್ಗಳು ಹಾಗೂ ರೆಸಾರ್ಟ್ ಗಳನ್ನು ತೆರೆಯುವಂತಿಲ್ಲ ಎಂದು ತಿಳಿಸಿದೆ.