
ಬೆಂಗಳೂರು ಗ್ರಾಮಾಂತರ: ದೇಶದಲ್ಲೇ ಮೊದಲ ಬಾರಿಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಇವಿ ಸಫಾರಿ ಬಸ್ಗೆ ಚಾಲನೆ ನೀಡಲಾಗಿದೆ. ಹೌದು ವಿದ್ಯುತ್ ಚಾಲಿತ ಸಫಾರಿ ಪ್ರಾಯೋಗಿಕ ಸಂಚಾರಕ್ಕೆ ಇಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಚಾಲನೆ ನೀಡಿದರು. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಸಫಾರಿಗೆ ಪ್ರಸ್ತುತ ಡೀಸೆಲ್ ವಾಹನಗಳನ್ನು ಬಳಸಲಾಗುತ್ತಿದೆ. ಇದೀಗ ವಿದ್ಯುತ್ ಚಾಲಿತ ಬಸ್ ಗಳನ್ನು ಸಹ ಪರಿಚಯಿಸಲಾಗಿದ್ದು, ಇದು ದೇಶದಲ್ಲೇ ಪ್ರಥಮ.
ಬನ್ನೇರು ಘಟ್ಟ ಜೈವಿಕ ಉದ್ಯಾನದಲ್ಲಿ ದೇಶದ ಪ್ರಥಮ ವಿದ್ಯುತ್ ಚಾಲಿತ ಸಫಾರಿ ಬಸ್ ನ ಪ್ರಾಯೋಗಿಕ ಸಂಚಾರಕ್ಕೆ ವಿಕಾಸಸೌಧದಿಂದ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ 4-5 ತಿಂಗಳಲ್ಲಿ ಹಂಟಿಂಗ್ ಚೀತಾ, ಕ್ಯಾಪಚಿನ್ ಕೋತಿಯನ್ನು ದಕ್ಷಿಣ ಅಮೇರಿಕಾದಿಂದ ವಿನಿಮಯ ಮಾಡಿಕೊಳ್ಳಲಾಗುವುದು. ಮುಂದಿನ ವರ್ಷ ಚಿಂಪಾಂಜಿ, ಜಾಗ್ವಾರ್, ಪೂಮಾ (ಉತ್ತರ ಅಮೇರಿಕಾ ಸಿಂಹ) ಸೇರಿದಂತೆ ಒಟ್ಟು 10 ವಿದೇಶಿ ವನ್ಯಜೀವಿಗಳು ಬನ್ನೇರುಘಟ್ಟಕ್ಕೆ ಆಗಮಿಸಲಿವೆ ಎಂದು ತಿಳಿಸಿದರು.

j3tvkannada
ಬನ್ನೇರುಘಟ್ಟದಲ್ಲಿ ಸೀಮಿತ ಆವರಣ ಪ್ರದೇಶದೊಳಗೆ ರೂಪಿಸಿರುವ ವನ್ಯಜೀವಿ ಸಫಾರಿಯಲ್ಲಿ ಹುಲಿ, ಚಿರತೆ, ಸಿಂಹ, ಕರಡಿಗಳ ದರ್ಶನ ಪ್ರವಾಸಿಗರಿಗೆ ನಿಶ್ಚಿತವಾಗಿ ಆಗುತ್ತದೆ. ಈ ಸಫಾರಿಗಳಿಗೆ ಪ್ರಸ್ತುತ ಡೀಸೆಲ್ ವಾಹನಗಳನ್ನು ಬಳಸಲಾಗುತ್ತಿದ್ದು, ಈ ವಾಹನಗಳಿಂದ ಹೊರ ಹೊಮ್ಮುವ ಇಂಗಾಲದ ಪ್ರಮಾಣ ತಗ್ಗಿಸುವ ಉದ್ದೇಶದಿಂದ ದೇಶದಲ್ಲೇ ಇದೇ ಮೊದಲ ಬಾರಿಗೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ವಾಹನ ಪರಿಚಯಿಸಲಾಗುತ್ತಿದೆ ಎಂದರು.
ಈ ವಿದ್ಯುತ್ ಚಾಲಿತ ಬಸ್ 22 ಆಸನಗಳನ್ನು ಹೊಂದಿದ್ದು 100 ಕೆ.ವಿ. ಬ್ಯಾಟರಿ ಸಾಮರ್ಥ್ಯದ್ದಾಗಿದೆ. ಹಾಲಿ ಒಂದು ಬಸ್ ಮಾತ್ರವೇ ಕಾರ್ಯಾರಂಭ ಮಾಡಲಿದ್ದು, 2027 ರೊಳಗೆ ಬನ್ನೇರುಘಟ್ಟ ಉದ್ಯಾನವನ್ನು (ಟ್ಯ್ರಾಕ್ಟರ್ ಇತ್ಯಾದಿ ಉಪಯೋಗಿ ವಾಹನ ಹೊರತು ಪಡಿಸಿ) ಪಳೆಯುಳಿಕೆ ಇಂಧನ ರಹಿತ ವಾಹನ ವಲಯವಾಗಿ ಪರಿವರ್ತಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ. ಬನ್ನೇರುಘಟ್ಟ ಮೃಗಾಲಯ ಮತ್ತು ಸಫಾರಿ ವೀಕ್ಷಣೆಗೆ ವಾರಾಂತ್ಯದಲ್ಲಿ ಮತ್ತು ಸರ್ಕಾರಿ ರಜಾ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವನ್ಯಜೀವಿ ಪ್ರಿಯರು ಮತ್ತು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಈ ಕಾರಣಕ್ಕೆ ಇಲ್ಲಿ ಸ್ಮಾರ್ಟ್ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಲು ತೀರ್ಮಾನಿಸಲಾಗಿದ್ದು ಶೀಘ್ರವೇ ಟೆಂಡರ್ ಕರೆಯಲಾಗುವುದು ಎಂದು ತಿಳಿಸಿದರು.