
ಧಾರವಾಡ: ಕರ್ನಾಟಕದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗೆ ದಿನಗಣನೆ ಪ್ರಾರಂಭವಾಗಿದೆ. 10ನೇ ತರಗತಿ ಪರೀಕ್ಷೆಗೆ ರಾಜ್ಯದಾದ್ಯಂತ ಭರ್ಜರಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಧಾರವಾಡದಲ್ಲಿ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರಗಳ ಮೇಲೆ ನಿಗಾ ಇರಿಸುವ ನಿಟ್ಟಿನಲ್ಲಿ ಜಿಲ್ಲಾ ಪಂಚಾಯಿತಿ ಕಚೇರಿಯಲ್ಲಿ ಲೈವ್ ವೆಬ್ಕಾಸ್ಟಿಂಗ್ ಕೇಂದ್ರ ಸಜ್ಜುಗೊಳಿಸಿ ಸಿಬ್ಬಂದಿ ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಪ್ರಭು ಜಿಆರ್ಜೆ ಅವರು ತಿಳಿಸಿದ್ದಾರೆ.
ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದ ಅವರು, ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಪಾರದರ್ಶಕವಾಗಿ, ವ್ಯವಸ್ಥಿತವಾಗಿ ನಡೆಸುವ ನಿಟ್ಟಿನಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿ ಕಣ್ಣಾವಲಿಗೆ ಸಿ.ಸಿ.ಟಿವಿ ವ್ಯವಸ್ಥೆ ಇದೆ. ಒಟ್ಟು 1522 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ ಎಂದಿದ್ದಾರೆ.

ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ 106 ಪರೀಕ್ಷಾ ಕೇಂದ್ರ, 1,310 ಪರೀಕ್ಷಾ ಕೊಠಡಿಗಳಿವೆ. ಪರೀಕ್ಷಾ ಕಾರ್ಯ ನಿರ್ವಹಣೆ ಕುರಿತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ. ಜಿಲ್ಲಾ ಪಂಚಾಯಿತಿ ಭುವನೇಶ ಪಾಟೀಲ ಅವರು ಮಾತನಾಡಿ, ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ವಿದ್ಯುತ್ ಹಾಗೂ ಇಂಟರ್ನೆಟ್ ವ್ಯವಸ್ಥೆ ಮಾಡಲಾಗಿದೆ. ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಅಕ್ರಮ ಚಟುವಟಿಕೆ ಕಂಡುಬಂದರೆ ತಕ್ಷಣ ಸಂಬಂಧಿಸಿದವರಿಗೆ ಮಾಹಿತಿ ನೀಡಿ, ಕ್ರಮ ವಹಿಸಲು ಸೂಚನೆ ನೀಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರದ ಸಂಪರ್ಕ ಸಂಖ್ಯೆ ನೀಡಲಾಗಿದೆ ಎಂದು ತಿಳಿಸಿದರು.
ಜಾಗೃತ ದಳ: 106 ಅಧಿಕಾರಿಗಳು ನಿಯೋಜನೆ
ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಪರೀಕ್ಷಾ ಸಂದರ್ಭಗಳಲ್ಲಿ ಯಾವುದೇ ಅವ್ಯವಹಾರ ನಡೆಯದಂತೆ ಎಚ್ಚರಿಕೆ ವಹಿಸುವ ನಿಟ್ಟಿನಲ್ಲಿ ಜಾಗೃತ ದಳ ರಚಿಸಿ 106 ನೌಕರರನ್ನು ಇದಕ್ಕಾಗಿ ನಿಯೋಜಿಸಲಾಗಿದೆ. ತಾಲ್ಲೂಕುವಾರು ಧಾರವಾಡ ನಗರ ಮತ್ತು ಗ್ರಾಮೀಣ ತಲಾ 16 ಹುಬ್ಬಳ್ಳಿ ನಗರ 35 ಹುಬ್ಬಳ್ಳಿ ಗ್ರಾಮೀಣ 13 ಕಲಘಟಗಿ 9 ಕುಂದಗೋಳ 8 ನವಲಗುಂದ 9 ಅಧಿಕಾರಿಗಳನ್ನು ನಿಯೋಜಿಸಲಾಗಿದೆ.
ಧಾರವಾಡದಲ್ಲಿ ಪೂರ್ವ ಸಿದ್ಧತೆ: ಧಾರವಾಡದಲ್ಲಿ ಮಿಶನ್ ವಿದ್ಯಾಕಾಶಿ ಯೋಜನೆಯಡಿ ಹಲವಾರು ಕಾರ್ಯಕ್ರಮಗಳ ಮೂಲಕ 10 ನೇ ತರಗತಿಯ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ತೆಗೆದು ಹಾಕುವಲ್ಲಿ ಜಿಲ್ಲಾಡಳಿತವು ಯಶಸ್ವಿಯಾಗಿದೆ. ಮಿಶನ್ ವಿದ್ಯಾಕಾಶಿ ಯೋಜನೆಯು ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪ್ಲಸ್ ಪಾಯಿಂಟ್ ಆಗಿದೆ. ಈ ಯೋಜನೆಯ ಮೂಲಕ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಲ್ಲಿ ಆತಂಕವನ್ನು ಕಡಿಮೆ ಮಾಡುವ ಉದ್ದೇಶವನ್ನು ಹೊಂದಿದೆ. ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರ ಪ್ರಯತ್ನದಿಂದಾಗಿ ಜಿಲ್ಲೆಯ ಶೈಕ್ಷಣಿಕ ಗುಣಮಟ್ಟದಲ್ಲಿ ಸಾಕಷ್ಟು ಬದಲಾವಣೆ ಕಾಣುತ್ತಿದೆ. ವಿದ್ಯಾರ್ಥಿಗಳು ಆಸಕ್ತಿಯಿಂದ ಓದುತ್ತಿದ್ದಾರೆ. ಇದು ನಮಗೆಲ್ಲ ಹೆಮ್ಮೆ ಮೂಡಿಸಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದ್ದಾರೆ.
ಮಕ್ಕಳಲ್ಲಿ ಓದುವ ಅಭಿರುಚಿ ಮೂಡಿಸಬೇಕು. ಅವರಲ್ಲಿನ ಉತ್ತಮ ಆಸಕ್ತಿಗಳನ್ನು ಪ್ರೋತ್ಸಾಹಿಸಬೇಕು. ಪೋಷಕರು, ತಂದೆ ಮತ್ತು ತಾಯಿ ಮಕ್ಕಳಲ್ಲಿ ಉತ್ತಮ ಸಂಸ್ಕಾರ ರೂಢಿಸಬೇಕು. ಒಳ್ಳೆಯ ಅಭಿರುಚಿ ಬೆಳೆಸುವ ಜವಾಬ್ದರಿ ಕಲಿಸಬೇಕು. ಮಕ್ಕಳ ಯಶಸ್ಸು ನಮ್ಮೆಲ್ಲರ ಪ್ರಯತ್ನದಲ್ಲಿದೆ. ಜಿಲ್ಲೆಯ ಎಲ್ಲಾ ಮಕ್ಕಳು ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಪಾಸ್ ಆಗಬೇಕು. ಪ್ರತಿಭಾವಂತ ವಿದ್ಯಾರ್ಥಿಗಳು ರಾಜ್ಯಕ್ಕೆ ರ್ಯಾಂಕ್ ಬರಬೇಕು. ಈ ವಿಷಯದಲ್ಲಿ ಮಿಶನ್ ವಿದ್ಯಾಕಾಶಿ ಯೋಜನೆಯ ಮೂಲಕ ಕಳೆದ ಹತ್ತು ತಿಂಗಳುಗಳಿಂದಲೂ ನಿರಂತರ ಕಾರ್ಯ ಚಟುವಟಿಕೆಗಳನ್ನು ಇಲ್ಲಿ ಆಯೋಜಿಸಲಾಗಿತ್ತು.
ಈ ವರ್ಷ 10 ನೇ ತರಗತಿಯಲ್ಲಿ ಓದುತ್ತಿರುವ ಪ್ರತಿ ವಿದ್ಯಾರ್ಥಿಯಲ್ಲಿ ಮಿಶನ್ ವಿದ್ಯಾಕಾಶಿಯು ಆತ್ಮವಿಶ್ವಾಸ ವೃದ್ಧಿಸಿದೆ ಎಂದಿದ್ದಾರೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಉತ್ತೀರ್ಣವಾಗುವ ಪ್ರಮಾಣವನ್ನು ಹೆಚ್ಚಳ ಮಾಡಬೇಕು ಹಾಗೂ ಪರೀಕ್ಷೆ ಸಮಯದಲ್ಲಿ ಇರುವ ಭಯವನ್ನು ತಪ್ಪಿಸಬೇಕು ಎನ್ನುವ ಉದ್ದೇಶದಿಂದ ವಿದ್ಯಾಕಾಶಿ ಯೋಜನೆಯನ್ನು ಅಳವಡಿಸಿಕೊಳ್ಳಲಾಗಿದೆ. ಸಾವಿರಾರು ವಿದ್ಯಾರ್ಥಿಗಳೊಂದಿಗೆ ಮಿಶನ್ ವಿದ್ಯಾಕಾಶಿ ಯೋಜನೆಯಡಿ ಶೈಕ್ಷಣಿಕ ಗುಣಮಟ್ಟ ಸುಧಾರಣೆ ಹಾಗೂ ವಿದ್ಯಾರ್ಥಿಗಳಲ್ಲಿನ ಓದುವ-ಬರೆಯುವಲ್ಲಿ ಆಗಿರುವ ಬದಲಾವಣೆ ಕುರಿತು ವಿದ್ಯಾರ್ಥಿಗಳೊಂದಿಗೆ ಸಂವಾದ ಸಹ ನಡೆಸಲಾಗಿತ್ತು.

106 ಪರೀಕ್ಷಾ ಕೇಂದ್ರ: ತಾಲ್ಲೂಕುವಾರು ಧಾರವಾಡ ಗ್ರಾಮೀಣ ಹಾಗೂ ಧಾರವಾಡ ನಗರ ತಲಾ 16 ಹುಬ್ಬಳ್ಳಿ ನಗರ 35 ಹುಬ್ಬಳ್ಳಿ ಗ್ರಾಮೀಣ13 ಕಲಘಟಗಿ 9 ಕುಂದಗೋಳ 8 ನವಲಗುಂದ 9 ಪರೀಕ್ಷಾ ಕೇಂದ್ರಗಳು ಇವೆ. ಮೊದಲ ದಿನ ಪ್ರಥಮ ಭಾಷಾ ವಿಷಯ ಪರೀಕ್ಷೆ ನಡೆಯಲಿದೆ. ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯಲಿದೆ. ಇನ್ನು ಮೊದಲ ದಿನದಂದು ಪ್ರಥಮ ಭಾಷಾ ವಿಷಯ ಪರೀಕ್ಷೆಯು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.15ರ ವರೆಗೆ ಇರಲಿದೆ. ಹೀಗಾಗಿ, ಪರೀಕ್ಷೆಗೆ ಬೇಕಾದ ಎಲ್ಲಾ ಮಾದರಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
ಎಸ್ಎಸ್ಎಲ್ಸಿ ಹಾಗೂ ಪಿಯುಸಿ ಪರೀಕ್ಷೆಗಳಿಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಫಲಿತಾಂಶ ಸುಧಾರಣೆಗೆ ಮಿಷನ್ ವಿದ್ಯಾಕಾಶಿ ಕಾರ್ಯಕ್ರಮದಡಿಯಲ್ಲಿ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಈ ಬಾರಿ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಧಾರವಾಡ ಜಿಲ್ಲೆಯು ರಾಜ್ಯಕ್ಕೆ ಮೊದಲ ರ್ಯಾಂಕ್ ಗಳಿಸುವ ಗುರಿ ಹೊಂದಲಾಗಿದೆ ಎಂದು ಜಿಲ್ಲಾಡಳಿತ ಹೇಳಿದೆ.
ಈ ವರ್ಷ ಧಾರವಾಡದಲ್ಲಿ 28,666 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಅಲ್ಲದೇ ಹೊಸದಾಗಿ ಬಾಹ್ಯ ಅಭ್ಯರ್ಥಿಯಾಗಿ 511 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. 1,437 ವಿದ್ಯಾರ್ಥಿಗಳು ಪುನರಾವರ್ತಿತರಾಗಿದ್ದಾರೆ. 135 ವಿದ್ಯಾರ್ಥಿಗಳು ಪುನರಾವರ್ತಿತ ಬಾಹ್ಯ ಅಭ್ಯರ್ಥಿಗಳಾಗಿದ್ದಾರೆ. ಒಟ್ಟಾರೆಯಾಗಿ 30,749 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ.
ಪರೀಕ್ಷೆ ದಿನವೇ ಬಂದ್ ಸಂಕಷ್ಟ: ಇನ್ನು ಬಂದ್ನ ಹಿಂದಿನ ದಿನವೇ ಎಸ್ಎಸ್ಎಲ್ಸಿ ಪರೀಕ್ಷೆ ಸಹ ಇದೆ. ಬಂದ್ನ ಹಿಂದಿನ ದಿನ ಸಂಜೆಯಿಂದಲೇ ಕೆಲವು ಭಾಗದಲ್ಲಿ ಬಂದ್ ವಾತಾವರಣ ಇರುತ್ತದೆ. ಹೀಗಾಗಿ, ವಿದ್ಯಾರ್ಥಿಗಳಿಗ ಆ ದಿನ ಸಂಕಷ್ಟವಾಗಬಹುದು. ಬಂದ್ ದಿನಾಂಕವನ್ನು ಮುಂದೂಡಬೇಕು ಎಂದು ಮನವಿ ಮಾಡಲಾಗಿತ್ತು.
ಆದರೆ ಈ ಮನವಿಗೆ ಕನ್ನಡಪರ ಸಂಘಟನೆಗಳು ಒಪ್ಪಿಗೆ ಸೂಚಿಸಿಲ್ಲ. ಯಾವುದೇ ಕಾರಣಕ್ಕೂ ಬಂದ್ ದಿನಾಂಕವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಕನ್ನಡಪರ ಸಂಘಟನೆಗಳ ಅಧ್ಯಕ್ಷರು ಸ್ಪಷ್ಟಪಡಿಸಿದ್ದಾರೆ. ರಾಜ್ಯ ಸರ್ಕಾರ ಸಹ ಬಂದ್ ಇರುವುದರಿಂದ ಪರೀಕ್ಷೆ ದಿನಾಂಕವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಈ ನಡುವೆ ವಿದ್ಯಾರ್ಥಿಗಳು ಸಂಕಷ್ಟಕ್ಕೆ ಸಿಲುಕುವ ಪರಿಸ್ಥಿತಿ ನಿರ್ಮಾಣವಾಗಿದೆ.