
ಚಿಂತಾಮಣಿ: ನಗರದ ಸರ್ಕಾರಿ ನೌಕರರ ಭವನದಲ್ಲಿ ಬುಧವಾರ ತಾಲ್ಲೂಕು ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಸರ್ಕಾರಿ ನೌಕರರು ಶಿಸ್ತು, ನಿಷ್ಠೆ, ಪ್ರಾಮಾಣಿಕತೆ ಮತ್ತು ಜವಾಬ್ದಾರಿಯಿಂದ ನಡೆದುಕೊಂಡು, ಸಮಸ್ಯೆಗಳನ್ನು ಹೊತ್ತು ಬರುವ ಸಾರ್ವಜನಿಕರಿಗೆ ಸ್ಪಂದಿಸಬೇಕು’ ಎಂದು ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿ. ನಾರಾಯಣಸ್ವಾಮಿಯವರು ಸಲಹೆ ನೀಡಿದರು. ಸರ್ಕಾರಿ ಯೋಜನೆಗಳು ಹಾಗೂ ಸೌಲಭ್ಯಗಳನ್ನು ಸಾರ್ವಜನಿಕರಿಗೆ ತಲುಪಿಸುವ ಕೆಲಸ ಸರ್ಕಾರಿ ನೌಕರರದ್ದು. ಸರ್ಕಾರ ಮತ್ತು ಸಾರ್ವಜನಿಕರ ನಡುವೆ ಕೊಂಡಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು. ತಾಲ್ಲೂಕಿನಲ್ಲಿ ನೌಕರರಿಗೆ ವಸತಿ ಗೃಹಗಳ ನಿರ್ಮಾಣ ಸೇರಿ ಹಲವಾರು ಸಮಸ್ಯೆಗಳ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತರಲಾಗಿದ್ದು, ನೌಕರರ ಸಮಸ್ಯೆ ಪರಿಹಾರಕ್ಕೆ ಅವರು ಮುಂದಾಗಿದ್ದಾರೆ ಎಂದು ಹೇಳಿದರು.