
ಸಿರುಗುಪ್ಪ : ಶಿಕ್ಷಣದ ತಾಂತ್ರಿಕ ಬದಲಾವಣೆಗಳು ಶೈಕ್ಷಣಿಕ ದೃಷ್ಟಿಯಿಂದ ಒಳ್ಳೆಯದು. ಈ ಸಕಾರಾತ್ಮಕ ಬೆಳವಣಿಗೆಯನ್ನು ಮಕ್ಕಳ ಶೈಕ್ಷಣಿಕ ಪ್ರಗತಿಗೆ ಬಳಸಿದಲ್ಲಿ ಪ್ರಗತಿ ಸಾಧ್ಯ ಎಂದು ಸಿರುಗುಪ್ಪ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಟಿ ಹುಚ್ಚೀರಪ್ಪ ತಿಳಿಸಿದರು.
ತಾಲೂಕಿನ ತೆಕ್ಕಲಕೋಟೆ ಪಟ್ಟಣದ ಬೆಸ್ಟ್ ಮಾಂಟೆಸ್ಸರಿ ಸ್ಕೂಲ್ ನಲ್ಲಿ ಇಂದು ನಡೆದ ಗ್ರಾಜುವೇಷನ್ ಡೇ ( ಪದವಿ ) ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪಾಲಕರು ತಮ್ಮ ದೈನಂದಿನ ಕೆಲಸದಲ್ಲಿ ಕಳೆದು ಹೋಗದೆ ಮಕ್ಕಳೊಂದಿಗೆ ಪ್ರತಿ ದಿನ ಒಂದು ತಾಸು ಬೆರೆತು ಕಳೆದಲ್ಲಿ ಅದು ಮಗುವಿನ ಸರ್ವಾಂಗೀಣ ಬೆಳವಣಿಗೆಗೆ ಪೂರಕ ಎಂದು ಹೇಳಿದರು.
ಸಿರುಗುಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರೋಫೆಸರ್ ಚಂದ್ರಕಾಂತ ಮಾತನಾಡಿ, ಪ್ರತಿಭೆಗಳನ್ನು ಗುರುತಿಸುವ ಹಾಗೂ ಅವುಗಳನ್ನು ಪ್ರೋತ್ಸಾಹಿಸುವ ವಾತಾವರಣವನ್ನು ಶಾಲೆಯು ಸೃಷ್ಟಿಸಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪೂರ್ವ ಪ್ರಾಥಮಿಕ ಪದವಿ ಪ್ರಶಸ್ತಿ ಪತ್ರ ಹಾಗೂ ಪದಕ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಬೆಸ್ಟ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಚಾಂದ್ ಬಾಷ, ಬಾಪೂಜಿ ವಿದ್ಯಾ ಸಂಸ್ಥೆಯ ಅಧ್ಯಕ್ಷ ಅಸ್ಲಂ, ಸದಾಕಲಿ, ಡಾ.ಶರ್ಮಾಸ್ ವಲಿ ಸೇರಿದಂತೆ ವಿದ್ಯಾರ್ಥಿಗಳ ಪಾಲಕ ಪೋಷಕರು ಭಾಗವಹಿಸಿದ್ದರು.