
ಮಡಿಕೇರಿ : ಬೇಸಿಗೆಯ ಬಿಸಿ ಜನರಿಗೆ ತಟ್ಟಿದ್ದು, ವಿವಿಧ ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಿದೆ. ಸಚಿವರು, ಜಿಲ್ಲಾಧಿಕಾರಿಗಳು ಅಧಿಕಾರಿಗಳ ಸಭೆ ನಡೆಸಿ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆ ಮಾಡಬೇಕು ಎಂದು ಸೂಚನೆಗಳನ್ನು ನೀಡುತ್ತಿದ್ದಾರೆ. ಪಟ್ಟಣ, ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾದರೆ ಬೋರ್ ವೆಲ್ ಬಾಡಿಗೆಗೆ ಪಡೆಯುವುದು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಬೇಕು ಎಂದು ನಿರ್ದೇಶನಗಳನ್ನು ನೀಡಲಾಗಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎನ್. ಎಸ್. ಬೋಸರಾಜು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕುಗಳ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿದರು. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರ ವಹಿಸಬೇಕು. ಕಾಲ ಕಾಲಕ್ಕೆ ಕುಡಿಯುವ ನೀರನ್ನು ನಿರಂತರವಾಗಿ ಪೂರೈಸಬೇಕು. ಸಾರ್ವಜನಿಕರಿಂದ ದೂರು ಬರದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ಕೊಟ್ಟರು. “ತಹಶೀಲ್ದಾರ್ ಮತ್ತು ತಾಲೂಕು ಪಂಚಾಯಿತಿ ಇಒಗಳು ಕುಡಿಯುವ ನೀರು ಪೂರೈಕೆ ಸಂಬಂಧಿಸಿದಂತೆ ವಿಶೇಷ ಗಮನಹರಿಸಬೇಕು. ಜೊತೆಗೆ ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿ ಕುಂದುಕೊರತೆ ಆಲಿಸಬೇಕು ಎಂದು ಸಚಿವರು ನಿರ್ದೇಶನ ನೀಡಿದರು.

j3tvkannada
ಸಭೆಯಲ್ಲಿ ಮಾತನಾಡಿದ ವಿರಾಜಪೇಟೆ ಕ್ಷೇತ್ರದ ಶಾಸಕ ಎ. ಎಸ್. ಪೊನ್ನಣ್ಣ, ಮುಂದಿನ ವಾರದಲ್ಲಿ ತಾಲ್ಲೂಕುವಾರು ಕುಡಿಯುವ ನೀರು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಕೆ.ಡಿ.ಪಿ ಸಭೆ ನಡೆಸಲಾಗುವುದು. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿ ಆಗಬೇಕು ಎಂದರು. ಸಭೆಯಲ್ಲಿ ಶಾಸಕರು ಆದಿವಾಸಿಗಳು ವಾಸಿಸುವ ಪ್ರದೇಶದಲ್ಲಿ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ರಸ್ತೆ, ವಿದ್ಯುತ್, ಕುಡಿಯುವ ನೀರು ಮತ್ತಿತರ ಕನಿಷ್ಠ ಸೌಲಭ್ಯಗಳನ್ನಾದರೂ ತಲುಪಿಸಬೇಕು. ಜೊತೆಗೆ ಟವರ್ ನಿರ್ಮಾಣ, ಪಿಎಂಜಿಎಸ್ವೈ ರಸ್ತೆ ನಿರ್ಮಾಣ, ವಿದ್ಯುತ್ ಸಂಪರ್ಕ ಹೀಗೆ ಮೂಲ ಸೌಲಭ್ಯಕ್ಕೆ ಅನುಮತಿ ನೀಡಬೇಕು. ಅದನ್ನು ಬಿಟ್ಟು ಸಂಘರ್ಷ ಆಗಬಾರದು. ನಾವು ಸಹ ತಾಳ್ಮೆ ವಹಿಸಿಕೊಂಡು ಬಂದಿದ್ದೇವೆ ಎಂದರು. ಗೋಣಿಕೊಪ್ಪ ಮತ್ತು ನಾಣಚ್ಚಿ ಭಾಗದಲ್ಲಿ ವಿದ್ಯುತ್ ಸಂಪರ್ಕ ಇಲ್ಲದೆ ಜನರು ಇಂದು ಸಹ ಪರಿತಪಿಸುತ್ತಿದ್ದಾರೆ. ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ 17 ಹಾಡಿಗಳಿಗೆ ಕುಡಿಯುವ ನೀರು, ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಸೂಚಿಸಲಾಗಿತ್ತು, ಆದರೆ ಇದುವರೆಗೂ ಈ ಕಾರ್ಯ ಆಗಿಲ್ಲ ಎಂದು ಶಾಸಕ ಪೊನ್ನಣ್ಣ ಬೇಸರ ವ್ಯಕ್ತಪಡಿಸಿದರು. ಸಚಿವರು ಮಾತನಾಡಿ, ಸಾರ್ವಜನಿಕರಿಂದ ಕುಂದುಕೊರತೆ ಸಂಬಂಧ ಹೆಚ್ಚು ಹೆಚ್ಚು ಮನವಿಗಳು ಸಲ್ಲಿಕೆಯಾಗುತ್ತಿವೆ ಎಂಬುದು ಕಂಡುಬಂದರೆ, ತಳಮಟ್ಟದಲ್ಲಿ ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ ಎಂದು ಭಾವಿಸಬೇಕಾಗುತ್ತದೆ. ಆದ್ದರಿಂದ ಸ್ಥಳೀಯ ಮಟ್ಟದಲ್ಲಿಯೇ ಸಮಸ್ಯೆ ಬಗೆಹರಿಸಲು ಪ್ರಯತ್ನಿಸಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಬದ್ಧತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ವಸತಿ ಮತ್ತು ಆಶ್ರಮ ಶಾಲೆಗಳ ಕುರಿತು ಚರ್ಚೆಗಳು ನಡೆದವು. ನಾಗರಹೊಳೆಯಲ್ಲಿನ ಗಿರಿಜನ ಆಶ್ರಮ ಶಾಲೆಯಲ್ಲಿ ಮೂಲ ಸೌಲಭ್ಯ ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದಾರೆ. ಸರ್ಕಾರ ಹಲವು ಯೋಜನಾ ಕಾರ್ಯಕ್ರಮಗಳು ಜಾರಿಗೊಳಿಸಿದ್ದರೂ ಸಹ ಪರಿಪೂರ್ಣವಾಗಿ ತಲುಪಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಈ ಬಗ್ಗೆ ಶಾಸಕರು, ಜಿಲ್ಲಾಧಿಕಾರಿಯವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಗಮನಕ್ಕೆ ತಂದಲ್ಲಿ ಸರ್ಕಾರದ ಗಮನಕ್ಕೆ ತರಬಹುದಾಗಿದೆ. ಯಾವುದೇ ಮಾಹಿತಿ ನೀಡದಿದ್ದಲ್ಲಿ ಸಮಸ್ಯೆ ಬಗೆ ಹರಿಸುವುದಾದರೂ ಹೇಗೆ? ಎಂದು ಅಧಿಕಾರಿಗಳನ್ನು ಸಚಿವರು ತರಾಟೆಗೆ ತೆಗೆದುಕೊಂಡರು. ಮಕ್ಕಳಿಗೆ ಪೌಷ್ಠಿಕ ಆಹಾರ ವಿತರಿಸಬೇಕು. ಸರ್ಕಾರ ಸಾಕಷ್ಟು ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿ ನಿಲಯಗಳನ್ನು ಆರಂಭಿಸಿದ್ದು, ವಿದ್ಯಾರ್ಥಿ ನಿಲಯ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದವರಿಗೆ ನಿಲಯ ಪ್ರವೇಶಕ್ಕೆ ಅವಕಾಶ ಮಾಡಬೇಕು. ಕೊರತೆಗಳಿದ್ದಲ್ಲಿ ಗಮನಕ್ಕೆ ತರುವಂತಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಅಗತ್ಯ ಕಾಳಜಿ ವಹಿಸಬೇಕು ಎಂದು ಸೂಚನೆಯನ್ನು ನೀಡಿದರು. ಅರಣ್ಯ ಇಲಾಖೆ ಅಧಿಕಾರಿಗಳು ಅಭಿವೃದ್ಧಿ ಕಾರ್ಯಗಳಿಗೆ ಅಡ್ಡಿ ಮಾಡದೆ ಮೂಲಸೌಲಭ್ಯ ಕಲ್ಪಿಸಲು ಮುಂದಾಗಬೇಕು. ಯಾವುದೇ ಕಾರಣಕ್ಕೂ ತಕರಾರು ತೆಗೆಯಬಾರದು. ಸಾರ್ವಜನಿಕ ಕೆಲಸಗಳಿಗೆ ಅಧಿಕಾರಿಗಳು ಸ್ಪಂದಿಸಬೇಕು. ಯಾವುದೇ ರೀತಿಯ ತೊಂದರೆಯಾಗದಂತೆ ಗಮನಹರಿಸಬೇಕು. ಸಾರ್ವಜನಿಕರ ಕೆಲಸಗಳಿಗೆ ಸ್ಪಂದಿಸಿದಲ್ಲಿ ಅವರು ಸದಾ ಸ್ಮರಿಸಲಿದ್ದಾರೆ. ಅಧಿಕಾರಿಗಳಿಗೆ ಕಾಳಜಿಯೂ ಇರಬೇಕು ಎಂದರು.