
ರಾಮನಗರ: ರಾಜ್ಯ ಸಚಿವ ರಾಜಣ್ಣ ಮೇಲೆ ಹನಿಟ್ರ್ಯಾಪ್ ಯತ್ನ ಆರೋಪವನ್ನು ಗಂಭೀರವಾಗಿ ಪರಿಗಣಿಸದ ಮುಖ್ಯಮಂತ್ರಿ ಬಗ್ಗೆ ಅನುಮಾನ ಉಂಟಾಗ್ತಿದೆ ಅವರಿಗೂ ಏನಾದ್ರು ಹನಿಟ್ರ್ಯಾಪ್ ಭಯ ಇದೆಯೇ ಎಂದು ಛಲವಾದಿ ನಾರಾಯಣಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ರಾಮನಗರದ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಹನಿಟ್ರ್ಯಾಪ್ ಪ್ರಕರಣದಲ್ಲಿ ಬಿಜೆಪಿಯ ಯಾವ ನಾಯಕರೂ ಇಲ್ಲ. ಇದ್ದಿದ್ದರೆ ಈಗಾಗಲೇ ದೊಡ್ಡ ರಂಪರಾಮಾಯಣ ಆಗುತ್ತಿತ್ತು. ಅದನ್ನು ಕೂಡಲೇ ತನಿಖೆಗೆ ಆದೇಶಿಸುತ್ತಿದ್ದರು. ಇದು ಕಾಂಗ್ರೆಸ್ಸಿನ ಮನೆಯ ಮೇಲೆ ಕಾಂಗ್ರೆಸ್ಸಿನವರೇ ಅತ್ಯಾಚಾರ ಮಾಡಿದಂತಿದೆ ಎಂದು ಟೀಕಿಸಿದರು.

ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಭಯ ಏನಾದರೂ ಇದೆಯೇ
ಇಷ್ಟಾದರೂ ಕೂಡ ಹನಿಟ್ರ್ಯಾಪ್ ಬಗ್ಗೆ ಮುಖ್ಯಮಂತ್ರಿಗಳು ಒಂದು ಮಾತನ್ನೂ ಆಡಿಲ್ಲ ತನಿಖೆ ಮಾಡಿಸೋಣ ಎಂದದ್ದು ಬಿಟ್ಟರೆ ಬೇರೇನೂ ಹೇಳಿಲ್ಲ. ಅಂದ ಮೇಲೆ ಮುಖ್ಯಮಂತ್ರಿಗಳಿಗೆ ಹನಿಟ್ರ್ಯಾಪ್ ಭಯ ಏನಾದರೂ ಇದೆಯೇ ಎಂಬ ಅನುಮಾನ ಕಾಡುವಂತಾಗಿದೆ ಎಂದು ತಿಳಿಸಿದರು. ನಂದೂ ಎಲ್ಲಾದರೂ ಇದೆಯೇ ಎಂಬ ಭಯ ಅವರಿಗೂ ಇರಬೇಕು ಎಂದು ವಿಶ್ಲೇಷಿಸಿದರು. ಭಯ ಇಲ್ಲದಿದ್ದರೆ ನಿಮಗೆ ತನಿಖೆ ಮಾಡಿಸಲು ಏನಾಗಿದೆ ಎಂದು ಪ್ರಶ್ನಿಸಿದರು.
ಅಭಿವೃದ್ಧಿ ಶೂನ್ಯ
ರಾಜ್ಯದಲ್ಲಿ ಆಡಳಿತ ಹೆಚ್ಚು ಕಡಿಮೆ ಮಹಾನಗರ ಪಾಲಿಕೆಯಲ್ಲಿ ಗಾರ್ಬೇಜ್ ಪರಿಸ್ಥಿತಿ ಹೇಗಿದೆಯೋ ಈ ಸರಕಾರದ ಆಡಳಿತವೂ ಗಾರ್ಬೇಜ್ಗೆ (ಕಸಕ್ಕೆ) ಸಮನಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಟೀಕಿಸಿದ್ದಾರೆ. 45- 46 ವರ್ಷಗಳ ರಾಜಕೀಯ ಜೀವನದಲ್ಲಿ ಇಂಥ ಕೆಟ್ಟ ಸರಕಾರವನ್ನು ನಾವೆಂದೂ ಕೂಡ ನೋಡಿರಲು ಸಾಧ್ಯವಿಲ್ಲ. ಆದ್ದರಿಂದ ಸಂಪೂರ್ಣ ಅಭಿವೃದ್ಧಿ ಶೂನ್ಯವಾಗಿದೆ. ಕಾನೂನು- ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ. ಅತ್ಯಂತ ಕೆಟ್ಟ ಆಡಳಿತ ವ್ಯವಸ್ಥೆಯನ್ನು ಮಾನ್ಯ ಮುಖ್ಯಮಂತ್ರಿಗಳು ಪರಿಚಯಿಸಿದ್ದಾರೆ ಎಂದು ಆಕ್ಷೇಪಿಸಿದರು.
ಅಭಿವೃದ್ಧಿ ಆಗುತ್ತಿಲ್ಲ; ರೈತರ ಸಮಸ್ಯೆಗಳಿಗೆ ಗಮನ ಕೊಡುತ್ತಿಲ್ಲ ಹಿಂದುಳಿದವರ, ದಲಿತರು ಉಳಿದವರ ಸಮಸ್ಯೆಗಳಿಗೆ ಪರಿಹಾರ ಕೊಡುವ ಬದಲಾಗಿ ಇವರೆಲ್ಲವನ್ನೂ ಈಗ ಮರೆಮಾಚಿದ್ದಾರೆ. ದುಡ್ಡೆಷ್ಟು ಹೊಡೆದಿರಿ? ಆಸ್ತಿ ಎಷ್ಟು ಮಾಡಿದ್ದೀರಿ? ಜನರಿಗೆ ಎಷ್ಟು ತೆರಿಗೆ ಹಾಕಿದ್ದೀರಿ? ಬೆಲೆ ಏರಿಕೆ ಎಷ್ಟು ಮಾಡಿದಿರಿ? ದಲಿತರ ಹಣ ಎಷ್ಟು ಲೂಟಿ ಮಾಡಿದ್ದೀರಿ? ಎಷ್ಟು ಜನರ ಹನಿಟ್ರ್ಯಾಪ್ ಮಾಡಿದಿರಿ? ಫೋನ್ ಟ್ಯಾಪಿಂಗ್ ಎಷ್ಟಾಗಿದೆ? ಎಂಬ ಚರ್ಚೆ ಆಗುವಂತಾಗಿದೆ ಎಂದು ಟೀಕಿಸಿದರು. ಇದು ಆಡಳಿತವೇ? ಇಂಥ ಕೆಟ್ಟ ಪರಿಸ್ಥಿತಿಯಲ್ಲಿ ಈ ಸರಕಾರ ಇರಲೇಬಾರದಿತ್ತು. ಇಂಥ ಪರಿಸ್ಥಿತಿಗೆ ರಾಜ್ಯವನ್ನು ತಳ್ಳುವ ಬದಲಾಗಿ ರಾಜೀನಾಮೆ ಕೊಟ್ಟು ಆ ಕಡೆ ಹೊರಟು ಹೋಗಬೇಕಿತ್ತು ಎಂದು ತಿಳಿಸಿದರು.

ದಲಿತರಿಗೆ ವಂಚನೆ, ಮೋಸ ಮಾಡಿದ ಕಾಂಗ್ರೆಸ್ ಸರಕಾರ
ಪರಿಶಿಷ್ಟ ಜಾತಿ, ಪಂಗಡದ ಅಭಿವೃದ್ಧಿಗೆ ಮೀಸಲಾಗಿಟ್ಟ ಎಸ್ಇಪಿ, ಟಿಎಸ್ಪಿ ಸಂಬಂಧಿಸಿದ 39 ಸಾವಿರ ಕೋಟಿ ಹಣವನ್ನು ನುಂಗಿ ನೀರು ಕುಡಿದದ್ದು ಕಾಂಗ್ರೆಸ್ ಸರಕಾರ ಹಾಗೂ ಮುಖ್ಯಮಂತ್ರಿಗಳು ಎಂದು ಟೀಕಿಸಿದರು. ಕಾಂಗ್ರೆಸ್ ಸರಕಾರ ದಲಿತರಿಗೆ ವಂಚನೆ, ಮೋಸ ಮಾಡಿದೆ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಆರೋಪಿಸಿದರು.