
ಹಾಸನ: ಅಗತ್ಯ ವಸ್ತುಗಳ ನಿರಂತರ ಬೆಲೆ ಏರಿಕೆ, ಎಸ್.ಸಿ. ಮತ್ತು ಎಸ್.ಟಿ. ಅನುದಾನದ ದುರ್ಬಳಕೆ, ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿ, ಬಿಜೆಪಿ ಶಾಸಕರ ಅಮಾನತು ಖಂಡಿಸಿ ಶನಿವಾರ ಇಲ್ಲಿ ಬಿಜೆಪಿ ನಗರ ಮತ್ತು ಗ್ರಾಮಾಂತರ ಘಟಕಗಳ ಪ್ರಮುಖರು ಪ್ರತಿಭಟನೆ ನಡೆಸಿದರು.

ನಗರದ ಪಿ.ಪಿ.ವೃತ್ತದಲ್ಲಿ ನೂರಾರು ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಗರ ಘಟಕದ ಅಧ್ಯಕ್ಷ ಅವಿನಾಷ್ ನಾಯ್ಡು ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರು ಪರದಾಡುತ್ತಿದ್ದಾರೆ. ಗ್ಯಾರಂಟಿಗೆ ನೀಡಿ, ಬೆಲೆ ಏರಿಕೆ ಮಾಡಿ ಅದರ ಎರಡಷ್ಟು ವಂಚನೆ ಮಾಡುತ್ತಿದ್ದು ಜನ ವಿರೋದಿ ನೀತಿ ಅನುಸರಿಸುತ್ತಿದ್ದಾರೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಕಡಿಮೆಗೊಳಿಸಬೇಕು ಎಂದು ಆಗ್ರಹಿಸಿದರು. ಮುಖಂಡ ಮನೋಜ್ ಕುಮಾರ್ ಮಾತನಾಡಿ, ರಾಜ್ಯ ಸರ್ಕಾರ ಸದಾ ಹಗರಣ ಮಾಡುತ್ತಿದ್ದು, ಮತಗಳ ಓಲೈಕೆಗಾಗಿ ಮೀಸಲಾತಿ ರಾಜಕೀಯ ನಾಟಕವಾಡುತ್ತಿದೆ. ವಿಧಾನಸಭೆಯಲ್ಲಿ ಸರ್ವಾಧಿಕಾರಿ ವರ್ತನೆ ಪ್ರದರ್ಶಿಸುತ್ತಿದೆ ಎಂದು ಕಿಡಿಕಾರಿದರು.