
ರಾಯಚೂರು: ಇಲ್ಲಿನ ಬಿಜನಗೇರಾ ರಸ್ತೆಯಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರ ವೃತ್ತಿಪರ ಬಾಲಕರ ವಸತಿ ನಿಲಯದಲ್ಲಿ ಮೂಲಸೌಲಭ್ಯಗಳ ಕೊರತೆ ಇದ್ದು, ಅವ್ಯವಸ್ಥೆಗಳ ತಾಣವಾಗಿದೆ. ಖಾಸಗಿ ವ್ಯಕ್ತಿಗಳೂ ದಬ್ಬಾಳಿಕೆಯಿಂದ ವಸತಿನಿಲಯದಲ್ಲಿ ಸೇರಿಕೊಂಡಿರುವ ಕಾರಣ ಅಧ್ಯಯನಕ್ಕೆ ಇಲ್ಲಿ ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ನಿತ್ಯ ಸಮಸ್ಯೆ ಎದುರಿಸುತ್ತಿದ್ದಾರೆ.

ವಸತಿನಿಲಯದಲ್ಲಿ 250ಕ್ಕೂ ಹೆಚ್ಚು ವಿದ್ಯಾರ್ಥಿಗಳಿದ್ದಾರೆ. ನಿಲಯಕ್ಕೆ ಯಾದಗಿರಿ, ಕಲಬುರಗಿ, ಬಳ್ಳಾರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ವಿದ್ಯಾರ್ಥಿಗಳು ಪ್ರವೇಶ ಪಡೆದಿದ್ದಾರೆ. ವಸತಿ ನಿಲಯದಲ್ಲಿ ಖಾಸಗಿ ಸಂಸ್ಥೆಗಳಲ್ಲಿ ಕೆಲಸ ಮಾಡುವ 30ಕ್ಕೂ ಹೆಚ್ಚು ಮಂದಿ ವಾಸ್ತವ್ಯ ಮಾಡುತ್ತಿದ್ದಾರೆ. ಇದರಿಂದ ಅಧಿಕೃತ ವಿದ್ಯಾರ್ಥಿಗಳಿಗೆ ಸಿಗುತ್ತಿರುವ ಕನಿಷ್ಠ ಸೌಲಭ್ಯಗಳು ಖಾಸಗಿಯವರ ಪಾಲಾಗುತ್ತಿವೆ. ಹಾಸ್ಟೆಲ್ಗಳಲ್ಲಿ ಗೂಂಡಾ ಪ್ರವೃತ್ತಿ ಹೆಚ್ಚುತ್ತಿದೆ. ಹೊರಗಿನ ವ್ಯಕ್ತಿಗಳನ್ನು ಪ್ರಶ್ನಿಸಿದರೆ ಅಥವಾ ಸಂಬಂಧಪಟ್ಟವರಿಗೆ ದೂರು ನೀಡಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ವಸತಿನಿಲಯದಲ್ಲಿ ಖಾಸಗಿ ವ್ಯಕ್ತಿಗಳ ವಾಸ್ತವ್ಯಕ್ಕೆ ವಾರ್ಡನ್ ಅವರೇ ವ್ಯವಸ್ಥೆ ಮಾಡಿಕೊಟ್ಟಿದ್ದಾರೆ ಎನ್ನುವುದು ಮೇಲ್ನೋಟಕ್ಕೆ ಕಂಡುಬರುತ್ತದೆ. ಹಿರಿಯ ಅಧಿಕಾರಿಗಳು ಖಾಸಗಿ ವ್ಯಕ್ತಿಗಳನ್ನು ಹಾಸ್ಟೆಲ್ನಿಂದ ಹೊರ ಹಾಕುವ ಧೈರ್ಯ ಮಾಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಳ್ಳುತ್ತಾರೆ.