
ಕೊಪ್ಪಳ: ರಾಜ್ಯದಲ್ಲಿ ಎರಡು ಸಾವಿರ ಬಸ್ಗಳನ್ನು ಖರೀದಿಸಲಾಗುತ್ತಿದ್ದು, ಅದರಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಜನರಿಗೆ ಉತ್ತಮ ಸಾರಿಗೆ ಸೇವೆ ಕಲ್ಪಿಸುವ ಉದ್ದೇಶದಿಂದ 700 ಹೊಸ ಬಸ್ಗಳನ್ನು ಒದಗಿಸಲಾಗುವುದು. ಹಾಗೆಯೇ ಅನೇಕ ಕಡೆಗಳಲ್ಲಿ ಹೊಸ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರಡ್ಡಿ ಹೇಳಿದರು.

ತಾಲ್ಲೂಕಿನ ಬೇವೂರು ಗ್ರಾಮದಲ್ಲಿ ಬಸ್ ನಿಲ್ದಾಣ, ನಿರೀಕ್ಷಣಾ ಮಂದಿರ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಅಗತ್ಯ ಸೌಲಭ್ಯ ಕಲ್ಪಿಸಿಕೊಡಲು ಸರ್ಕಾರ ಬದ್ಧವಾಗಿದೆ. ಯಲಬುರ್ಗಾ ಕ್ಷೇತ್ರದಲ್ಲಿ ಸದ್ಯ 16 ಹೊಸ ಬಸ್ ನಿಲ್ದಾಣ ನಿರ್ಮಾಣಗೊಳ್ಳುತ್ತಿವೆ. ಮತ್ತೆ ಮಂಗಳೂರು ಗ್ರಾಮಕ್ಕೂ ಇಂದೇ ಮಂಜೂರು ಮಾಡಲಾಗುವುದು. ರಾಜ್ಯದ ಇತರೆ ಕ್ಷೇತ್ರಕ್ಕೆ ಹೋಲಿಕೆ ಮಾಡಿದರೆ ಪ್ರಸಕ್ತ ವರ್ಷದಲ್ಲಿ ಯಲಬುರ್ಗಾ ಕ್ಷೇತ್ರದಲ್ಲಿ ಬಸ್ ನಿಲ್ದಾಣ ನಿರ್ಮಾಣಕ್ಕೆ ಅತೀ ಹೆಚ್ಚು ಅನುದಾನ ಬಿಡುಗಡೆ ಮಾಡಲಾಗಿದೆ’ ಎಂದು ಹೇಳಿದರು. ಬೇವೂರು ಗ್ರಾಮದ ಬಸ್ ನಿಲ್ದಾಣಕ್ಕೆ ₹3 ಕೋಟಿ ಹಾಗೂ ನಿರೀಕ್ಷಣಾ ಮಂದಿರ ನಿರ್ಮಾಣಕ್ಕೆ ₹3 ಕೋಟಿ ಸೇರಿ ಒಟ್ಟು ₹6 ಕೋಟಿ ವೆಚ್ಚದಲ್ಲಿ ಎರಡು ಕಾಮಗಾರಿಗಳು ನಡೆಯಲಿವೆ. ಹುಲಿಗಿ ದೇವಸ್ಥಾನ ಹಾಗೂ ಅಂಜನಾದ್ರಿಯಲ್ಲಿ ಪ್ರವಾಸಿ ತಾಣದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ಹನುಮ ಮಾಲಾಧಿಕಾರಿಗಳಿಗೆ ಸೂಕ್ತ ಸೌಲಭ್ಯಗಳನ್ನು ಕಲ್ಪಿಸಲು ಅಗತ್ಯ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.