
ಚಿತ್ರದುರ್ಗ: ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಹೆಚ್ಚಿನ ತೆರಿಗೆ ಹಾಗೂ ಸುಂಕಗಳು ಸಲ್ಲಿಕೆಯಾಗುತ್ತಿವೆ. ಅನುದಾನ ಹಂಚಿಕೆಯಲ್ಲಿನ ತಾರತಮ್ಯ ನಿವಾರಣೆ ಆಗಬೇಕಾಗಿದೆ. ರಾಜ್ಯ ಎ ತೆರಿಗೆ ಸಂಗ್ರಹದಲ್ಲಿನ ಪಾಲಿಗೆ ಅನುಗುಣವಾಗಿ ಅನುದಾನ ಹಂಚಿಕೆ ಮಾರ್ಗಸೂಚಿ ರಚಿಸಲು ಕೇಂದ್ರ ಹಣಕಾಸು ಆಯೋಗಕ್ಕೆ ಮನವಿ ಸಲ್ಲಿಸಲಾಗುವುದು. ಜೊತೆಗೆ ಅನುದಾನ ಹೆಚ್ಚಳಕ್ಕೆ ಶಿಫಾರಸು ಮಾಡಲಾಗುವುದು ಎಂದು 5ನೇ ರಾಜ್ಯ ಹಣಕಾಸು ಆಯೋಗದ ಅಧ್ಯಕ್ಷ ಸಿ.ನಾರಾಯಣಸ್ವಾಮಿ ಹೇಳಿದರು. ನಗರಸಭೆಯ ಕೌನ್ಸಿಲ್ ಸಭಾಂಗಣದಲ್ಲಿ ಮಂಗಳವಾರ ನಡೆದ ನಗರಸಭೆ ಚುನಾಯಿತ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಜೊತೆಗಿನ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಜನಸಂಖ್ಯೆ ಹಾಗೂ ಭೌಗೋಳಿಕ ಪ್ರದೇಶ ವ್ಯಾಪ್ತಿಯನ್ನು ಪ್ರಮುಖ ಮಾನದಂಡವಾಗಿ ಅನುಸರಿಸಿ 15ನೇ ಕೇಂದ್ರ ಹಣಕಾಸು ಆಯೋಗವು ಕೇಂದ್ರ ಸರ್ಕಾರದ ಅನುದಾನ ಹಂಚಿಕೆಗೆ ಶಿಫಾರಸು ಮಾಡಿದೆ. ಇದರಿಂದಾಗಿ ದಕ್ಷಿಣ ಭಾರತದ ರಾಜ್ಯಗಳಿಗೆ ಕಡಿಮೆ ಅನುದಾನ ಲಭಿಸಿದೆ. ಕೇಂದ್ರ ಸರ್ಕಾರವೇ ರೂಪಿಸಿದ ಜನಸಂಖ್ಯೆ ನಿಯಂತ್ರಣ ಕಾರ್ಯಕ್ರಮಗಳನ್ನು ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಾಗಿದೆ’ ಎಂದರು.

ಜನಸಂಖ್ಯೆ ಬೆಳವಣಿಗೆ ದರ ಉತ್ತರದ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ನಿಯಂತ್ರಣದಲ್ಲಿದೆ. ಭೌಗೋಳಿಕ ವಿಸ್ತೀರ್ಣದಲ್ಲಿ ಉತ್ತರದ ರಾಜ್ಯಗಳಿಗಿಂತ ನಮಗೆ ಕಡಿಮೆ ಅನುದಾನ ಲಭಿಸಿದೆ. ನಗರಸಭೆ ಸೇರಿದಂತೆ ಇತರೆ ಸ್ಥಳೀಯ ಸಂಸ್ಥೆಗಳ ಆರ್ಥಿಕ ಸ್ಥಿತಿಗತಿಗಳನ್ನು ಅವಲೋಕಿಸಿ, ಸ್ಥಳೀಯ ಸಂಸ್ಥೆಗಳ ಅನುದಾನ ಹೆಚ್ಚಳಕ್ಕೂ ಶಿಫಾರಸು ಮಾಡಲಾಗುವುದು ಎಂದರು. ರಾಜ್ಯ ಸರ್ಕಾರ ತೆರಿಗೆ, ಸುಂಕ ಹಾಗೂ ಶುಲ್ಕ ಸಂಗ್ರಹದ ಮೂಲಕ ಗಳಿಸುವ ಆದಾಯವನ್ನು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಪಂಚಾಯತ್ ರಾಜ್ ಸಂಸ್ಥೆಗಳ ನಡುವೆ ಸಮರ್ಪಕವಾಗಿ ಹಂಚಿಕೆ ಮಾಡುವ ಕುರಿತು ಆಯೋಗವು ಶಿಫಾರಸು ಮಾಡುತ್ತದೆ. ಮಹಾನಗರ ಪಾಲಿಕೆ, ನಗರಸಭೆ ಸೇರಿದಂತೆ ಇತರೆ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯಿತಿಗಳಿಗೆ ಮಾತ್ರ ತೆರಿಗೆ ಹಾಗೂ ಸುಂಕ ವಿಧಿಸುವ ಹಕ್ಕಿದೆ.

ಸ್ಥಳೀಯ ಸಂಸ್ಥೆಗಳು ಆರ್ಥಿಕವಾಗಿ ಸ್ವಾವಲಂಬಿಯಾದರೆ ಮಾತ್ರ ಪ್ರಗತಿ ಸಾಧ್ಯವಾಗುತ್ತದೆ ಎಂದರು. ಆಯೋಗವು ರಾಜ್ಯ ಸರ್ಕಾರಕ್ಕೆ ಮಧ್ಯಂತರ ವರದಿ ಸಲ್ಲಿಸಿದ್ದು, ಇದು ಉಭಯ ಸದನಗಳಲ್ಲಿ ಚರ್ಚೆಯಾಗಿದೆ. ಈ ವರದಿಯನ್ನು ಕೇಂದ್ರ ಸರ್ಕಾರಕ್ಕೂ ಕಳುಹಿಸಿಕೊಡಲಾಗಿದೆ. ಕೇಂದ್ರ ಹಣಕಾಸು ಆಯೋಗದ ನಿಬಂಧನೆಗಳಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಕಾಲಕಾಲಕ್ಕೆ ಚುನಾವಣೆ ನಡೆಸಬೇಕು. ರಾಜ್ಯದಲ್ಲಿ ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಗಳು ನಡೆಯದ ಕಾರಣ ರಾಜ್ಯಕ್ಕೆ ಲಭಿಸಬೇಕಾದ ₹ 2,100 ಕೋಟಿ ಅನುದಾನವನ್ನು ಕೇಂದ್ರ ಹಣಕಾಸು ಆಯೋಗ ತಡೆ ಹಿಡಿದಿದೆ ಎಂದರು. 2026ರ ಮಾರ್ಚ್ ಅಂತ್ಯಕ್ಕೆ 15ನೇ ಕೇಂದ್ರ ಹಣಕಾಸು ಆಯೋಗದ ಅವಧಿ ಮುಕ್ತಾಯವಾಗಲಿದೆ. ಇದರ ಒಳಗಾಗಿ ಈ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಿದರೆ ತಡೆ ಹಿಡಿದ ಅನುದಾನವನ್ನು ಬಳಕೆ ಮಾಡಿಕೊಳ್ಳಬಹುದು. ಜೂನ್ ಒಳಗಾಗಿ ರಾಜ್ಯ ಹಣಕಾಸು ಆಯೋಗದಿಂದ ಅಂತಿಮ ಶಿಫಾರಸುಗಳುಳ್ಳ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದರು. ನಗರಸಭೆ ಅಧ್ಯಕ್ಷೆ ಬಿ.ಎನ್. ಸುಮಿತಾ ಮಾತನಾಡಿ ನಗರಸಭೆಗೆ ತೆರಿಗೆ ಪಾವತಿಯಿಂದಲೇ ಹೆಚ್ಚಿನ ಆದಾಯ ಸಂಗ್ರಹವಾಗಲಿದೆ.

ಈ ತೆರಿಗೆ ಹಣದಿಂದಲೇ ಪೌರಕಾರ್ಮಿಕರ ವೇತನ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೂ ಈ ಅನುದಾನದಿಂದಲೇ ಭರಿಸಲಾಗುತ್ತಿದೆ. ಹೀಗಾಗಿ ನಗರಸಭೆಗೆ ಅನುದಾನ ಕಡಿಮೆ ಇರುವುದರಿಂದ ಅಭಿವೃದ್ಧಿ ಕೆಲಸಗಳಿಗೆ ಕಷ್ಟವಾಗಲಿದ್ದು, ಸರ್ಕಾರದಿಂದ ಹೆಚ್ಚಿನ ಆದಾಯದ ಅವಶ್ಯಕತೆ ಇದೆ ಎಂದರು. ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಮಾತನಾಡಿ ನಗರದಲ್ಲಿ ಕುಡಿಯುವ ನೀರು ನಿರ್ವಹಣಾ ವ್ಯವಸ್ಥೆಗೆ ಹಾಗೂ ನಗರ ಒಳ ಚರಂಡಿ ವ್ಯವಸ್ಥೆಗೆ ಹೆಚ್ಚಿನ ಅನುದಾನಕ್ಕಾಗಿ ವಿಶೇಷ ಪ್ಯಾಕೇಜ್ ಬಿಡುಗಡೆಗೆ ರಾಜ್ಯ ಹಣಕಾಸು ಆಯೋಗ ಶಿಫಾರಸು ಮಾಡಬೇಕು. ನಗರದಲ್ಲಿ 2 ಲಕ್ಷಕ್ಕೂ ಹೆಚ್ಚಿನ ಜನಸಂಖ್ಯೆ ಹೊಂದಿದ್ದು, ನಗರಸಭೆಯಲ್ಲಿ ಪೌರಕಾರ್ಮಿಕರು, ತಾಂತ್ರಿಕ ಹುದ್ದೆಗಳು ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇದ್ದು, ಇದರಿಂದ ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿ, ಸಿಬ್ಬಂದಿಗೆಗೆ ಹೆಚ್ಚಿನ ಕೆಲಸದ ಒತ್ತಡವಾಗುತ್ತಿದೆ ಎಂದರು. ನಗರಸಭೆ ಉಪಾಧ್ಯಕ್ಷೆ ಶ್ರೀದೇವಿ, ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ನಸರುಲ್ಲಾ, 5ನೇ ರಾಜ್ಯ ಹಣಕಾಸು ಆಯೋಗದ ಸದಸ್ಯರಾದ ಮೊಹಮದ್ ಸನಾವುಲ್ಲಾ, ಆರ್.ಎಸ್.ಪೋಂಡೆ, ಸಮಾಲೋಚಕರಾದ ಕೆಂಪೇಗೌಡ, ಸುಪ್ರಸನ್ನ, ಆಪ್ತ ಕಾರ್ಯದರ್ಶಿ ಯಾಲಕ್ಕಿಗೌಡ, ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್, ನಗರಸಭೆ ಪೌರಾಯುಕ್ತ ಎಂ.ರೇಣುಕಾ ಇದ್ದರು.