
ಚಾಮರಾಜನಗರ: ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ನೀಡಿದ ರಾಜ್ಯ ಸರ್ಕಾರ ಹಾಗೂ ಅರಣ್ಯಾಧಿಕಾರಿಗಳ ನಡೆ ಖಂಡಿಸಿ ರೈತ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

j3tvkannada
ಬೆಟ್ಟದ ತಪ್ಪಲಿನ ಅರಣ್ಯ ಇಲಾಖೆ ಚೆಕ್ ಪೋಸ್ಟ್ ಬಳಿ ಜಮಾವಣೆಗೊಂಡ ರೈತ ಸಂಘಟನೆ ಪದಾಧಿಕಾರಿಗಳು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ ಮಾತನಾಡಿ, ಹಿಮವದ್ ಗೋಪಾಲಸ್ವಾಮಿ ಬೆಟ್ಟ ಸೂಕ್ಷ್ಮ ಪರಿಸರ ವಲಯವಾಗಿದ್ದು, 2016 ರಿಂದಲೇ ಖಾಸಗಿ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಹೀಗಿದ್ದರೂ ನಿಯಮಗಳನ್ನು ಗಾಳಿಗೆ ತೂರಿ ಚಿತ್ರೀಕರಣಕ್ಕೆ ಅರಣ್ಯಾಧಿಕಾರಿಗಳು ಅವಕಾಶ ನೀಡಿರುವುದು ಸರಿಯಲ್ಲ. ಆದ್ದರಿಂದ ಅವಕಾಶ ಮಾಡಿಕೊಟ್ಟವರ ವಿರುದ್ಧ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದರು. ಬೆಟ್ಟಕ್ಕೆ ಸ್ಥಳೀಯರು ಖಾಸಗಿ ವಾಹನಗಳಲ್ಲಿ ತೆರಳಲು ಅವಕಾಶ ಮಾಡಿಕೊಡದೆ ಸೂಕ್ಷ್ಮ ಪರಿಸರ ವಲಯ ಎನ್ನುವ ಅರಣ್ಯಾಧಿಕಾರಿಗಳು, ಪರಭಾಷೆಯ ಸಿನಿಮಾ ಚಿತ್ರೀಕರಣಕ್ಕೆ ಅವಕಾಶ ಮಾಡಿಕೊಟ್ಟಿರುವುದೇಕೆ ಎಂದು ಪ್ರಶ್ನಿಸಿದರು.