
ಉಡುಪಿ: ಕೇಂದ್ರ ಸರ್ಕಾರವು ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡುವ ಮೂಲಕ ಬಡವರಿಗೆ, ಮಹಿಳೆಯರಿಗೆ ಮೋಸ ಮಾಡಿದೆ. ಅಚ್ಚೇ ದಿನ್ ಬರುವುದಾಗಿ ಹೇಳಿ ಜನರಿಗೆ ಟೋಪಿ ಹಾಕುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಆಕ್ರೋಶ ವ್ಯಕ್ತಪಡಿಸಿದರು.

j3tvkannada
ಕೇಂದ್ರ ಸರ್ಕಾರ ಅಡುಗೆ ಅನಿಲ ಹಾಗೂ ಇಂಧನ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ನಗರದ ಬ್ರಹ್ಮಗಿರಿ ವೃತ್ತದ ಬಳಿ ಉಡುಪಿ ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ ಶುಕ್ರವಾರ ನಡೆದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಕೇಂದ್ರ ಸರ್ಕಾರದ ಬೆಲೆ ಏರಿಕೆ ಹೊರೆಯಿಂದ ಮಧ್ಯಮ ವರ್ಗದ ಕುಟುಂಬಗಳು ಹೇಗೆ ಜೀವನ ನಿರ್ವಹಿಸಬೇಕು, ರಾಜ್ಯದಲ್ಲಿ ಜನಾಕ್ರೋಶ ಯಾತ್ರೆ ನಡೆಸಲು ಬಿಜೆಪಿಗೆ ನೈತಿಕತೆ ಇದೆಯೇ ಎಂದು ಅವರು ಪ್ರಶ್ನಿಸಿದರು. ಬಿಜೆಪಿಯು ಜಾತಿ ಮತ್ತು ಧರ್ಮದ ಹೆಸರಿನಲ್ಲಿ ದೇಶವನ್ನು ವಿಭಜನೆ ಮಾಡುತ್ತಿದೆ, ಜನರ ಭಾವನೆಗಳೊಂದಿಗೆ ಆಟವಾಡುತ್ತಿದೆ ಎಂದು ಅವರು ಆರೋಪಿಸಿದರು.
ಮಹಿಳೆಯರು ಸ್ವತಂತ್ರವಾಗಿ ಮತ್ತು ಸ್ವಾವಲಂಬನೆಯಿಂದ ಬದುಕಬೇಕು ಎಂಬ ಉದ್ದೇಶದಿಂದ ಮುಖ್ಯಮಂತ್ರಿ ಜಾರಿಗೆ ತಂದಿರುವ ಗ್ಯಾರೆಂಟಿಗಳು ನಿಜವಾಗಿಯೂ ಜನರನ್ನು ತಲುಪುತ್ತಿವೆ. ಇವುಗಳಿಂದ ಮಹಿಳೆಯರು ಬಹಳಷ್ಟು ಪ್ರಯೋಜನ ಪಡೆದಿದ್ದಾರೆ ಎಂದು ಸೌಮ್ಯ ರೆಡ್ಡಿ ಹೇಳಿದರು. ಪ್ರತಿಭಟನೆಯ ಬಳಿಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಬಿಜೆಪಿಗೆ ಮಹಿಳೆಯರ ಬಗ್ಗೆ ಕಾಳಜಿ ಇಲ್ಲ ಅವಕಾಶ ಸಿಕ್ಕಾಗ ಅವರು ಏನನ್ನೂ ಮಾಡಲಿಲ್ಲ. ಜನರನ್ನು ಮೂರ್ಖರನ್ನಾಗಿಸುತ್ತಿದ್ದಾರೆ.
ಕಾಂಗ್ರೆಸ್ ಸರ್ಕಾರ ಎಲ್ಲರನ್ನೂ ಸಮಾನವಾಗಿ ಕಾಣುತ್ತಿದೆ’ ಎಂದರು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಮಾತನಾಡಿ ಮಹಾತ್ಮ ಗಾಂಧಿ ಅವರು ಮಹಿಳೆಯರು ಪುರುಷರಿಗೆ ಸಮಾನವಾಗಿ ನಿಲ್ಲಬೇಕೆಂದು ಕನಸು ಕಂಡಿದ್ದರು. ಆದರೆ ಸಮಾಜವು ಮಹಿಳೆಯರನ್ನು ಕೇವಲ ಮನೆಗೆ ಸೀಮಿತವೆಂದು ನೋಡುತ್ತಿದೆ. ಮಹಿಳೆಯರನ್ನು ಸಬಲೀಕರಣಗೊಳಿಸುವ ಏಕೈಕ ಪಕ್ಷ ಕಾಂಗ್ರೆಸ್ ಎಂದರು.