ಚಿಂತಾಮಣಿ: ಚಿಂತಾಮಣಿ ತಾಲ್ಲೂಕಿನಲ್ಲಿ ಬ್ಯಾಂಕ್ ಹಾಗೂ ಖಾಸಗಿ ಫೈನಾನ್ಸ್ ನವರ ಹಾವಳಿ ಹೆಚ್ಚಾಗಿದ್ದು, ಸಾಲ ವಸೂಲಾತಿ ಮಾಡಲು ಬೆಳ್ಳಂ ಬೆಳಿಗ್ಗೆ ಕದ ತಟ್ಟುವ ಮೂಲಕ ರೈತರು ಮತ್ತು ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದು ಇದರಿಂದ ಭಯಗೊಂಡ ರೈತರು ಮತ್ತು ಮಹಿಳೆಯರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.

ಈ ಬಗ್ಗೆ ಕೂಡಲೇ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ, ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಜೆ.ರಘುನಾಥರೆಡ್ಡಿ ನೇತೃತ್ವದಲ್ಲಿ ನೂರಾರು ಜನ ರೈತರು ನಗರದ ತಾಲೂಕು ಕಛೇರಿ ಮುಂದೆ ಪ್ರತಿಭಟನೆ ನಡೆಸಿ ಕೂಡಲೇ ಸರ್ಕಾರ, ರೈತರು ಹಾಗೂ ಮಹಿಳೆಯರು ಅನುಭವಿಸುತ್ತಿರುವ ತೊಂದರೆಗಳಿಗೆ ಕಡಿವಾಣ ಹಾಕುವಂತೆ ಆಗ್ರಹಿಸಿದರು. ತಹಶೀಲ್ದಾರ್ ಸುದರ್ಶನ್ ಯಾದವ್ ರವರ ಮುಖಾಂತರ ಸರ್ಕಾರಕ್ಕೆ ಮನವಿ ಪತ್ರವನ್ನು ಕೂಡಾ ಸಲ್ಲಿಸಿದರು.
ಪ್ರವಾಸಿ ಮಂದಿರದ ಬಳಿಯಿಂದ ಮೆರವಣಿಗೆ ನಡೆಸಿ ರೈತ ಪರ ಘೋಷಣೆಗಳನ್ನು ಕೂಗುತ್ತಾ ನಂತರ ತಾಲೂಕು ಕಛೇರಿ ಮುಂದೆ ಜಮಾಯಿಸಿ ಕೆಲಕಾಲ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ರಾಜ್ಯ ಸಂಘದ ಪ್ರಧಾನ ಕಾರ್ಯದರ್ಶಿ ವೆಂಕಟರಾಮಯ್ಯ ಸೇರಿದಂತೆ ರೈತ ಮುಖಂಡರು, ಕಾರ್ಯಕರ್ತರು ಹಾಜರಿದ್ದರು.