
ಮಂಡ್ಯ: ಮದ್ದೂರಿನ ಗ್ರಾಮದೇವತೆ, ಶಕ್ತಿ ದೇವತೆ ಮದ್ದೂರಮ್ಮನ ಜಾತ್ರಾ ಮಹೋತ್ಸವವು ಮಂಗಳವಾರದಿಂದ ಸಡಗರದಿಂದ ಆರಂಭವಾಗಿದ್ದು, ಬುಧವಾರ ಕೊಂಡ ಮಹೋತ್ಸವ ವೈಭವದಿಂದ ನಡೆಯಿತು. 17ರಂದು ಪ್ರಸಿದ್ದ ಸಿಡಿ ಮಹೋತ್ಸವಕ್ಕೆ ಸಿದ್ಧತೆ ನಡೆದಿದೆ.

j3tvkannada
ಕ್ಷೇತ್ರದ ಹಿನ್ನೆಲೆ: ಅಡಿಕೆ ವ್ಯಾಪಾರಿಯಾಗಿದ್ದ ಭೈರಶೆಟ್ಟಿ ಎಂಬಾತ ಮಡಿಕೇರಿ ಕಡೆಯಿಂದ ತನ್ನ ಎತ್ತಿನ ಗಾಡಿಯಲ್ಲಿ ಅಡಿಕೆ ತರುತ್ತಿದ್ದಾಗ ಆ ಗಾಡಿಯಲ್ಲಿ ದೇವತೆ ಕುಳಿತು ಬರುತ್ತಿದ್ದಾಗ ಮದ್ದೂರು ಬಳಿ ಈಗಿರುವ ಮೈಸೂರು – ಬೆಂಗಳೂರು ಹೆದ್ದಾರಿ ಬಳಿಯಿರುವ ದೇವಸ್ಥಾನದ ಜಾಗದಲ್ಲಿ ಹೆಚ್ಚಿನ ಹಿಪ್ಪೆ ಮರಗಳು ಇದ್ದು, ತಂಪಾಗಿದ್ದರಿಂದ ದೇವತೆ ಅಲ್ಲಿಯೇ ಕಲ್ಲಿನ ರೂಪದಲ್ಲಿ ಮೂಡಿ ಬಂದು ನೆಲೆಸಿದಳು. ಆನಂತರ ಭೈರಶೆಟ್ಟಿಯೇ ಕೆಲಕಾಲ ದೇವಿಗೆ ಪೂಜೆ ಸಲ್ಲಿಸುತ್ತಿದರು ಎಂದು ಇತಿಹಾಸದಲ್ಲಿ ಉಲ್ಲೇಖಿಸಲಾಗಿದೆ.
15ರಂದು ಮದ್ದೂರಮ್ಮ ಮಠಮನೆ ದೇವಸ್ಥಾನದಲ್ಲಿ ಹೋಮ, ಹವನ ಕಾರ್ಯ, ಮಧ್ಯಾಹ್ನ ಎಲ್ಲಮ್ಮ ದೇವಿಗೆ ಚಂದ್ರಭಂಡಾರ ಸೇವೆ ಸಲ್ಲಿಸಲಾಯಿತು. ಸಂಜೆ 4ಕ್ಕೆ ಗ್ರಾಮಸ್ಥರಿಂದ ಕೊಂಡ ಬಂಡಿ ಉತ್ಸವ, ಪ್ರಮುಖ ಬೀದಿಗಳಲ್ಲಿ ಸಂಜೆ 6.30ಕ್ಕೆ ಶ್ರೀ ಮದ್ದೂರಮ್ಮನವರ ಮೂಲ ದೇಗುಲದಲ್ಲಿ ಅಭಿಷೇಕ, ಹೋಮ, ಹವನ ಹಾಗೂ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಸೇರಿದಂತೆ ರಾತ್ರಿ 11.30ಕ್ಕೆ ಕೊಂಡಕ್ಕೆ ಅಗ್ನಿ ಸ್ಪರ್ಶ ಪೂಜೆ ಮಾಡಲಾಯಿತು.
16ರಂದು ಮುಂಜಾನೆ ಶುಭ ಶ್ರವಣ ನಕ್ಷತ್ರ ಬ್ರಾಹ್ಮಿ ಮಹೂರ್ತದಲ್ಲಿ ಬೆಳಿಗ್ಗೆ 6ಕ್ಕೆ ಮದ್ದೂರಮ್ಮನವರ ಕೊಂಡೋತ್ಸವ ವಿಜೃಂಭಣೆಯಿಂದ ನೆರವೇರಿತು. ಸಂಜೆ 4.30ಕ್ಕೆ ಹೆಣ್ಣು ಮಕ್ಕಳಿಂದ ಮದ್ದೂರಮ್ಮನವರಿಗೆ ಹಾಲರವಿ ಸೇವೆ ನಡೆಯಿತು. 17ರಂದು ಸಂಜೆ 4ರ ನಂತರ ಮಠ ಮನೆಯಿಂದ ಭಕ್ತರಿಂದ ಬಾಯಿ ಬೀಗ ಸಮೇತ ಸಿಡಿರಣ್ಣನವರ ಸಿಡಿ ಉತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನಡೆಯಲಿದೆ. 18ರಂದು ಸಂಜೆ 4ಕ್ಕೆ ಮದ್ದೂರಮ್ಮನವರ ಓಕುಳಿ ಸೇವೆ, ಸಂಜೆ 6.30ಕ್ಕೆ ಉಯ್ಯಾಲೆ ಉತ್ಸವ, ರಾತ್ರಿ 9ಕ್ಕೆ ಊರಿನ ಪ್ರಮುಖ ಬೀದಿಗಳಲ್ಲಿ ಮುತ್ತಿನ ಪಲ್ಲಕ್ಕಿ ಮೆರವಣಿಗೆ ನಡೆಯಲಿದೆ. ಸಾವಿರಾರು ಭಕ್ತರು ಮಹೋತ್ಸವದಲ್ಲಿ ಪಾಲ್ಗೊಂಡು ದೇವಿಯ ದರ್ಶನ ಪಡೆಯಲಿದ್ದಾರೆ.