
ಹಾಸನ: ರಾಜ್ಯದ ಅಭಿವೃದ್ಧಿಗೆ ಜನರ ತೆರಿಗೆ ಪಾಲನ್ನು ಸಮರ್ಪಕವಾಗಿ ವಿತರಿಸದ ಕೇಂದ್ರ ಸರ್ಕಾರದ ವಿರುದ್ಧ ನಗರದಲ್ಲಿ ಪ್ರತಿಭಟನೆ ನಡೆಸಿದ ಯುವ ಕಾಂಗ್ರೆಸ್ ಸದಸ್ಯರು, ಆದಾಯ ತೆರಿಗೆ ಇಲಾಖೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

j3tvkannada
ನಗರದ ಬೇಲೂರು ರಸ್ತೆಯ ಬಳಿ ಕಾರ್ಯಕರ್ತರು, ಎತ್ತಿನಗಾಡಿ ಹಾಗೂ ಸಿಲಿಂಡರ್ ಹಿಡಿದು ಮೆರವಣಿಗೆಯಲ್ಲಿ ಸಾಗಿದರು. ಆದಾಯ ತೆರಿಗೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಕಾರರನ್ನು ಪೊಲೀಸರು ತಡೆದರು. ಯುವ ಕಾಂಗ್ರೆಸ್ ಜಿಲ್ಲಾ ಘಟಕದ ಉಪಾಧ್ಯಕ್ಷ ಎಸ್.ಡಿ. ರಂಗಸ್ವಾಮಿ ಮಾತನಾಡಿ, ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯದ ಮೇಲೆ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯದ ಜನರು ಪಾವತಿಸಿದ ತೆರಿಗೆ ನೀಡುವಲ್ಲಿಯೂ ಮೋಸ ಮಾಡುತ್ತಿದೆ. ಇದನ್ನು ಖಂಡಿಸಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.
ನಿತ್ಯ ಬಳಕೆಯ ವಸ್ತುಗಳು, ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸಿಲಿಂಡರ್ ಬೆಲೆಯು ಏರಿಕೆ ಮಾಡಲಾಗುತ್ತಿದ್ದು, ಮಧ್ಯಮ ಹಾಗೂ ಬಡ ಜನರ ಲೂಟಿಯಲ್ಲಿ ಕೇಂದ್ರ ಸರ್ಕಾರ ನಿರತವಾಗಿದೆ. ಇದನ್ನು ಬಲವಾಗಿ ಖಂಡಿಸುತ್ತೇವೆ ಎಂದರು. ಕೇಂದ್ರ ಸರ್ಕಾರ ಬೆಲೆ ಏರಿಕೆ ನೀತಿ ಕೈ ಬಿಡಬೇಕು. ರಾಜ್ಯದ ತೆರಿಗೆ ಪಾಲನ್ನು ಸಮರ್ಪಕವಾಗಿ ವಿತರಣೆ ಮಾಡಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು. ಪದಾಧಿಕಾರಿಗಳಾದ ಜಿ.ಈ.ಪುನೀತ್, ಸಮೀರ್ ಪಾಷಾ, ಎಚ್.ಎನ್.ಶರತ್, ರವಿಕಿರಣ್ ಭಾಗವಹಿಸಿದ್ದರು.