
ಹಾವೇರಿ: ಜಿಲ್ಲೆಯ ಬ್ಯಾಡಗಿ ಪಟ್ಟಣದ ಬಸವೇಶ್ವರನಗರದಲ್ಲಿ ಮಹಿಳೆಯೊಬ್ಬರಿಗೆ ಚಪ್ಪಲಿ ಹಾಗೂ ಕಲ್ಲಿನಿಂದ ಹೊಡೆದು ಹಲ್ಲೆ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಇದೊಂದು ಸಾಮೂಹಿಕ ಅತ್ಯಾಚಾರ ಪ್ರಕರಣ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಆರೋಪಿಸಿದ್ದಾರೆ.

j3tvkannada
ನಗರದಲ್ಲಿರುವ ಜಿಲ್ಲಾ ಎಸ್ಪಿ ಅಂಶುಕುಮಾರ ಕಚೇರಿಗೆ ಗುರುವಾರ ಭೇಟಿ ನೀಡಿದ ಅವರು, ಪ್ರಕರಣದ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಭೇಟಿ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಸಾಮೂಹಿಕ ಅತ್ಯಾಚಾರ ವಿಷಯವನ್ನು ಯಾರಿಗೂ ಹೇಳದಂತೆ ಸಂತ್ರಸ್ತೆಗೆ ಜೀವ ಬೆದರಿಕೆಯೊಡ್ಡಲಾಗಿದೆ. ಹಾನಗಲ್ನಲ್ಲಿ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣ, ಬ್ಯಾಡಗಿ ಪ್ರಕರಣದ ಮೂಲಕ ಮರುಕಳಿಸಿದೆ ಎಂದರು. ಮಾಧ್ಯಮದ ಮೂಲಕ ವಿಷಯ ಗೊತ್ತಾಗುತ್ತಿದ್ದಂತೆ, ಬ್ಯಾಡಗಿ ಠಾಣೆ ಪೊಲೀಸರಿಂದ ಮಾಹಿತಿ ಪಡೆದುಕೊಂಡೆ. ಸಂತ್ರಸ್ತೆ ಚಿಕಿತ್ಸೆ ಪಡೆಯುತ್ತಿರುವ ಹಾವೇರಿ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿದೆ. ಸಂತ್ರಸ್ತೆ ಹಾಗೂ ಅವರ ತಾಯಿಯನ್ನು ಮಾತನಾಡಿಸಿ, ವಿಡಿಯೊ ಹೇಳಿಕೆಯನ್ನು ಪಡೆದುಕೊಂಡಿದ್ದೇನೆ. ಹೇಳಿಕೆ ಸಮೇತ ಜಿಲ್ಲಾ ಎಸ್ಪಿಗೆ ಮನವಿ ಸಲ್ಲಿಸಿದ್ದೇನೆ ಎಂದು ಹೇಳಿದರು.
ಐವರು ಸೇರಿಕೊಂಡು ಸಂತ್ರಸ್ತೆಯನ್ನು ಅಪಹರಿಸಿದ್ದರು. ಅದರಲ್ಲಿ ಇಬ್ಬರು ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವುದಾಗಿ ಮಹಿಳೆಯೇ ನನ್ನ ಬಳಿ ಹೇಳಿಕೊಂಡಿದ್ದಾರೆ. ಅರೋಪಿ ಫರೀದಾಬಾನು ಹಾಗೂ ಮಹಿಳೆಯೊಬ್ಬರು ಹಲ್ಲೆ ಮಾಡಿರುವ ಸಂಗತಿಯನ್ನು ತಿಳಿಸಿದ್ದಾರೆ. ಸಂತ್ರಸ್ತೆಯು ವೈದ್ಯರಿಗೆ ವಿಷಯ ತಿಳಿಸುತ್ತಿದ್ದಂತೆ, ಆರೋಪಿಗಳನ್ನು ರಕ್ಷಿಸಲು ಪೊಲೀಸರ ಮೇಲೆ ರಾಜಕೀಯ ಒತ್ತಡ ಹೇರಲಾಗಿದೆ. ಪೊಲೀಸ್ ಇಲಾಖೆಯ ಕೆಲ ಅಧಿಕಾರಿಗಳು ಶಾಮೀಲಾಗಿ, ಪ್ರಕರಣವನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದಾರೆ. ಮಹಿಳೆಯನ್ನು ಬೆದರಿಸಿ, ತಿರುಚಿದ ಹೇಳಿಕೆ ಬರೆಸಿಕೊಂಡಿದ್ದಾರೆ. ಅತ್ಯಾಚಾರ ಪ್ರಕರಣ ಮುಚ್ಚಿಹಾಕುವ ಹುನ್ನಾರ ನಡೆದಿದೆ. ಸಂತ್ರಸ್ತೆ ಜೀವ ಭಯದಲ್ಲಿದ್ದಾರೆ ಎಂದು ತಿಳಿಸಿದರು.