
ಮಂಡ್ಯ: ನಾಲೆಗಳಿಗೆ ಸಮರ್ಪಕವಾಗಿ ನೀರು ಹರಿಸುವಂತೆ ಆಗ್ರಹಿಸಿ ಟಿ.ಕಾಗೇಪುರ ಬಳಿಯ ಕಾವೇರಿ ನೀರಾವರಿ ನಿಗಮದ ಕಚೇರಿಯ ಮುಂದೆ ಅಂಚೇದೊಡ್ಡಿ, ತಮ್ಮಡಹಳ್ಳಿ, ಅಮೃತೇಶ್ವರನಹಳ್ಳಿ, ನೆಲಮಾಕನಹಳ್ಳಿ, ಕಂದೇಗಾಲ ಗ್ರಾಮದ ರೈತರು ಕಾವೇರಿ ನೀರಾವರಿ ನಿಗಮದ ಮುಂದೆ ಗುರುವಾರ ಪ್ರತಿಭಟನೆ ನಡೆಸಿದರು.

j3tvkannada
ಕಚೇರಿ ಮುಂದೆ ಜಮಾಯಿಸಿದ ರೈತರು ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆ. ಆರ್ ಎಸ್ ಅಣೆಕಟ್ಟಿನಿಂದ ಕಾಲುವೆಗಳಿಗೆ ನೀರು ಹರಿಸುತ್ತಿದ್ದರೂ ತಾಲೂಕಿನ ಕೊನೆಯ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ.
ಈಗಾಗಲೇ ಬೆಳೆದಿರುವ ಕಬ್ಬು, ಭತ್ತ, ರಾಗಿ, ಜೋಳದ ಬೆಳೆಗಳು ಒಣಗುತ್ತಿದ್ದು, ಕೂಡಲೇ ನೀರು ಹರಿಸಬೇಕು ಎಂದು ಆಗ್ರಹಿಸಿದರು. ಪ್ರತಿಭಟನಾ ಸ್ಥಳಕ್ಕೆ ಮಾಜಿ ಶಾಸಕ ಕೆ. ಅನ್ನದಾನಿ ಭೇಟಿ ನೀಡಿ ದೂರವಾಣಿ ಮೂಲಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಇನ್ನೆರಡು ದಿನಗಳಲ್ಲಿ ನೀರು ಹರಿಸುವ ಭರವಸೆಯನ್ನು ಅಧಿಕಾರಿಗಳು ನೀಡಿದ್ದರಿಂದ ರೈತರು ಪ್ರತಿಭಟನೆಯನ್ನು ಸ್ಥಗಿತಗೊಳಿಸಿದರು.