
ಹಾಸನ : 50 ಎಕರೆ ಜಮೀನು ನೀಡಿದರೆ, ಕೈಗಾರಿಕಾ ಪ್ರದೇಶ ಸ್ಥಾಪಿಸಿ ನಿರುದ್ಯೋಗಿಗಳಿಗೆ ಉದ್ಯೋಗ ಕಲ್ಪಿಸಲು ಕ್ರಮ ಕೈಗೊಳ್ಳುವುದಾಗಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

j3tvkannada
ಗ್ರಾಮೀಣ ಭಾಗದ ಯುವಕರು ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗುತ್ತಿದ್ದು, ಇದನ್ನು ತಪ್ಪಿಸಲು ಸ್ಥಳೀಯವಾಗಿ ಉದ್ಯೋಗ ಸೃಷ್ಟಿಸುವುದು ಅಗತ್ಯ. ಈ ನಿಟ್ಟಿನಲ್ಲಿ ಕ್ರಮ ಅಗತ್ಯ ಎಂದರು. ಜಿಲ್ಲೆಯ ರಸ್ತೆಗಳ ಅಭಿವೃದ್ಧಿ ಕುರಿತು ಸಂಸದ ಶ್ರೇಯಸ್ ಪಟೇಲ್ ಪಟ್ಟಿ ನೀಡಿದ್ದಾರೆ. ಹೆಚ್ಚಿನ ಒತ್ತು ನೀಡಿ ಅಭಿವೃದ್ಧಿ ಪಡಿಸಲಾಗುವುದು. ಪಟ್ಟಣದ ಕ್ರೀಡಾಂಗಣ ವಿಶಾಲವಾಗಿದ್ದು, ಇಲ್ಲಿ ರಾತ್ರಿ ವೇಳೆಯೂ ಪಂದ್ಯಾವಳಿ ನಡೆಯುವಂತೆ ಹೊನಲು ಬೆಳಕಿನ ವ್ಯವಸ್ಥೆ ಮಾಡಿಕೊಡುವುದಾಗಿ ತಿಳಿಸಿದ ಅವರು, ಅಂಬೇಡ್ಕರ್ ಭವನದ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಕ್ರೀಡೆಯನ್ನು ಪ್ರೋತ್ಸಾಹಿಸಲು ಡಾ.ಅಂಬೇಡ್ಕರ್ ಅವರ ಹೆಸರಿನಲ್ಲಿ ಜೈ ಭೀಮ್ ಕಪ್ ಪಂದ್ಯಾವಳಿ ಆಯೋಜಿಸಿರುವುದು ಶ್ಲಾಘನೀಯ. ಇದು ನಿಲ್ಲದಂತೆ ಪ್ರತಿವರ್ಷ ನಡೆಸಿಕೊಂಡು ಬರಬೇಕು. ಪ್ರಥಮ ಬಹುಮಾನ ₹1 ಲಕ್ಷ ತಾವು ನೀಡುವುದಾಗಿ ಹೇಳಿದರು.
ಹಾಸನ ಜಿಲ್ಲೆಯಲ್ಲಿ ಸಂಘರ್ಷ ನಡೆಸದೇ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ಜನಪರ ಹೋರಾಟದ ಮೂಲಕ ರಾಜಕೀಯ ಶಕ್ತಿ ಪಡೆಯುವಂತೆ ಮುಖಂಡ ಶ್ರೀಧರ್ಗೌಡ ಅವರಿಗೆ ಕಿವಿಮಾತು ಹೇಳಿದರು.
ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲ್ಲೂಕು ಅಧ್ಯಕ್ಷ ಎಚ್.ಪಿ. ಶ್ರೀಧರ್ ಗೌಡ ಮಾತನಾಡಿ, ಪಟ್ಟಣದಲ್ಲಿ ಅಂಬೇಡ್ಕರ್ ಭವನದ ಕಾಮಗಾರಿ ದಶಕದಿಂದ ನನೆಗುದಿಗೆ ಬಿದ್ದಿದೆ. ಇದರಿಂದ ಬಡವರಿಗೆ ಮದುವೆ ಮುಂತಾದ ಸಮಾರಂಭಗಳನ್ನು ಮಾಡಲು ಸಾಧ್ಯವಾಗದೇ ತೊಂದರೆ ಅನುಭವಿಸುವಂತಾಗಿದೆ. ಇದನ್ನು ಪೂರ್ಣಗೊಳಿಸಲು ಸಚಿವರು ಕ್ರಮ ಕೈಗೊಳ್ಳಬೇಕು. ತಾಲ್ಲೂಕಿನಲ್ಲಿ ನಿರುದ್ಯೋಗಿಗಳ ಸಮಸ್ಯೆ ಹೆಚ್ಚಿದ್ದು ಕೈಗಾರಿಕಾ ಪ್ರದೇಶ ತೆರೆಯಬೇಕು. ರಸ್ತೆ ಮತ್ತು ಅರ್ಧಕ್ಕೆ ನಿಂತಿರುವ ಸರ್ಕಾರಿ ಕಟ್ಟಡ ಪೂರ್ಣಗೊಳಿಸಲು ಅನುದಾನ ನೀಡುವಂತೆ ಮನವಿ ಮಾಡಿದರು. ಸಂಸದ ಶ್ರೇಯಸ್ ಪಟೇಲ್, ತಹಶೀಲ್ದಾರ್ ಕೆ.ಸಿ ಸೌಮ್ಯ, ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಸೋಮಶೇಖರ್, ಛಲವಾದಿ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಪೃಥ್ವಿರಾಜ್, ಮುಖಂಡರಾದ ಬಿ.ಸಿ. ರಾಜೇಶ್, ಎಸ್.ಎಲ್. ಗಣಪತಿ, ನಾಗರಾಜ್, ನಿಂಗರಾಜ್ ಇನ್ನಿತರರು ಉಪಸ್ಥಿತರಿದ್ದರು.
ಬಿಜೆಪಿಯವರು ಸರ್ಕಾರ ಬೀಳಿಸಲು ಯತ್ನಿಸುತ್ತಿದ್ದಾರೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ ಎಲ್ಲರೂ ಒಗ್ಗಟ್ಟಾಗಿರಬೇಕು ಹುಷಾರಾಗಿರಬೇಕು ಎಂದು ಹೇಳಿದ್ದಾರೆ. ಗಡಿಯಲ್ಲಿ ಇರುವ ಸೈನಿಕರು ಮಲಗಲು ಆಗುವುದಿಲ್ಲ. ಹುಷಾರಾಗಿ ಇರಬೇಕು. ಮೊದಲ ದಿನದಿಂದಲೇ ಇದು ಪ್ರಾರಂಭವಾಗಿದೆ. ಮುಂದೆ ಕೂಡ ಇರುತ್ತದೆ. ಅವರು ಹೇಳಿದ್ದರಲ್ಲಿ ಸತ್ಯಾಂಶ ಇದೆ ಎಂದರು. ಸರ್ಕಾರ ಬೀಳಿಸುವ ಪ್ರಯತ್ನ ಇದ್ದೇ ಇರುತ್ತದೆ. ಅದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ಅವರು ಪ್ರಯತ್ನ ಮಾಡಿಯೇ ಮಾಡುತ್ತಾರೆ. ಬೇರೆ ರಾಜ್ಯದಲ್ಲಿ ಮಾಡಿರುವ ಉದಾಹರಣೆಗಳು ಸಾಕಷ್ಟಿವೆ. ಇಲ್ಲಿಯೂ ಮಾಡಲು ಪ್ರಯತ್ನ ಮಾಡುತ್ತಾರೆ. ನಾವು ಹುಷಾರಾಗಿ ಇರಬೇಕು ಅಷ್ಟೇ ಎಂದರು.