
ರಾಮನಗರ: ತಮ್ಮನ್ನು ಸರ್ಕಾರಿ ನೌಕರರು ಎಂದು ಪರಿಗಣಿಸುವುದು. ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವುದಕ್ಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಕರ್ನಾಟಕ ರಾಜ್ಯ ಪೌರ ನೌಕರರ ಸಂಘವು, ತೋಳಿಗೆ ಕಪ್ಪುಪಟ್ಟಿ ಧರಿಸಿ ಕೆಲಸ ಮಾಡುವ ಮೂಲಕ ಸಾಂಕೇತಿಕ ಪ್ರತಿಭಟನೆ ಆರಂಭಿಸಿದೆ.

j3tvkannada
ಬೇಡಿಕೆ ಸಲ್ಲಿಕೆ: ‘ಸಂಘದ ಪ್ರಮುಖ ಬೇಡಿಕೆಗಳು ಹಾಗೂ ಕಾರ್ಯಕಾರಣಿಯಲ್ಲಿ ಕೈಗೊಂಡ ನಿರ್ಣಯಗಳನ್ನು ಪೌರಾಡಳಿತ ನಿರ್ದೇಶನಾಲಯಕ್ಕೆ ಸಲ್ಲಿಸಿದ್ದೇವೆ. ಅದರ ಬೆನ್ನಲ್ಲೇ ರಾಜ್ಯದಾದ್ಯಂತ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಪೌರ ನೌಕರರು ಕಪ್ಪುಪಟ್ಟಿ ಧರಿಸಿ ಕೆಲಸ ಮಾಡುವ ಮೂಲಕ ಸಾಂಕೇತಿಕವಾಗಿ ಪ್ರತಿಭಟನೆ ಶುರು ಮಾಡಿದ್ದೇವೆ’ ಎಂದು ಸಂಘದ ರಾಜ್ಯ ಉಪಾಧ್ಯಕ್ಷ ಆರ್. ನಾಗರಾಜು ರವರು ಇದನ್ನು ತಿಳಿಸಿದರು. ‘ನಮ್ಮ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸುವಂತೆ ಪೌರಾಡಳಿತ ಸಚಿವರು ಮತ್ತು ಉನ್ನತ ಅಧಿಕಾರಿಗಳಿಗೆ ಹಲವು ವರ್ಷಗಳಿಂದ ಒತ್ತಾಯಿಸುತ್ತಲೇ ಬಂದಿದ್ದೇವೆ. ಲೆಕ್ಕವಿಲ್ಲದಷ್ಟು ಸಲ ಮನವಿ ಸಲ್ಲಿಸಿದ್ದೇವೆ. ಆದರೂ, ಸರ್ಕಾರ ಸ್ಪಂದಿಸಿಲ್ಲ. ಪೌರ ನೌಕರರ ವಿಷಯದಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಲೇ ಬಂದಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
ಮೀನಮೇಷ ಯಾಕೆ?: ‘ಹವಾನಿಯಂತ್ರಿತ ಕೊಠಡಿಯಲ್ಲಿ ಕುಳಿತು ಕೆಲಸ ಮಾಡುವವರಿಗೆ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ನಗದು ರಹಿತ ಚಿಕಿತ್ಸೆ ಪಡೆಯುವ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸರ್ಕಾರ ಜಾರಿ ಮಾಡಿದೆ. ಮಳೆ, ಗಾಳಿ, ಬಿಸಿಲು, ಸಾಂಕ್ರಾಮಿಕ ರೋಗಗಳನ್ನು ಲೆಕ್ಕಿಸದೆ ಬೀದಿ ಗುಡಿಸುವವರಿಗೆ, ಕಸ ಎತ್ತಿ ವಿಲೇವಾರಿ ಮಾಡುವವರಿಗೆ, ಯುಜಿಡಿ ಕೆಲಸಗಾರರು ಸೇರಿದಂತೆ ತಳಮಟ್ಟದಲ್ಲಿ ಕೆಲಸ ಮಾಡುವ ನೌಕರರಿಗೆ ಯೋಜನೆ ಜಾರಿಗೊಳಿಸಲು ಸರ್ಕಾರ ಮೀನಮೇಷ ಎಣಿಸುತ್ತಿದೆ’ ಎಂದು ನಾಗರಾಜ್ ಅವರು ನೋವಿನಿಂದ ನುಡಿದರು.
ಸಂಘದ ಬೇಡಿಕೆಗಳೇನು?
ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ನೀರು ಸರಬರಾಜು ಸಹಾಯಕರು ವಾಹನ ಚಾಲಕರು ಬೀದಿದೀಪ ನಿರ್ವಹಣೆಗಾರರು ಲೋಡರ್ಸ್ ಉದ್ಯಾನ ನಿರ್ವಹಣೆಗಾರರು ಕಾವಲುಗಾರರು ಸ್ಯಾನಿಟರಿ ಮೇಲ್ವಿಚಾರಕರರು ದಿನಗೂಲಿ ಮತ್ತು ಕ್ಷೇಮಾಭಿವೃದ್ಧಿ ನೌಕರರು ಸೇರಿದಂತೆ ವಿವಿಧ ವೃಂದಗಳಲ್ಲಿ ಇರುವವರನ್ನು ಕಾಯಂ ಮಾಡಬೇಕು.
ಪೌರ ಕಾರ್ಮಿಕರಿಗೆ ಸ್ಥಳೀಯ ಸಂಸ್ಥೆಗಳೇ ತಮ್ಮ ನಿಧಿಯಿಂದ ವೇತನ ಭರಿಸಬೇಕೆಂಬ ಆದೇಶ ರದ್ದುಪಡಿಸಿ ಸರ್ಕಾರದ ಎಸ್ಎಫ್ಸಿ (ರಾಜ್ಯ ಹಣಕಾಸು ಆಯೋಗ) ಮುಕ್ತನಿಧಿಯಿಂದ ವೇತನ ಪಾವತಿಸಬೇಕು.
ಐ.ಪಿ.ಡಿ ಸಾಲಪ್ಪ ವರದಿ ಜಾರಿಗೊಳಿಸಬೇಕು. ಗ್ರಾಮ ಪಂಚಾಯಿತಿ ನೌಕರರಂತೆ ಪೌರ ನೌಕರರನ್ನು ಸಹ ಸರ್ಕಾರಿ ನೌಕರರು ಎಂದು ಪರಿಗಣಿಸಿ ಎಲ್ಲಾ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕು.