
ಕೊಪ್ಪಳ : ಪಟ್ಟಣದಲ್ಲಿ ಸುಸಜ್ಜಿತ ಇಂದಿರಾ ಕ್ಯಾಂಟೀನ್ ನಿರ್ಮಿಸಿ ವರ್ಷ ಗತಿಸಿದೆ. ಆದರೆ ಈವರೆಗೆ ಉದ್ಘಾಟನೆ ಭಾಗ್ಯ ಕಂಡಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಕ್ಷೇತ್ರದಲ್ಲೂ ಕಾಂಗ್ರೆಸ್ ಶಾಸಕರು ಇದ್ದರೂ ಕ್ಯಾಂಟಿನ್ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿಲ್ಲ.

j3tvkannada
ಪಟ್ಟಣದ ಎಪಿಎಂಸಿ ಆವರಣದಲ್ಲಿ ಇಂದಿರಾ ಕ್ಯಾಂಟಿನ್ ನಿರ್ಮಿಸಲಾಗಿದೆ. ಕ್ಯಾಂಟೀನ್ ಅಡುಗೆ ಕೊಠಡಿಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಅಗತ್ಯ ಉಪಕರಣಗಳನ್ನು ಅಳವಡಿಸಿ ವರ್ಷಗಳು ಕಳೆದಿದ್ದು, ಬಳಕೆ ಮಾಡದ್ದರಿಂದ ಉಪಕರಣಗಳು ದೂಳಿನಿಂದ ಆವೃತವಾಗಿವೆ.ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ‘ಹಸಿವು ಮುಕ್ತ ಕರ್ನಾಟಕ ಯೋಜನೆ’ ಅಡಿ ತಾಲ್ಲೂಕಿಗೆ ಒಂದರಂತೆ ಇಂದಿರಾ ಕ್ಯಾಂಟಿನ್ ಅನ್ನು 2018ರಲ್ಲಿ ಆರಂಭಿಸಿತು. ಇದರ ಮುಖ್ಯ ಉದ್ದೇಶ ಬಡ ಜನರಿಗೆ ಕಡಿಮೆ ದರದಲ್ಲಿ ಹಸಿವು ನೀಗಿಸುವುದಾಗಿದೆ. ಬೆಳಿಗ್ಗೆ ₹5ಕ್ಕೆ ಉಪಾಹಾರ, ಮಧ್ಯಾಹ್ನ ಮತ್ತು ರಾತ್ರಿ ₹10ಕ್ಕೆ ಊಟ ಒದಗಿಸಲಾಗುತ್ತಿದೆ.
ಪಟ್ಟಣ ಪಂಚಾಯಿತಿ ಮತ್ತು ಕ್ಷೇತ್ರದ ಶಾಸಕರು ಆದಷ್ಟು ಬೇಗ ಇಂದಿರಾ ಕ್ಯಾಂಟಿನ್ ಪ್ರಾರಂಭಿಸಲು ಇಚ್ಛಾಶಕ್ತಿ ತೋರಿಸಬೇಕು. ಇದರಿಂದ ನಿತ್ಯ ಪಟ್ಟಣಕ್ಕೆ ಬರುವ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮತ್ತು ಗ್ರಾಮೀಣ ಭಾಗದ ಬಡ ಕೂಲಿ ಕಾರ್ಮಿಕರಿಗೆ ಕಡಿಮೆ ದರದಲ್ಲಿ ಉಪಾಹಾರ ಮತ್ತು ಊಟ ದೊರೆಯುವುದು ಎಂದು ನಿಟ್ಟಾಲಿ ಗ್ರಾಮದ ಕಟ್ಟಡ ಕಾರ್ಮಿಕ ಹರೀಶ್ ತಿಳಿಸಿದರು.