
ಚಿತ್ರದುರ್ಗ: ಡಿಸೆಂಬರ್ 2027ರ ಒಳಗೆ ದಾವಣಗೆರೆ-ಚಿತ್ರದುರ್ಗ-ಬೆಂಗಳೂರು ನೇರ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಸಂಸದ ಗೋವಿಂದ ಕಾರಜೋಳ ಹೇಳಿದರು.

j3tvkannada
ದಾವಣಗೆರೆ-ತುಮಕೂರು ಜಿಲ್ಲೆಗಳ ವ್ಯಾಪ್ತಿಯಲ್ಲಿ ನೇರ ರೈಲು ಮಾರ್ಗ ನಿರ್ಮಾಣ ಕಾಮಗಾರಿ ಚುರುಕಿನಿಂದ ನಡೆಯುತ್ತಿದೆ. ಆದರೆ ಚಿತ್ರದುರ್ಗ ಭಾಗದಲ್ಲಿ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ರೈಲು ಮಾರ್ಗ ನಿರ್ಮಿಸಲು ಭೂಮಿ ಸ್ವಾಧೀನ ಮಾಡಿಕೊಡುವ ಜವಾಬ್ದಾರಿ ರಾಜ್ಯ ಸರ್ಕಾರದ್ದು. ಭೂ ಸ್ವಾಧೀನ ಪ್ರಕ್ರಿಯೆ ವಿಳಂಬವಾಗುತ್ತಿದೆ. ಶೀಘ್ರವಾಗಿ ಭೂ ಸ್ವಾಧೀನ ಪ್ರಕ್ರಿಯೆ ಮುಗಿಸುವಂತೆ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿಗೆ ಸೂಚನೆ ನೀಡಲಾಗಿದೆ ಎಂದರು.
ದೇಶದಲ್ಲಿ ರಕ್ಷಣಾ ಇಲಾಖೆಯಲ್ಲಿ 14 ಲಕ್ಷ ನೌಕರರಿದ್ದಾರೆ. ಅದನ್ನು ಬಿಟ್ಟರೆ ರೈಲ್ವೆ ಇಲಾಖೆಯಲ್ಲಿ 12.50 ಲಕ್ಷ ನೌಕರರಿದ್ದಾರೆ. ದೇಶದ ತುಂಬ ರೈಲು ಜಾಲವಿದ್ದು, ಉದ್ಯೋಗ ಸೃಷ್ಟಿ, ಔದ್ಯೋಗಿಕ ಬೆಳವಣಿಗೆಗೆ ಸಹಕಾರಿಯಾಗಿದೆ. ಮುಂದಿನ 5 ವರ್ಷಗಳಲ್ಲಿ ನರೇಂದ್ರ ಮೋದಿ ಅವರು ರೈಲ್ವೆ ಇಲಾಖೆಗೆ ₹ 58 ಲಕ್ಷ ಕೋಟಿ ಬಂಡವಾಳ ಹೂಡುವ ಗುರಿ ಹೊಂದಿದ್ದಾರೆ. 1,300 ರೈಲ್ವೆ ನಿಲ್ದಾಣಗಳನ್ನು ಆಧುನೀಕರಣ ಮಾಡಲಾಗಿದ್ದು, 136 ವಂದೇ ಭಾರತ್ ಎಕ್ಸ್ಪ್ರೆಸ್ ರೈಲುಗಳು ಸಂಚರಿಸುತ್ತಿವೆ. ಚಿಕ್ಕಜಾಜೂರು-ಬಳ್ಳಾರಿ ಮಾರ್ಗದ 170 ಕಿ.ಮೀ. ರೈಲು ಮಾರ್ಗವನ್ನು ದ್ವಿಪಥ ಮಾಡಲು 3,200 ಕೋಟಿ ವೆಚ್ಚದ ಯೋಜನೆ ಸಿದ್ಧಪಡಿಸಲಾಗಿದೆ. ಚಿತ್ರದುರ್ಗದಲ್ಲಿ ರೈಲ್ವೆ ಅಂಡರ್ಪಾಸ್ ನಿರ್ಮಿಸಲು ಕೇಂದ್ರ ಸರ್ಕಾರವೇ ಶೇ 100 ಹಣ ಭರಿಸುವ ಯೋಜನೆ ಮಂಜೂರು ಮಾಡಿಸಿದ್ದೇವೆ ಎಂದು ಹೇಳಿದರು.
ಮಾಜಿ ಪ್ರಧಾನಿ ಅಟಲ್ಬಿಹಾರಿ ವಾಜಪೇಯಿ ಕಾಲದಲ್ಲಿ ಚತುಷ್ಪಥ ಹೆದ್ದಾರಿಗಳಿಗೆ ಚಾಲನೆ ನೀಡಲಾಯಿತು. ಈಗ ನಿತಿನ್ ಗಡ್ಕರಿ ಅವರು ದಿನಕ್ಕೆ 63 ಕಿ.ಮೀ. ರಾಷ್ಟ್ರೀಯ ಹೆದ್ದಾರಿ ನಿರ್ಮಿಸುತ್ತಿದ್ದಾರೆ. ಅವರು ಮುಂದಿನ ದಿನಗಳಲ್ಲಿ ಅಮೆರಿಕದ ರಸ್ತೆಗಳನ್ನೂ ಮೀರಿಸುವ ರಸ್ತೆ ನಿರ್ಮಿಸುವ ಗುರಿ ಹೊಂದಿದ್ದಾರೆ. ರೈಲ್ವೆ ಅಂಡರ್ಪಾಸ್ಗಳನ್ನು ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಅಂಡರ್ಪಾಸ್ ಕೆಳಗೆ ಮಳೆಗಾಲದಲ್ಲಿ ನೀರು ನಿಲ್ಲುವುದರಿಂದ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಇಂತಹ ಕಡೆ ಮೇಲ್ವೇತುವೆ ನಿರ್ಮಿಸಬೇಕು. ರೈಲ್ವೆ ಸಚಿವ ಸೋಮಣ್ಣ ನಮ್ಮ ರಾಜ್ಯದವರೇ ಆಗಿರುವುದರಿಂದ ಹೆಚ್ಚು ನೆರವು ಪಡೆದುಕೊಳ್ಳಬೇಕು ಎಂದು ಶಾಸಕ ಎಂ. ಚಂದ್ರಪ್ಪ ಹೇಳಿದರು. ಪುರಸಭೆ ಅಧ್ಯಕ್ಷ ವಿಜಯಸಿಂಹ ಕಾಟ್ರೋತ್, ಉಪಾಧ್ಯಕ್ಷೆ ನಾಗರತ್ನಾ ವೇದಮೂರ್ತಿ, ಮೈಸೂರು ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕ ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ, ಹಿರಿಯ ವಾಣಿಜ್ಯ ವ್ಯವಸ್ಥಾಪಕ ಜೆ.ಲೋಹಿತೇಶ್ವರ್, ರೈಲ್ವೆ ಇಲಾಖೆಯ ಅಧಿಕಾರಿಗಳು ಇದ್ದರು.