
ಗುಂಡ್ಲುಪೇಟೆ: ತಾಲ್ಲೂಕಿನ ತೆರಕಣಾಂಬಿ ಹೋಬಳಿ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಸುರಿದ ಬಿರುಗಾಳಿ ಸಹಿತ ಜೋರು ಮಳೆಗೆ ನೆಲಕಚ್ಚಿದ ಬಾಳೆ ಬೆಳೆಯ ಜಮೀನುಗಳಿಗೆ ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಭೇಟಿ ನೀಡಿ ಪರಿಶೀಲಿಸಿ, ಬೆಳೆ ಹಾನಿ ಸಮೀಕ್ಷೆ ನಡೆಸಿದರು.

j3tvkannada
ಸೋಮನಪುರ, ಶೀಲವಂತಪುರ, ಕೆ.ಕೆ.ಹುಂಡಿ, ಕೊಡಸೋಗೆ, ಉಲ್ದಾಣ, ಮಾರಿಹೊಸಹಳ್ಳಿ ಸೇರಿದಂತೆ ವಿವಿಧೆಡೆ ಹಲವು ಮಂದಿ ರೈತರ ಜಮೀನುಗಳಿಗೆ ಭೇಟಿ ನೀಡಿದ ತೋಟಗಾರಿಕೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ಸಮೀಕ್ಷೆ ನಡೆಸಿ ತೋಟಗಾರಿಕೆಯ ಬಾಳೆ ಬೆಳೆ ಯಾವ ಪ್ರಮಾಣದಲ್ಲಿ ನೆಲಕಚ್ಚಿ, ನಷ್ಟ ಉಂಟಾಗಿದೆ ಎಂದು ಸ್ಥಳ ಪರಿಶೀಲಿಸಿ ಮಾಹಿತಿ ಕಲೆ ಹಾಕಿದರು.
ಈ ಕುರಿತು ತೋಟಗಾರಿಕೆ ಇಲಾಖೆ ಅಧಿಕಾರಿ ಕುಮಾರ್.ಬಿ ಮಾತನಾಡಿ, ಸುಮಾರು 50 ಹೆಕ್ಟರ್ ಪ್ರದೇಶದಲ್ಲಿ ಹಾನಿಯಾಗಿದೆ. ಈ ಬಗ್ಗೆ ಸ್ಥಳೀಯ ಶಾಸಕರು, ತಹಶೀಲ್ದಾರ್ ಮತ್ತು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಸರ್ಕಾರದ ಮಾರ್ಗಸೂಚಿಯ ಅನ್ವಯ ಪ್ರಕೃತಿ ವಿಕೋಪದಿಂದ ಹಾನಿಯಾದ ಬೆಳೆಗಳಿಗೆ ಸೂಕ್ತ ಪರಿಹಾರವನ್ನು ಕೊಡಲಾಗುವುದು ಎಂದು ತಿಳಿಸಿದರು. ಕಂದಾಯ ಇಲಾಖೆ ಅಧಿಕಾರಿ ಮಹೇಶ್, ಗೋವರ್ಧನ್ ಹಾಜರಿದ್ದರು.